ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಕಡಲೆ ಮಾರಾಟ: ರೈತರ ಪರ ಕೇಂದ್ರಕ್ಕೆ ಸಿದ್ದರಾಮಯ್ಯ ಪತ್ರ
x

ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಕಡಲೆ ಮಾರಾಟ: ರೈತರ ಪರ ಕೇಂದ್ರಕ್ಕೆ ಸಿದ್ದರಾಮಯ್ಯ ಪತ್ರ

ಧಾರವಾಡ, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸುಮಾರು 6.27 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಡಲೆ ಬೆಳೆಯಲಾಗಿದೆ. ಆದರೆ, ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ.


Click the Play button to hear this message in audio format

ರಾಜ್ಯದ ಪ್ರಮುಖ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ (APMC) ಕಡಲೆ (Bengal Gram) ಬೆಲೆ ಪಾತಾಳಕ್ಕೆ ಕುಸಿದಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆ (MSP) ಪ್ರತಿ ಕ್ವಿಂಟಲ್‌ಗೆ 5,875 ರೂ.ಗಳಾಗಿದ್ದರೆ, ಪ್ರಸ್ತುತ ಮಾರುಕಟ್ಟೆಯಲ್ಲಿ 800 ರಿಂದ 1,200 ರೂ.ಗಳಷ್ಟು ಕಡಿಮೆ ದರಕ್ಕೆ ಮಾರಾಟವಾಗುತ್ತಿದೆ. ಜನವರಿ-ಮಾರ್ಚ್ ಅವಧಿಯಲ್ಲಿ ಸುಗ್ಗಿ ಕಾಲ ಉತ್ತುಂಗದಲ್ಲಿರುವುದರಿಂದ, ಮಾರುಕಟ್ಟೆಯ ಕುಸಿತ ತಡೆಯಲು ತಕ್ಷಣವೇ ಮಧ್ಯಪ್ರವೇಶಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಸಮಸ್ಯೆ ಕುರಿತು ಅವರು ಕೇಂದ್ರ ಕೃಷಿ ಸಚಿವ ಶಿವರಾಜ್​ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿದ್ದಾರೆ.


6.27 ಲಕ್ಷ ಹೆಕ್ಟೇರ್ ಬೆಳೆಗಾರರ ಆತಂಕ

ಧಾರವಾಡ, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸುಮಾರು 6.27 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಡಲೆ ಬೆಳೆಯಲಾಗಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ರೈತರು ಕಂಗಾಲಾಗಿದ್ದಾರೆ. ಮಾರುಕಟ್ಟೆಯಲ್ಲಿ ಬೆಲೆ ಕುಸಿತವನ್ನು ತಡೆಯಲು 'ಬೆಲೆ ಬೆಂಬಲ ಯೋಜನೆ' (PSS) ಅಡಿಯಲ್ಲಿ ನಾಫೆಡ್ (NAFED) ಮತ್ತು ಎನ್‌ಸಿಸಿಎಫ್ (NCCF) ಮೂಲಕ ಕೂಡಲೇ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ರಾಜ್ಯ ಸರ್ಕಾರ ಕೇಂದ್ರವನ್ನು ಆಗ್ರಹಿಸಿದೆ. ಖರೀದಿ ಪ್ರಕ್ರಿಯೆಗೆ ಅಗತ್ಯವಾದ ಅಧಿಸೂಚನೆ ಮತ್ತು ಲಾಜಿಸ್ಟಿಕ್ಸ್ ವಿನಾಯಿತಿಗಳನ್ನು ನೀಡಲು ರಾಜ್ಯ ಸಿದ್ಧವಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆಯೂ ಕುಸಿದಿತ್ತು

ಕಡಲೆ ಬೆಳೆಗಾರರ ಈ ದುಸ್ಥಿತಿ ಹೊಸದೇನಲ್ಲ. ಈ ಹಿಂದೆ 2018 ರಲ್ಲಿ ಬೆಲೆಯು ಬೆಂಬಲ ಬೆಲೆಗಿಂತ ಶೇ. 22-25 ರಷ್ಟು ಕುಸಿದಿತ್ತು. ಹಾಗೆಯೇ 2024 ರಲ್ಲಿ ಕೂಡ ಬೆಲೆ ಬೆಂಬಲ ಯೋಜನೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ವಿಳಂಬ ಮಾಡಿದ್ದರಿಂದ ರೈತರು ಅನಿವಾರ್ಯವಾಗಿ ಸಂಕಷ್ಟದ ಮಾರಾಟಕ್ಕೆ ಮುಂದಾಗಿದ್ದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಮನ್ವಯದ ಕೊರತೆಯಿಂದಾಗಿ ಪ್ರತಿ ವರ್ಷವೂ ರೈತರು ಬೀದಿಗೆ ಬಂದು ಪ್ರತಿಭಟನೆ ನಡೆಸುವಂತಾಗಿದೆ. ಜನವರಿಯಿಂದ ಮಾರ್ಚ್ ವರೆಗೆ ಹೆಚ್ಚಿನ ಪ್ರಮಾಣದ ಕಡಲೆ ಮಾರುಕಟ್ಟೆಗೆ ಬರುವುದರಿಂದ, ಕೂಡಲೇ ಖರೀದಿ ಕೇಂದ್ರಗಳನ್ನು ತೆರೆಯದಿದ್ದರೆ ಮಾರುಕಟ್ಟೆ ಸಂಪೂರ್ಣ ಕುಸಿಯುವ ಭೀತಿ ಎದುರಾಗಿದೆ.

ಸಿಎಂ ಕೇವಲ ಪತ್ರ ವ್ಯವಹಾರ ನಡೆಸಿದರೆ ಸಾಲದು, ಕೇಂದ್ರದ ಮೇಲೆ ಒತ್ತಡ ಹೇರಿ ಕೂಡಲೇ ಖರೀದಿ ಕೇಂದ್ರಗಳನ್ನು ಕಾರ್ಯಾರಂಭ ಮಾಡಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿವೆ. ಬೆಲೆ ಕುಸಿತದಿಂದಾಗಿ ಹೂಡಿಕೆ ಮಾಡಿದ ಬಂಡವಾಳವೂ ವಾಪಸ್ ಬರುತ್ತಿಲ್ಲ ಎಂದು ಬೆಳೆಗಾರರು ಅಳಲು ತೋಡಿಕೊಂಡಿದ್ದಾರೆ. ಸರ್ಕಾರಿ ಅಂಕಿಅಂಶಗಳ ಪ್ರಕಾರ, ನಿಗದಿತ ಸಮಯದಲ್ಲಿ ಮಧ್ಯಪ್ರವೇಶ ಮಾಡದಿದ್ದರೆ ಲಕ್ಷಾಂತರ ರೈತ ಕುಟುಂಬಗಳ ಜೀವನೋಪಾಯಕ್ಕೆ ಹೊಡೆತ ಬೀಳಲಿದೆ.

Read More
Next Story