ಚಾಮರಾಜನಗರದಲ್ಲಿ ಹುಲಿ ದಾಳಿ: ವ್ಯಕ್ತಿಗೆ ಗಂಭೀರ ಗಾಯ, ಗ್ರಾಮಸ್ಥರಲ್ಲಿ ಆತಂಕ
x

ಹುಲಿ ದಾಳಿಗೊಳಗಾದ ವ್ಯಕ್ತಿ ರವಿ 

ಚಾಮರಾಜನಗರದಲ್ಲಿ ಹುಲಿ ದಾಳಿ: ವ್ಯಕ್ತಿಗೆ ಗಂಭೀರ ಗಾಯ, ಗ್ರಾಮಸ್ಥರಲ್ಲಿ ಆತಂಕ

ಹುಲಿ ದಾಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರವಿ ಅವರನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ಎಸ್. ಬಿಂದ್ಯಾ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.


ಚಾಮರಾಜನಗರದ ಬೇಡುಗುಳಿ ಸಮೀಪದ ರಾಮಯ್ಯನ ಪೋಡಿನಲ್ಲಿ ಸೋಮವಾರ ರಾತ್ರಿ ಬಹಿರ್ದೆಸೆಗೆ ಹೋಗಿದ್ದ ಸಂದರ್ಭ ಏಕಾಏಕಿ ಹುಲಿ ದಾಳಿ ಮಾಡಿದ ಪರಿಣಾಮ ರವಿ ಎಂಬ ವ್ಯಕ್ತಿ ತಲೆಗೆ ಗಂಭೀರ ಗಾಯಗಳಾಗಿವೆ.

ಹುಲಿ ದಾಳಿ ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಚಾಮರಾಜನಗರ ವೃತ್ತ ಅರಣ್ಯಾಧಿಕಾರಿ ಹೀರಲಾಲ್ ಮತ್ತು ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ *ಶ್ರೀಪತಿ ಅವರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕೂಡಲೇ ಗಾಯಾಳು ರವಿ ಅವರನ್ನು ಚಾಮರಾಜನಗರ ಸರ್ಕಾರಿ ಬೋಧನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ರವಿ ಅವರಿಗೆ ಸಿಟಿ ಸ್ಕ್ಯಾನ್ ಮಾಡಲಾಗಿದ್ದು, ವರದಿಗಾಗಿ ಅರಣ್ಯಾಧಿಕಾರಿಗಳು ಕಾಯುತ್ತಿದ್ದಾರೆ.

ಹುಲಿ ದಾಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರವಿ ಅವರನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ಎಸ್. ಬಿಂದ್ಯಾ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಗ್ರಾಮಸ್ಥರಲ್ಲಿ ಆತಂಕ, ತಾತ್ಕಾಲಿಕ ಆಶ್ರಯಕ್ಕೆ ಮನವಿ

ಬೇಡುಗುಳಿಯ ರಾಮಯ್ಯನ ಪೋಡಿನಲ್ಲಿ ನಡೆದ ಹುಲಿ ದಾಳಿಯಿಂದಾಗಿ ನಿವಾಸಿಗಳು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದಾಳಿ ಮಾಡಿದ ಹುಲಿ ಸೆರೆಯಾಗುವ ತನಕ ತಾತ್ಕಾಲಿಕವಾಗಿ ಬೇಡುಗುಳಿಯಲ್ಲಿನ ಆಶ್ರಮ ಶಾಲೆಯಲ್ಲಿ ಆಶ್ರಯ ನೀಡುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಪ್ರಸ್ತುತ ಹುಲಿ ದಾಳಿ ನಡೆದ ಸ್ಥಳದ ಸುತ್ತಮುತ್ತ ಸಾರ್ವಜನಿಕರು ತಿರುಗಾಡುವುದನ್ನು ನಿಷೇಧಿಸಲಾಗಿದೆ. ಅರಣ್ಯ ಇಲಾಖೆ ದಾಳಿ ಮಾಡಿದ ಹುಲಿಯನ್ನು ಸೆರೆಹಿಡಿಯಲು ಕಾರ್ಯಾಚರಣೆಯನ್ನು ಆರಂಭಿಸಿದೆ.

Read More
Next Story