ಸಿಎಂ ಬದಲಾವಣೆ ಕುರಿತ ಎಚ್​​ ವಿಶ್ವನಾಥ್ ಹೇಳಿಕೆಗೆ ಸಚಿವ ಮಹಾದೇವಪ್ಪ ತಿರುಗೇಟು
x

ಸಿಎಂ ಬದಲಾವಣೆ ಕುರಿತ ಎಚ್​​ ವಿಶ್ವನಾಥ್ ಹೇಳಿಕೆಗೆ ಸಚಿವ ಮಹಾದೇವಪ್ಪ ತಿರುಗೇಟು

ಸದ್ಯಕ್ಕೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿದ್ದಾರೆ ಮತ್ತು ಅವರೇ ಮುಂದುವರಿಯುತ್ತಾರೆ ಎಂದು ಮಹದೇವಪ್ಪ ಅವರು ಸ್ಪಷ್ಟಪಡಿಸಿದರು.


ಸೆಪ್ಟೆಂಬರ್ ನಂತರ ಕರ್ನಾಟಕದ ಮುಖ್ಯಮಂತ್ರಿ ಬದಲಾವಣೆಯಾಗುತ್ತದೆ ಎಂಬ ಮಾಜಿ ಶಾಸಕ ಎಚ್. ವಿಶ್ವನಾಥ್ ಅವರ ಹೇಳಿಕೆಗೆ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹಾದೇವಪ್ಪ ಕಲಬುರಗಿಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಅದೇ ರೀತಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಆರೋಪಗಳಿಗೂ ತಿರುಗೇಟು ನೀಡಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಮಹಾದೇವಪ್ಪ, "ಹೈಕಮಾಂಡ್ ಯಾವಾಗ ಅಂತಹ ತೀರ್ಮಾನ ತೆಗೆದುಕೊಂಡಿತೋ ಗೊತ್ತಿಲ್ಲ. ಆದರೆ, ಸರ್ಕಾರದ ಮುಂದೆ ಅಂತಹ ಯಾವುದೇ ಪ್ರಸ್ತಾವನೆ ಇಲ್ಲ. ಸದ್ಯಕ್ಕೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿದ್ದಾರೆ ಮತ್ತು ಅವರೇ ಮುಂದುವರಿಯುತ್ತಾರೆ" ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯೇ ನೇರ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೀಡಿರುವ ಹೇಳಿಕೆಗೆ ಸಚಿವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. "ಇದು ತುಂಬಾ ಬಾಲಿಷತನದ ಹೇಳಿಕೆ. ಈ ದುರಂತದಿಂದ ನಮಗೆಲ್ಲರಿಗೂ ತೀವ್ರ ನೋವಾಗಿದೆ. ಇಂತಹ ಘಟನೆ ಆಗಬಾರದಿತ್ತು, ಆದರೆ ಆಗಿದೆ. ಇದಕ್ಕೆ ನಾವು ವಿಷಾದ ವ್ಯಕ್ತಪಡಿಸಿದ್ದೇವೆ. ದುರಂತದ ಲೋಪಗಳನ್ನು ಕಂಡುಹಿಡಿಯಲು ಸಮಿತಿ ನೇಮಕ ಮಾಡಲಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕಿದೆ. ಇಂತಹ ವಿಷಯದಲ್ಲಿ ರಾಜಕೀಯ ಬೆರೆಸುವುದು ಮೂರ್ಖತನ" ಎಂದು ಮಹಾದೇವಪ್ಪ ಕಿಡಿಕಾರಿದರು.

"ಇಂತಹ ಘಟನೆಗಳು ಉತ್ತರ ಪ್ರದೇಶ, ಗುಜರಾತ್‌ ಸೇರಿದಂತೆ ಬೇರೆ ಕಡೆಯೂ ನಡೆದಿವೆ. ಗುಜರಾತ್‌ನಲ್ಲಿ ವಿಮಾನ ದುರಂತ ಸಂಭವಿಸಿತು. ಆಗ ನಾವು ಪ್ರಧಾನಮಂತ್ರಿಯ ರಾಜೀನಾಮೆ ಕೇಳಿದ್ದೇವೆಯೇ? ಇಂತಹ ದುರಂತಗಳಲ್ಲಿ ರಾಜಕೀಯ ಮಾಡುವುದು ಸರಿಯಲ್ಲ" ಎಂದು ವಿಜಯೇಂದ್ರ ಅವರ ಆರೋಪಕ್ಕೆ ತಿರುಗೇಟು ನೀಡಿದರು. ದುರಂತಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ಸಚಿವರು ಬಲವಾಗಿ ಪ್ರತಿಪಾದಿಸಿದರು.

Read More
Next Story