ವಸತಿ ಇಲಾಖೆ ಅಕ್ರಮ ಮುಚ್ಚಿಹಾಕಲು ಪತ್ರ ರಾಜಕೀಯ: ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ
x

ವಸತಿ ಇಲಾಖೆ ಅಕ್ರಮ ಮುಚ್ಚಿಹಾಕಲು 'ಪತ್ರ ರಾಜಕೀಯ': ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರದ ಬಹುತೇಕ ಎಲ್ಲಾ ಇಲಾಖೆಗಳಲ್ಲಿ ಹಣ ಬಿಡುಗಡೆ ಮಾಡಲು ಆಡಳಿತ ಪಕ್ಷದ ಶಾಸಕರು ಸೇರಿದಂತೆ ಎಲ್ಲಾ ಪಕ್ಷಗಳ ಶಾಸಕರು 'ಹಣ ಕೊಡಬೇಕಿದೆ' ಎಂದು ಕುಮಾರಸ್ವಾಮಿ ಆರೋಪಿಸಿದರು.


ರಾಜ್ಯದಲ್ಲಿ ವಸತಿ ಇಲಾಖೆಯಲ್ಲಿ ನಡೆದಿರುವ ಭಾರಿ ಅಕ್ರಮಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸಚಿವ ಎಚ್.ಕೆ.ಪಾಟೀಲ್ ಬರೆದಿದ್ದಾರೆ ಎನ್ನಲಾದ ಪತ್ರವನ್ನು ತೇಲಿ ಬಿಡಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯದಲ್ಲಿ ಸುಸಜ್ಜಿತ ಆಟೋ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

"ವಸತಿ ಇಲಾಖೆಯಲ್ಲಿ ಏನೆಲ್ಲಾ ಅಕ್ರಮಗಳು ನಡೆದಿವೆ ಎಂಬುದನ್ನು ಜನರು ಹಾದಿಬೀದಿಗಳಲ್ಲಿ ಮಾತನಾಡುತ್ತಿದ್ದಾರೆ. ಹಣ ಕೊಟ್ಟವರಿಗೆ ಮನೆ ಹಂಚಿಕೆ ಮಾಡಲಾಗಿದೆ ಎಂದು ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕರು, ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಅವರು ಹೇಳಿದ್ದಾರೆ. ವಸತಿ ಇಲಾಖೆಯ ಬಗ್ಗೆ ಕೇಳಿಬಂದಿರುವ ಈ ಆರೋಪದ ಬಗ್ಗೆ ನನಗೆ ಆಶ್ಚರ್ಯವಾಗಿಲ್ಲ. ಪಾಟೀಲ್ ಅವರ ಆರೋಪಗಳ ಬಗ್ಗೆಯೂ ನನಗೆ ಅಚ್ಚರಿ ಆಗಿಲ್ಲ. ಇದು ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ," ಎಂದು ಕುಮಾರಸ್ವಾಮಿ ಹೇಳಿದರು.

ರಾಜ್ಯ ಸರ್ಕಾರದ ಬಹುತೇಕ ಎಲ್ಲಾ ಇಲಾಖೆಗಳಲ್ಲಿ ಹಣ ಬಿಡುಗಡೆ ಮಾಡಲು ಆಡಳಿತ ಪಕ್ಷದ ಶಾಸಕರು ಸೇರಿದಂತೆ ಎಲ್ಲಾ ಪಕ್ಷಗಳ ಶಾಸಕರು 'ಹಣ ಕೊಡಬೇಕಿದೆ' ಎಂದು ಕುಮಾರಸ್ವಾಮಿ ಆರೋಪಿಸಿದರು. "ಕೆಲ ಶಾಸಕರು 'ನಿಮ್ಮದೊಂದು ಲೆಟರ್ ಕೊಡಿ‌ ಸರ್, ದುಡ್ಡು ತಗೊಂಡು ಬರ್ತೀವಿ' ಅಂತಾರೆ. ಹೆಸರಿಗೆ ಶಾಸಕರ ಪಾತ್ರವಷ್ಟೇ. ಮಿಕ್ಕಿದ್ದೆಲ್ಲವನ್ನೂ ಮಧ್ಯವರ್ತಿಗಳು ನೋಡಿಕೊಳ್ಳುತ್ತಾರೆ. ಮಧ್ಯವರ್ತಿಗಳು ದುಡ್ಡು ಕೊಟ್ಟು ಹಣ ತರುತ್ತಾರೆ. ಇದು ರಾಜ್ಯದಲ್ಲಿ ಸದ್ಯಕ್ಕೆ ನಡೆಯುತ್ತಿರುವ ಅತ್ಯಂತ ಕೆಟ್ಟ ವ್ಯವಸ್ಥೆಯಾಗಿದೆ," ಎಂದು ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಮನೆ ಎನ್ನುವುದು ಸಮಾಜದಲ್ಲಿ ಪ್ರತಿಯೊಬ್ಬರ ಕನಸು. ಆದರೆ, ಬಡಜನರ ಪಾಲಿಗೆ ಇದೊಂದು ಗಗನ ಕುಸುಮ. ಅಂತಹ ಬಡಜನರಿಂದಲೇ ವಸತಿ ಇಲಾಖೆಯಲ್ಲಿ ಸುಲಿಗೆ ಮಾಡಲಾಗುತ್ತಿದೆ. "ಎಲ್ಲಾ ಇಲಾಖೆಯಲ್ಲೂ ಇದು ನಡೆಯುತ್ತಿದೆ. ಈ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಮುಂದಿನ ಚುನಾವಣೆ ಬರುವವರೆಗೆ ಕಾಯಬೇಕು. ವಿಧಾನಸೌಧದಲ್ಲಿ ಮಧ್ಯವರ್ತಿಗಳ ಅವಶ್ಯಕತೆ ಇಲ್ಲ. ಸಚಿವರುಗಳೇ ಎಲ್ಲಾ ಶುರು ಮಾಡಿಕೊಂಡಿದ್ದಾರೆ. ಆಯಾ ಇಲಾಖೆಗಳಲ್ಲಿ ಅವರೇ 'ರೇಟ್' ಫಿಕ್ಸ್ ಮಾಡಿಕೊಂಡಿದ್ದಾರೆ! ಎಷ್ಟು ಕೊಡಬೇಕು ಅಂತಾ ರೇಟ್ ಕಾರ್ಡ್ ಇದೆ," ಎಂದು ಕೇಂದ್ರ ಸಚಿವರು ಆರೋಪ ಮಾಡಿದರು.

ಎತ್ತಿನಹೊಳೆ ಯೋಜನೆ ವಿಳಂಬ

ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, "ಸುರಂಗ ರಸ್ತೆಯನ್ನು ಬೆಂಗಳೂರಿಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾಡಲಿ. ಬೇಡ ಎಂದವರು ಯಾರು? ನೋಡೋಣ ಯಾವ ಯಾವ ಟನಲ್‌ ರೋಡ್ ಮಾಡ್ತಾರೆ ಅಂತ. ಅವರ ಮಾತುಗಳು ಯಾವುವೂ ನಿಜ ಆಗಲ್ಲ. ಈಗ 2027ಕ್ಕೆ ಎತ್ತಿನಹೊಳೆ ನೀರನ್ನು ಕೋಲಾರಕ್ಕೆ ತರುತ್ತೇವೆ ಎಂದಿದ್ದಾರೆ. ಇನ್ನೂ ಆ ನೀರು ಕಾಡುಮನೆ ಎಸ್ಟೇಟ್‌ನಿಂದ ಮುಂದೆ ಬಂದಿಲ್ಲ. ಈಗಾಗಲೇ 14ರಿಂದ 15 ಸಾವಿರ ಕೋಟಿ ಲೂಟಿ‌ ಆಗಿದೆ," ಎಂದು ಕಿಡಿ ಕಾರಿದರು.

"2013ರಲ್ಲಿ ಇದೇ ಕಾಂಗ್ರೆಸ್ ಸರ್ಕಾರ ಗುದ್ದಲಿ ಪೂಜೆ ಮಾಡಿತ್ತು. ಎರಡೇ ವರ್ಷದಲ್ಲಿ ಚಿಕ್ಕಬಳ್ಳಾಪುರ, ಕೋಲಾರಕ್ಕೆ ನೀರು ಕೊಡ್ತೀವಿ ಎಂದು ಹೇಳಿದ್ದರು. ಎಲ್ಲಿ ಬಂದಿದೆ ನೀರು? 2013ರಿಂದ 2025ಕ್ಕೆ ಬಂದರೂ ಇನ್ನೂ ನೀರಿಲ್ಲ. ಎತ್ತಿನಹೊಳೆ ನೀರು ಕೊಡ್ತೀವಿ ಎಂದು ಹೇಳಿದವರು ಆ ಜಿಲ್ಲೆಗಳಿಗೆ ಬೆಂಗಳೂರು ಕೊಳಚೆ ನೀರು ಬಿಟ್ಟಿದ್ದಾರೆ. ಈಗ ಅಲ್ಲಿನ ರೈತರು ಬೆಳೆಯುವ ತರಕಾರಿಯನ್ನೂ ಯಾರು ಕೊಳ್ಳಬಾರದು, ಆ ರೀತಿ ಅನ್ಯಾಯ ಮಾಡಿದ್ದಾರೆ," ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

"2028ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಡಿಕೆಶಿ ಪ್ರಮಾಣ ವಚನ ಸ್ವೀಕರಿಸುತ್ತಾರಂತೆ" ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, "ಡಿ.ಕೆ.ಶಿವಕುಮಾರ್ ಏನಿದ್ದರೂ ಕನಸು ಕಾಣಬೇಕು ಅಷ್ಟೇ. ಡಿ.ಕೆ.ಶಿವಕುಮಾರ್‌ಗೆ ಕಾಂಗ್ರೆಸ್‌ನಲ್ಲಿ ಯಾರು ಬಿಟ್ಟು ಕೊಡ್ತಾರೆ ಎಂಬುದನ್ನು ನೋಡೋಣ. ನಮ್ಮ ಕೈಯಲ್ಲಿ ಏನು ಇಲ್ಲ, ಎಲ್ಲಾ ಭಗವಂತನ ಕೈಯಲ್ಲಿ ಇದೆ. ನೋಡೋಣ, ಏನಾಗುತ್ತದೋ," ಎಂದು ಹೇಳಿದರು.

ಮೈಷುಗರ್ ಶಾಲೆ ಖಾಸಗೀಕರಣಕ್ಕೆ ಎಚ್‌ಡಿಕೆ ಆಕ್ಷೇಪ

ಮಂಡ್ಯದ ಮೈಷುಗರ್ ಶಾಲೆಯನ್ನು ಕಾಂಗ್ರೆಸ್ ಮುಖಂಡರ ವಿದ್ಯಾಸಂಸ್ಥೆಗೆ ಗುತ್ತಿಗೆಗೆ ನೀಡುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. "ಮೈಷುಗರ್ ಸ್ಕೂಲ್‌ನ್ನು ಮಾದರಿ ಶಾಲೆ ಮಾಡಲು ನಾನು ತಯಾರಿದ್ದೇನೆ. ಈ ಬಗ್ಗೆ ಶಾಲೆಯ ಟ್ರಸ್ಟಿಗಳಿಗೆ ಹೇಳಿದ್ದೇನೆ. ಅದನ್ನು ಉಪಯೋಗಿಸಿಕೊಳ್ಳುವುದು ಬಿಡುವುದು ಅವರಿಗೆ ಸೇರಿದ್ದು. ಇಂತಹ ಆಸ್ತಿಯನ್ನು ಗುತ್ತಿಗೆ ಮೇಲೆ ಕೊಡುವುದು ಎಂದರೆ ಹೇಗೆ? ಇದು ಹಗಲು ದರೋಡೆ ಆಗಿದೆ. ಮೈಷುಗರ್ ಶಾಲೆ ಅಭಿವೃದ್ಧಿಗೆ 25 ಕೋಟಿ ರಪಾಯಿ ಬೇಕು ಎಂದು ಬೇಡಿಕೆ ಇಟ್ಟಿದ್ದರು. ಅಷ್ಟು ಹಣ ಕೊಡಲು ತಯಾರಿದ್ದೇನೆ. ಗುತ್ತಿಗೆ ನೀಡುವ ಆಲೋಚನೆ ಸರಿ ಅಲ್ಲ," ಎಂದು ಸಚಿವರು ಹೇಳಿದರು.

Read More
Next Story