
ಶೃಂಗೇರಿ ಬಳಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ; ಮಂಗಳೂರು ನಡುವಿನ ಸಂಪರ್ಕ ಕಡಿತ
ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭಾರೀ ಪ್ರಮಾಣದ ಗುಡ್ಡ ಕುಸಿತ ಸಂಭವಿಸಿದ್ದು, ಇದರಿಂದ ಶೃಂಗೇರಿ-ಮಂಗಳೂರು ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ಕರ್ನಾಟಕದ ಮಲೆನಾಡು ಭಾಗವಾದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಮತ್ತು ಬಿರುಗಾಳಿಯ ಆರ್ಭಟ ಮುಂದುವರಿದಿದ್ದು, ಸಾಮಾನ್ಯ ಜನಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ.
ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭಾರೀ ಪ್ರಮಾಣದ ಗುಡ್ಡ ಕುಸಿತ ಸಂಭವಿಸಿದ್ದು, ಇದರಿಂದ ಶೃಂಗೇರಿ-ಮಂಗಳೂರು ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭೂಮಿಯ ಸ್ಥಿರತೆ ಕಡಿಮೆಯಾಗಿದ್ದು, ನೆಮ್ಮಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಒಂದೇ ಸ್ಥಳದಲ್ಲಿ ಪದೇಪದೇ ಗುಡ್ಡ ಕುಸಿಯುತ್ತಿದೆ. ಭಾರೀ ಪ್ರಮಾಣದ ಮಣ್ಣು ಮತ್ತು ಕಲ್ಲುಬಂಡೆಗಳು ರಸ್ತೆಯ ಮೇಲೆ ಉರುಳಿಬಿದ್ದಿರುವುದರಿಂದ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ರಸ್ತೆಯ ಬದಿಗೆ ಕಟ್ಟಲಾಗಿದ್ದ ಕಬ್ಬಿಣದ ತಡೆಗೋಡೆಗಳು ಸಹ ಕುಸಿತಗೊಂಡಿದ್ದು, ಗುಡ್ಡ ಕುಸಿತದ ತೀವ್ರತೆ ಸ್ಪಷ್ಟವಾಗಿ ತೋರಿಸುತ್ತಿವೆ.
ಸ್ಥಳೀಯ ಪೊಲೀಸರು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಗ್ರಾಮಸ್ಥರು ಮಳೆಯ ಮಧ್ಯೆಯೇ ರಸ್ತೆಯ ಮೇಲಿನ ಮಣ್ಣು ಮತ್ತು ಕಲ್ಲುಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ, ಮಳೆಯ ತೀವ್ರತೆಯಿಂದಾಗಿ ಈ ಕಾರ್ಯಾಚರಣೆಗೆ ತೀವ್ರ ತೊಡಕಾಗುತ್ತಿದೆ. ಒಂದು ವೇಳೆ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾದರೆ ಇನ್ನಷ್ಟು ಭೂಕುಸಿತ ಸಂಭವಿಸುವ ಆತಂಕ ಸ್ಥಳೀಯರಲ್ಲಿ ಮನೆಮಾಡಿದೆ.
ವಿದ್ಯುತ್ ಪೂರೈಕೆಗೆ ಭಾರಿ ಅಡಚಣೆ
ಗಾಳಿಯ ಜೊತೆಗೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಶೃಂಗೇರಿ ತಾಲೂಕಿನಾದ್ಯಂತ ಹಲವು ಕಡೆ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಇದರಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದ್ದು, ಹಲವು ಗ್ರಾಮೀಣ ಪ್ರದೇಶಗಳು ಕತ್ತಲಿನಲ್ಲಿ ಮುಳುಗಿವೆ. ವಿದ್ಯುತ್ ಸಂಪರ್ಕವಿಲ್ಲದೆ ಸ್ಥಳೀಯರ ದೈನಂದಿನ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗಿದೆ. ರಾತ್ರಿಯಿಡೀ ಮಳೆ ಮುಂದುವರಿದಿರುವುದರಿಂದ ವಿದ್ಯುತ್ ಸಂಪರ್ಕ ಪುನರ್ಸ್ಥಾಪನೆಗೆ ಸವಾಲಾಗಿದೆ.
ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್
ಗುಡ್ಡ ಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಶೃಂಗೇರಿ-ಮಂಗಳೂರು ಮಾರ್ಗದ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಈ ಮಾರ್ಗವು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯನ್ನು ಕರಾವಳಿಯ ಮಂಗಳೂರಿನೊಂದಿಗೆ ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದ್ದು, ಪ್ರತಿದಿನ ಸಾವಿರಾರು ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ. ಆದರೆ, ಗುಡ್ಡ ಕುಸಿತದಿಂದ ರಸ್ತೆ ಸಂಪೂರ್ಣವಾಗಿ ಮುಚ್ಚಿಹೋಗಿದ್ದು, ಪ್ರಯಾಣಿಕರು ತೀವ್ರ ಪರದಾಡುವಂತಾಗಿದೆ.
ಪೊಲೀಸರು ವಾಹನ ಸವಾರರಿಗೆ ಬದಲಿ ಮಾರ್ಗಗಳನ್ನು ಬಳಸುವಂತೆ ಸೂಚಿಸಿದ್ದಾರೆ. ಆದರೆ, ಬದಲಿ ಮಾರ್ಗಗಳು ತೀರಾ ಕಿರಿದಾಗಿದ್ದು, ಭಾರೀ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಈ ಕಾರಣದಿಂದಾಗಿ, ಶೃಂಗೇರಿಯಿಂದ ಮಂಗಳೂರಿಗೆ ಸರಕು ಸಾಗಾಟ ಮತ್ತು ಪ್ರಯಾಣಿಕರ ಸಂಚಾರಕ್ಕೆ ತೀವ್ರ ತೊಡಕಾಗಿದೆ.
ಕೆವಿಲ್ ಗುಂಡಿ ಬಳಿಕ ಕುಸಿತ
ಇದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೂನ್ 14ರಂದು ಕವಿಕಲ್ ಗಂಡಿ ಬಳಿ ಸಣ್ಣ ಪ್ರಮಾಣದ ಭೂಕುಸಿತ ಸಂಭವಿಸಿತ್ತು. ಚಂದ್ರದ್ರೋಣ ಪರ್ವತ ಶ್ರೇಣಿಯ ಸಾಲಿನಲ್ಲಿ ಈ ಭಾಗದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ, ಮತ್ತಷ್ಟು ಗುಡ್ಡ ಕುಸಿತದ ಆತಂಕ ಸ್ಥಳೀಯರನ್ನು ಕಾಡುತ್ತಿದೆ.