
ಜಿಲ್ಲಾಧಿಕಾರಿಗಳ ಡಿಜಿಟಲ್ ಸಹಿ ವಂಚನೆ: ತಪ್ಪಿತಸ್ಥರನ್ನು ವಜಾಗೊಳಿಸುವಂತೆ ಕೃಷ್ಣ ಬೈರೇಗೌಡ ಸೂಚನೆ
ಕಂದಾಯ ಪ್ರಗತಿಗೆ ಸಂಬಂಧಿಸಿದಂತೆ ಅಧಿಕಾರಿಗಳು ನೀಡಿದ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಡಿಜಿಟಲ್ ಸಹಿ ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ಯಾರೇ ಆಗಿದ್ದರೂ ತನಿಖೆ ನಡೆಸಿ ಕರ್ತವ್ಯದಿಂದ ವಜಾಗೊಳಿಸಬೇಕು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ನಿರ್ದೇಶನ ನೀಡಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಎಲ್ಲಾ ತಾಲ್ಲೂಕು ಕಂದಾಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಜಿಲ್ಲಾಧಿಕಾರಿಗಳ ಡಿಜಿಟಲ್ ಸಹಿ ದುರುಪಯೋಗವಾಗಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಇಲಾಖೆಯಲ್ಲಿ ಇಂತಹ ವಂಚನೆ ಪ್ರಕರಣಗಳನ್ನು ಎಸಗುವ ಅಧಿಕಾರಿ ಅಥವಾ ಸಿಬ್ಬಂದಿಯನ್ನು ಬೇರು ಬಿಡದಂತೆ ಮೂಲದಲ್ಲಿಯೇ ಕಿತ್ತು ಹಾಕಬೇಕು. ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ಯಾರೇ ಆಗಲಿ ತನಿಖೆ ನಡೆಸಿ ಕರ್ತವ್ಯದಿಂದ ವಜಾಗೊಳಿಸಬೇಕು ಎಂದು ಸೂಚಿಸಿದ್ದಾರೆ.
ಇದೇ ವೇಳೆ ಕಂದಾಯ ಪ್ರಗತಿಗೆ ಸಂಬಂಧಿಸಿದಂತೆ ಅಧಿಕಾರಿಗಳು ನೀಡಿದ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲವೆಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ದಾಖಲೆಗಳಿಲ್ಲದ 522 ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಿರುವುದು ಅಭಿನಂದನಾರ್ಹ. ಆದರೆ ಕೈಬಿಟ್ಟು ಹೋಗಿರುವ ಹಟ್ಟಿ, ತಾಂಡಾಗಳಲ್ಲದೆ ಸಾಮಾನ್ಯ ರೈತರು ವಾಸಿಸುವ ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಗುರುತಿಸಿ ಕಂದಾಯ ಗ್ರಾಮಗಳನ್ನಾಗಿಸಲು ಪ್ರಸ್ತಾವನೆ ಸಲ್ಲಿಸಬೇಕು. ದಾಖಲೆಗಳಿಲ್ಲದ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸುವುದರಿಂದ ಅಲ್ಲಿನ ನಿವಾಸಿಗಳು ತಮ್ಮ ಸ್ವತ್ತಿನ ದಾಖಲೆಗಳನ್ನು ಹೊಂದುವುದರೊಂದಿಗೆ ಅವರ ಅತಂತ್ರ ಬದುಕಿನಿಂದ ಮುಕ್ತರಾಗಿ ನೆಮ್ಮದಿ ಜೀವನ ನಡೆಸಲು ಸಹಾಯವಾಗುತ್ತದೆ ಎಂದು ತಿಳಿಸಿದ್ದಾರೆ.
ಭೂಮಿ ತಂತ್ರಾಂಶದಲ್ಲಿ ಈವರೆಗೆ ಸ್ವೀಕೃತವಾದ ಒಟ್ಟು 28629 ಅರ್ಜಿಗಳ ಪೈಕಿ 21045 ಅರ್ಜಿಗಳು ತಿರಸ್ಕೃತಗೊಂಡಿವೆ. ಜಿಲ್ಲೆಯ ಇತರೆ ತಾಲ್ಲೂಕುಗಳಿಗೆ ಹೋಲಿಸಿದರೆ ಕುಣಿಗಲ್ ತಾಲ್ಲೂಕಿನಲ್ಲಿ ಅತಿ ಹೆಚ್ಚು ಭೂಮಿ ಪೆಂಡೆನ್ಸಿ ಅರ್ಜಿಗಳು ಬಾಕಿ ಇವೆ. ಬಾಕಿಯಿರುವ 777 ಅರ್ಜಿಗಳನ್ನು ವಿಲೇ ಮಾಡಲು ವಿಳಂಬಕ್ಕೆ ಕಾರಣವೇನು ಎಂದು ಕುಣಿಗಲ್ ತಹಶೀಲ್ದಾರ್ರನ್ನು ತರಾಟೆಗೆ ತೆಗೆದುಕೊಂಡರು.
ಭೂ ಸುರಕ್ಷಾ ಯೋಜನೆಯಡಿ ಹಳೆಯ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡುತ್ತಿರುವ ಕಾರ್ಯದಲ್ಲಿ ಈವರೆಗೆ ಶಿರಾ ತಾಲ್ಲೂಕು ಹೊರತುಪಡಿಸಿ ಜಿಲ್ಲೆಯಲ್ಲಿ ೮೩,೫೯,೭೬೪ ಕಡತ ಹಾಗೂ ವಹಿಗಳ ಪುಟಗಳನ್ನು ಗಣಕೀಕರಣಗೊಳಿಸಲಾಗಿದೆ. ಅನಗತ್ಯ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡುತ್ತಿರುವುದರಿಂದಲೇ ಕಂದಾಯ ಪ್ರಗತಿ ವಿಳಂಬಕ್ಕೆ ಕಾರಣವಾಗಿದೆ. ಮುಂದಿನ ಆರು ತಿಂಗಳೊಳಗೆ ಹಳೆಯ ದಾಖಲೆಗಳ ಗಣಕೀಕರಣ ಕಾರ್ಯ ಪೂರ್ಣಗೊಳಿಸಬೇಕೆಂದು ತಾಕೀತು ಮಾಡಿದ್ದಾರೆ.