
ಬೆಂಗಳೂರು ಚಳಿ
ರಾಜ್ಯದಲ್ಲಿ ಮೈಕೊರೆಯುವ ಚಳಿ; ಹಲವು ಜಿಲ್ಲೆಗಳಲ್ಲಿ ತೀವ್ರ ಶೀತದ ಅಲೆ ಸಾಧ್ಯತೆ
ಹವಾಮಾನ ಇಲಾಖೆಯು ಮುಂಬರುವ 2 ದಿನಗಳಲ್ಲಿ ರಾಜ್ಯದಾದ್ಯಂತ ತಾಪಮಾನದಲ್ಲಿ ಗಮನಾರ್ಹ ಇಳಿಕೆಯಾಗುವ ಮುನ್ಸೂಚನೆ ನೀಡಿದೆ.
ರಾಜ್ಯದಾದ್ಯಂತ ಹಲವು ದಿನಗಳಿಂದ ಶುಷ್ಕ ವಾತಾವರಣ ಮುಂದುವರಿದಿದ್ದು, ಇದರ ಪರಿಣಾಮವಾಗಿ ಮೈಕೊರೆಯುವ ಚಳಿ ಹೆಚ್ಚುತ್ತಿದೆ. ಹವಾಮಾನ ಇಲಾಖೆಯು ಮುಂಬರುವ ದಿನಗಳಲ್ಲಿ ತಾಪಮಾನದಲ್ಲಿ ಇಳಿಕೆಯಾಗುವ ಮುನ್ಸೂಚನೆ ನೀಡಿದೆ.
ಮುಂದಿನ 2 ದಿನಗಳವರೆಗೆ ರಾಜ್ಯದಾದ್ಯಂತ ತಾಪಮಾನದಲ್ಲಿ ಗಮನಾರ್ಹ ಇಳಿಕೆಯಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಕೆಲವು ಪ್ರದೇಶಗಳಲ್ಲಿ ತೀವ್ರ ಶೀತದ ಅಲೆಗಳು ಉಂಟಾಗುವ ಸಾಧ್ಯತೆ ಅಧಿಕವಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರ್ಗಿ, ವಿಜಯಪುರ, ರಾಯಚೂರು, ಯಾದಗಿರಿ (ಈ ಜಿಲ್ಲೆಗಳು ಉತ್ತರ ಒಳನಾಡಿನಲ್ಲಿವೆ), ಹಾಗೆಯೇ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿ ಮತ್ತು ವಿಜಯನಗರದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ತೀವ್ರ ಶೀತದ ಅಲೆಯ ಪರಿಣಾಮ ಗೋಚರವಾಗಲಿದೆ ಎಂದು ಇಲಾಖೆ ತಿಳಿಸಿದೆ.
ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ಕಂಡುಬರುತ್ತಿದ್ದ ಒಣ ಹವೆಯ ವಾತಾವರಣ ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಮುಂದುವರಿಯಲಿದೆ.
ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇದು ಇಂದೂ ಮುಂದುವರಿಯಲಿದೆ ಎಂದು ತಿಳಿಸಿದೆ.
ಬೆಂಗಳೂರಿನ ಹವಾಮಾನ ಹೇಗಿದೆ?
ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಂಜು ಮುಸುಕಿದ ವಾತಾವರಣವಿದ್ದು, ಚಳಿಯ ಪ್ರಮಾಣ ಏರಿಕೆಯಾಗುತ್ತಿದೆ. ನಗರದಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ ಸುಮಾರು 8 ಕಿ.ಮೀ ಇರಲಿದೆ. ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 15ಸೆಲ್ಸಿಯಸ್ ಇರುವ ಸಾಧ್ಯತೆಯಿದೆ.

