
ಶಿರಾಡಿ ಘಾಟ್ ಭೂಕುಸಿತ ಉಂಟಾಗಿದೆ.
ಶಿರಾಡಿ ಘಾಟ್ನಲ್ಲಿ ಭೂಕುಸಿತ ; ರಾಷ್ಟ್ರೀಯ ಹೆದ್ದಾರಿ-75 ರ ಸಂಚಾರ ಸ್ಥಗಿತ
ಮಂಗಳೂರು ಮಾರ್ಗವಾಗಿ ಬರುವ ವಾಹನ ಸವಾರರು ಕೊಡಗಿನ ಸಂಪಾಜೆ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಭೂ ಕುಸಿತ ಸಂಭವಿಸಿದ್ದು, ಇದರಿಂದ ಶಿರಾಡಿ ಘಾಟ್ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ.
ಸಕಲೇಶಪುರ ತಾಲೂಕಿನ ಹೆಗ್ಗದ್ದೆ-ಮಾರನಹಳ್ಳಿ ಬಳಿ ಭೂ ಕುಸಿತ ಉಂಟಾಗಿದೆ. ಇದರಿಂದ ಬೆಂಗಳೂರು ಹಾಗೂ ಮಂಗಳೂರು ನಡುವಿನ ಪ್ರಯಾಣಕ್ಕೆ ಬದಲಿ ಮಾರ್ಗ ಬಳಸಲು ಜಿಲ್ಲಾಡಳಿತ ಸೂಚಿಸಿದೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೇಲೂರು ಮೂಲಕ ಚಾರ್ಮಾಡಿ ಘಾಟ್ ರಸ್ತೆ ಬಳಸಲು ಸೂಚನೆ ನೀಡಲಾಗಿದೆ. ಮಂಗಳೂರು ಕಡೆಯಿಂದ ಬರುವ ವಾಹನಗಳು ಕೊಡಗಿನ ಸಂಪಾಜೆ ಮಾರ್ಗ ಬಳಸಬೇಕು ಎಂದು ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.
ಭೂಕುಸಿತದ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ಮಾರ್ಗದಲ್ಲಿ ಭಾರೀ ಸಂಚಾರ ದಟ್ಟಣೆಡ ಉಂಟಾಗಿ ವಾಹನ ಸವಾರರು ಪರದಾಡಿದರು. ಸಕಲೇಶಪುರ ಬಳಿ ನೂರಾರು ವಾಹನಗಳು ಸಾಲಾಗಿ ನಿಂತಿದ್ದವು. ಇಡೀ ರಾತ್ರಿ ವಾಹನ ಸವಾರರು ಊಟ, ನೀರು ಇಲ್ಲದೇ ಪರದಾಡಬೇಕಾಯಿತು.
ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಬೀದರ್ನಲ್ಲಿ ಕೂಡ ಮಳೆಯಾಗಲಿದೆ.
ಕೊಡಗಿನಲ್ಲಿ ದಾಖಲೆ ಮಳೆ
ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಪೊನ್ನಂಪೇಟೆ ಹೋಬಳಿ ವ್ಯಾಪ್ತಿಯಲ್ಲಿ 20 ಸೆಂ.ಮೀಗೂ ಅಧಿಕ ಮಳೆಯಾಗಿದೆ. ಕಾನೂರು ಗ್ರಾಮದ ರಸ್ತೆಯು ಮಳೆಯಿಂದಾಗಿ ಜಲಾವೃತಗೊಂಡಿದೆ. ಆದರೆ, ಈ ಗ್ರಾಮಕ್ಕೆ ತೆರಳಲು ಬದಲಿ ಸಂಪರ್ಕ ರಸ್ತೆ ಇದೆ.
ಶೆಟ್ಟಿಗೇರಿ ಮತ್ತು ಹೈಸೂತ್ತೂರು ಮಧ್ಯೆ ಮರ ಬಿದ್ದಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ. ನಾಪೋಕ್ಲು ಹೋಬಳಿಯಲ್ಲಿ 15 ಸೆಂ.ಮೀ ಮಳೆ ಸುರಿದಿರುವುದರಿಂದ ಕಾವೇರಿ ನದಿ ನೀರು ರಸ್ತೆಗೆ ಬಂದು ಹಲವು ಗ್ರಾಮಗಳು ಸಂಪರ್ಕ ಕಡಿದುಕೊಂಡಿವೆ. ಮಳೆ ಮತ್ತು ಗಾಳಿ ಮುಂದುವರಿದಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಗುರುವಾರ ಶಿಕ್ಷಣ ಸಂಸ್ಥೆಗೆ ರಜೆ ಘೋಷಿಸಲಾಗಿದೆ.
ಬೆಳಗಾವಿಯಲ್ಲೂ ಭಾರೀ ಮಳೆ
ಬೆಳಗಾವಿ ಮತ್ತು ಸುತ್ತಮುತ್ತ ಸತತ ನಾಲ್ಕನೇ ದಿನವೂ ನಿರಂತರ ಮಳೆಯಾಗುತ್ತಲೇ ಇದೆ. ಬೆಳಗಾವಿಯಲ್ಲಿ ಮಳೆಯಿಂದಾಗಿ ಹಳೆಯ, ಮಣ್ಣಿನಿಂದ ನಿರ್ಮಿಸಿರುವ ಮನೆಗಳು ಕುಸಿಯಲು ಪ್ರಾರಂಭಿಸಿವೆ. ಮರಗಳು ಉರುಳಿವೆ, ಕೃಷಿ ಬೆಳೆಗಳು ಮುಳುಗಿವೆ. ಬೆಳಗಾವಿಯ ಹೊರವಲಯದಲ್ಲಿರುವ ಕೃಷಿಭೂಮಿಗಳಲ್ಲಿ ಮೆಣಸಿನಕಾಯಿ, ಸಿಹಿ ಗೆಣಸು, ಬೆಂಡೆಕಾಯಿ, ಕಬ್ಬು ಮುಂತಾದ ಬೆಳೆಗಳು ನೀರಿನಲ್ಲಿ ಮುಳುಗಿ ರೈತರಿಗೆ ಭಾರಿ ನಷ್ಟ ಉಂಟು ಮಾಡಿವೆ.