
ರಮೇಶ್ ಬಾಬು, ದಿನೇಶ್ ಅಮಿನ್ಮಟ್ಟು, ಆರತಿ ಕೃಷ್ಣ, ಡಿ.ಜಿ. ಸಾಗರ್
ವಿಧಾನ ಪರಿಷತ್ ನಾಮ ನಿರ್ದೇಶನ ಸ್ಥಾನ; ನಾಲ್ವರ ಹೆಸರು ಅಂತಿಮಗೊಳಿಸಿದ ಸರ್ಕಾರ
ವಿಧಾನ ಪರಿಷತ್ ನಾಮ ನಿರ್ದೇಶನ ಸ್ಥಾನಗಳಿಗೆ ರಾಜ್ಯ ಸರ್ಕಾರವು ಆರತಿ ಕೃಷ್ಣ, ರಮೇಶ್ ಬಾಬು, ದಿನೇಶ್ ಅಮೀನ್ಮಟ್ಟು ಹಾಗೂ ಡಿ.ಜಿ. ಸಾಗರ್ ಅವರ ಹೆಸರನ್ನು ಅಂತಿಮಗೊಳಿಸಿದೆ. ನಾಲ್ಕು ಸ್ಥಾನಗಳಿಗೆ 20ಕ್ಕೂ ಹೆಚ್ಚು ಆಕಾಂಕ್ಷಿಗಳು ಪೈಪೋಟಿ ನಡೆಸಿದ್ದರು.
ರಾಜ್ಯ ವಿಧಾನ ಪರಿಷತ್ನಲ್ಲಿ ಖಾಲಿ ಉಳಿದಿರುವ ನಾಲ್ಕು ಸ್ಥಾನಗಳಿಗೆ ನಾಮ ನಿರ್ದೇಶಿತರ ಹೆಸರನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದ್ದು, ರಾಜ್ಯಪಾಲರ ಅನುಮೋದನೆಗೆ ಕಳುಹಿಸಿಕೊಟ್ಟಿದೆ.
ನಾಲ್ಕು ನಾಮನಿರ್ದೇಶನ ಸ್ಥಾನಗಳಿಗೆ 20ಕ್ಕೂ ಹೆಚ್ಚು ಆಕಾಂಕ್ಷಿಗಳು ಪೈಪೋಟಿ ನಡೆಸಿದ್ದರು. ಕಾಂಗ್ರೆಸ್ ವರಿಷ್ಠರು ಆಕಾಂಕ್ಷಿಗಳ ಪಟ್ಟಿಯನ್ನು ಪರಿಶೀಲಿಸಿ, ನಾಲ್ವರ ಹೆಸರನ್ನು ಅಂತಿಮಗೊಳಿಸಿತ್ತು. ಅದರಂತೆ ಆರತಿ ಕೃಷ್ಣ, ರಮೇಶ್ ಬಾಬು, ದಿನೇಶ್ ಅಮೀನ್ಮಟ್ಟು ಹಾಗೂ ಡಿ.ಜಿ. ಸಾಗರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ರಾಜಭವನಕ್ಕೆ ಕಳುಹಿಸಿಕೊಟ್ಟಿದ್ದಾರೆ.
ಕಾಂಗ್ರೆಸ್ನ ಯು.ಬಿ. ವೆಂಕಟೇಶ್, ಪ್ರಕಾಶ್ ಕೆ. ರಾಥೋಡ್ ಅವರ ಅವಧಿ 2024ರ ಅಕ್ಟೋಬರ್ ತಿಂಗಳಿಗೆ ಪೂರ್ಣಗೊಂಡಿತ್ತು. ಜೆಡಿಎಸ್ ಪಕ್ಷದ ಕೆ.ಎ. ತಿಪ್ಪೇಸ್ವಾಮಿ ಅವರ ಅವಧಿ ಪ್ರಸಕ್ತ ಸಾಲಿನ ಜನವರಿಗೆ ಮುಕ್ತಾಯವಾಗಿತ್ತು. ಇನ್ನು ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲು ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಿದ್ದರಿಂದ ಅವರ ಸ್ಥಾನವೂ ತೆರವಾಗಿತ್ತು. ಈ ನಾಲ್ಕೂ ಸ್ಥಾನಗಳಿಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಸರ್ಕಾರ ಮೀನಾಮೇಷ ಎಣಿಸುತ್ತಿತ್ತು.
ವಿಧಾನ ಪರಿಷತ್ನಲ್ಲಿ ಸರ್ಕಾರದ ಮಸೂದೆಗಳಿಗೆ ಅಂಗೀಕಾರ ಪಡೆಯಲು ಬಹುಮತ ಅನಿವಾರ್ಯವಾಗಿದ್ದ ಹಿನ್ನೆಲೆಯಲ್ಲಿ ನಾಲ್ಕೂ ಸ್ಥಾನಗಳಿಗೆ ಹೆಸರನ್ನು ಅಂತಿಮಗೊಳಿಸಿ, ರಾಜ್ಯಪಾಲರ ಅನುಮೋದನೆಗೆ ಕಳುಹಿಸಿಕೊಡಲಾಗಿದೆ.
ಹೆಸರು ಅಂತಿಮಗೊಳಿಸಿರುವವರಲ್ಲಿ ಆರತಿ ಕೃಷ್ಣ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆಯಾಗಿದ್ದಾರೆ. ರಮೇಶ್ ಬಾಬು ಅವರು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರು ಸಿದ್ದರಾಮಯ್ಯ ಅವರಿಗೆ 2013-18ರವರೆಗೆ ಮಾಧ್ಯಮ ಸಲಹೆಗಾರರಾಗಿದ್ದರು. ಡಿ.ಜಿ. ಸಾಗರ್ ದಲಿತ ಸಂಘರ್ಷ ಸಮಿತಿಯ ನಾಯಕರಾಗಿದ್ದಾರೆ.
ಈ ನಾಲ್ವರ ನೇಮಕದೊಂದಿಗೆ ಪರಿಷತ್ನಲ್ಲಿ ಕಾಂಗ್ರೆಸ್ ಪಕ್ಷದ ಸಂಖ್ಯಾಬಲ 37ಕ್ಕೆ ಏರಿಕೆಯಾಗಲಿದ್ದು, ಬಹುಮತ ಹೊಂದಲಿದೆ. ಸಭಾಪತಿ ಸೇರಿ ಬಿಜೆಪಿ 30, ಜೆಡಿಎಸ್ 7 ಸದಸ್ಯರ ಬಲ ಹೊಂದಿವೆ. ಲಖನ್ ಜಾರಕಿಹೊಳಿ ಪಕ್ಷೇತರ ಸದಸ್ಯರಾಗಿದ್ದಾರೆ.