
ಕಾಂಗ್ರೆಸ್ ಶಾಸಕರಾದ ಪರಮೇಶ್ವರ್, ಬೇಳೂರು ಗೋಪಾಲಕೃಷ್ಣ, ಆರ್. ವಿ. ದೇಶಪಾಂಡೆ, ಬಿ.ಆರ್. ಪಾಟೀಲ್ ಹಾಗೂ ರಾಜು ಕಾಗೆ
ಕ್ಷೇತ್ರಾಭಿವೃದ್ಧಿಗೆ ಸಿಗದ ಅನುದಾನ ; ಸರ್ಕಾರಕ್ಕೆ 'ಪಂಚ' ಶಾಸಕರಿಂದ ಪಂಚ್ !
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರ ಹಿಡಿದು ಎರಡು ವರ್ಷ ಪೂರೈಸಿದರೂ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂಬ ಆರೋಪ ಸ್ವಪಕ್ಷೀಯ ಶಾಸಕರಿಂದಲೇ ಕೇಳಿ ಬಂದಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಯಶಸ್ಸಿನಲ್ಲಿ ಬೀಗುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಸ್ವಪಕ್ಷೀಯ ಶಾಸಕರೇ ಪಂಚ್ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರ ಕ್ಷೇತ್ರಾಭಿವೃದ್ಧಿಗೆ ಸಮರ್ಪಕ ಅನುದಾನ ನೀಡುತ್ತಿಲ್ಲ ಎಂದು ಆರೋಪಿಸಿ ಸ್ವಪಕ್ಷೀಯ ಸರ್ಕಾರದ ವಿರುದ್ಧವೇ ತಿರುಗಿಬಿದ್ದಿದ್ದಾರೆ.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರ ಹಿಡಿದು ಎರಡು ವರ್ಷ ಪೂರೈಸಿ, ಮುನ್ನುಗ್ಗುತ್ತಿದ್ದರೂ ಅಭಿವೃದ್ಧಿ ಯೋಜನೆಗಳ ಅಗತ್ಯಕ್ಕೆ ತಕ್ಕಂತೆ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಇಲ್ಲಿಯವರೆಗೂ ಗ್ಯಾರಂಟಿ ಜಪ ಮಾಡುತ್ತಿದ್ದ, ವಿಪಕ್ಷಗಳ ಟೀಕೆಗೆ ತಿರುಗೇಟು ನೀಡುತ್ತಿದ್ದ ಶಾಸಕರೇ ಈಗ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ವಿರೋಧ ಪಕ್ಷಗಳ ಶಾಸಕರಿಗೆ ಸರ್ಕಾರ ಯಾವುದೇ ಅನುದಾನ ನೀಡುತ್ತಿಲ್ಲ ಎಂಬ ಆರೋಪಗಳನ್ನು ಈಗ ಕಾಂಗ್ರೆಸ್ ಶಾಸಕರ ಹೇಳಿಕೆಗಳು ಪುಷ್ಠೀಕರಿಸುವಂತಿವೆ. ಅಭಿವೃದ್ದಿ ಹಾಗೂ ಅನುದಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರ ಬಹಿರಂಗ ಹೇಳಿಕೆಗಳು ಸರ್ಕಾರಕ್ಕೆ ತೀವ್ರ ಮುಜುಗರ ತಂದೊಡ್ಡಿವೆ.
ಕಳೆದ ಮೂರು ದಿನಗಳಿಂದ ಕಾಂಗ್ರೆಸ್ ಶಾಸಕರು ಒಬ್ಬೊಬ್ಬರಾಗಿ ಹೇಳಿಕೆ ನೀಡುತ್ತಿರುವುದರಿಂದ ಪಕ್ಷ ಹಾಗೂ ಸರ್ಕಾರದಲ್ಲಿ ಅಸಮಾಧಾನ ಹೆಚ್ಚಾಗುತ್ತಿದೆ. ಅನುದಾನದ ವಿಚಾರದಲ್ಲಿ ಯಾವೆಲ್ಲಾ ಶಾಸಕರು, ಏನೆಲ್ಲಾ ಹೇಳಿಕೆ ನೀಡಿದ್ದಾರೆ ಎಂಬ ಮಾಹಿತಿ ಇಲ್ಲಿದೆ.
ಪ್ರಕರಣ -1: ಬಿ.ಆರ್. ಪಾಟೀಲ್
ಮನೆ ಹಂಚಿಕೆಯಲ್ಲಿ ಲಂಚದ ಆರೋಪ ಮಾಡುವ ಮೂಲಕ ಶಾಸಕ ಬಿ.ಆರ್.ಪಾಟೀಲ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದಲ್ಲಿ ಸಂಚಲನ ಸೃಷ್ಟಿಸಿದ್ದಾರೆ.
ರಾಜೀವ್ ಗಾಂಧಿ ವಸತಿ ಯೋಜನೆ ಅಡಿ ಮನೆಗಳ ಹಂಚಿಕೆ ವಿಷಯದಲ್ಲಿ ಅಕ್ರಮ ನಡೆಯುತ್ತಿದೆ. ಹಣ ನೀಡಿ ಮನೆ ಪಡೆದುಕೊಳ್ಳಲಾಗುತ್ತಿದೆ ಎಂದು ವಸತಿ ಸಚಿವ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫ್ರಾಜ್ ಖಾನ್ ಜೊತೆ ಮಾತನಾಡಿರುವ ದೂರವಾಣಿ ಸಂಭಾಷಣೆಯ ಆಡಿಯೋ ವೈರಲ್ ಆಗಿ ಸರ್ಕಾರ ಮುಜುಗರಕ್ಕೆ ಒಳಗಾಗಿತ್ತು.
ಈ ಬಗ್ಗೆ ಮಾತನಾಡಿದ್ದ ಬಿ.ಆರ್. ಪಾಟೀಲ್, ತಾನು ಸರ್ಫ್ರಾಜ್ ಜೊತೆ ಮಾತಾಡಿದ್ದು ನಿಜ. ಸಿಎಂ ಕರೆದರೆ ಹೋಗಿ ಮಾತಾಡಲು ಸಿದ್ಧನಿದ್ದೇನೆ. ಹೇಳಬೇಕಾಗಿದ್ದೆಲ್ಲವನ್ನು ಹೇಳಿದ್ದೇನೆ, ಭ್ರಷ್ಟಾಚಾರ ಎಲ್ಲ ಸರ್ಕಾರಗಳ ಅವಧಿಯಲ್ಲಿ ನಡೆಯುತ್ತದೆ. ಆದರೆ, ಕಾಂಗ್ರೆಸ್ ಜನಪರ ಆಡಳಿತ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವುದರಿಂದ ಇಂತಹದ್ದಕ್ಕೆ ಅವಕಾಶ ನೀಡಬಾರದಿತ್ತು ಎಂದು ಹೇಳಿದ್ದರು.
ಪ್ರಕರಣ -2 : ಶಾಸಕ ರಾಜುಕಾಗೆ ಅಸಮಾಧಾನ
ಬೆಳಗಾವಿಯ ಕಾಗವಾಡದಲ್ಲಿ ಮಾತನಾಡಿದ್ದ ಶಾಸಕ ರಾಜು ಕಾಗೆ ಅವರು, ನಮ್ಮ ಸರ್ಕಾರದಲ್ಲಿ ಯಾವುದೇ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಆಡಳಿತ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. 25 ಕೋಟಿ ಅನುದಾನ ನೀಡಿ ಮೂರು ವರ್ಷ ಕಳೆದರೂ ಕಾರ್ಯಾದೇಶ ನೀಡಿಲ್ಲ. ಎರಡು ವರ್ಷ ಕಳೆದರೂ ಕಾರ್ಯಾದೇಶ ನೀಡುತ್ತಿಲ್ಲ ಅಂದರೆ ಏನರ್ಥ?, ಇದರಿಂದ ನನ್ನ ಮನಸ್ಸಿಗೆ ಸಾಕಷ್ಟು ನೋವಾಗಿದೆ. ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ. ಎರಡು ದಿನದಲ್ಲಿ ಮುಖ್ಯಮಂತ್ರಿಗೆ ರಾಜೀನಾಮೆ ಕೊಟ್ಟರು ಆಶ್ಚರ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
ಪ್ರಕರಣ -3 : ಸಚಿವ ಜಮೀರ್ ರಾಜೀನಾಮೆಗೆ ಶಾಸಕ ಆಗ್ರಹ
ವಸತಿ ಹಂಚಿಕೆಯಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ವಸತಿ ಸಚಿವರು ರಾಜೀನಾಮೆ ನೀಡಬೇಕೆಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಆಗ್ರಹಿಸಿದ್ದಾರೆ.
ವಸತಿ ಸಚಿವರ ವಿರುದ್ಧ ಮನೆ ಹಂಚಿಕೆ ವಿಚಾರದಲ್ಲಿ ಹಣ ಕೇಳಿದ್ದಾರೆಂಬ ಆರೋಪ ಕೇಳಿ ಬಂದಿದೆ. ಇದರಿಂದ ವಸತಿ ಸಚಿವ ಜಮೀರ್ ಅಹ್ಮದ್ಖಾನ್ ಅವರು ತಕ್ಷಣ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ತನಿಖೆ ಎದುರಿಸಲಿ. ಅವರು ಭ್ರಷ್ಟಾಚಾರ ಮಾಡಿಲ್ಲ ಎಂದು ಸಾಬೀತಾದರೆ ಮತ್ತೆ ತಮ್ಮ ಮಂತ್ರಿ ಸ್ಥಾನಕ್ಕೆ ಬರಲಿ ಎಂದು ಹೇಳಿದ್ದಾರೆ.
ಪ್ರಕರಣ -4: ಸರ್ಕಾರದ ಬಳಿ ದುಡ್ಡಿಲ್ಲ ಎಂದ ಪರಮೇಶ್ವರ್
ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ಮಾತಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಸರ್ಕಾರವನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸುವ ಹೇಳಿಕೆ ಕೊಟ್ಟಿದ್ದಾರೆ.
ಅಭಿವೃದ್ಧಿಗೆ ನಮ್ಮ ಸರ್ಕಾರ ಬಳಿ ದುಡ್ಡಿಲ್ಲ, ಪ್ರಾಜೆಕ್ಟ್ ಮಾಡಿ ಕೇಂದ್ರಕ್ಕೆ ಕಳುಹಿಸಿ ಎಂದು ಪರಮೇಶ್ವರ್ ಹೇಳುವ ಮೂಲಕ ಚರ್ಚೆಗೆ ಗ್ರಾಸ ಮಾಡಿಕೊಟ್ಟಿದ್ದಾರೆ.
ಬಾದಾಮಿ ಅಭಿವೃದ್ಧಿಗೆ ಒಂದು ಯೋಜನೆ ಸಿದ್ದ ಮಾಡಿ. ಅದು ಎಷ್ಟು ಮೊತ್ತದ್ದಾದರೂ ಪರವಾಗಿಲ್ಲ. ಅದು ಸಾವಿರ ಕೋಟಿ ಪ್ರಾಜೆಕ್ಟ್ ಆಗಿರಲಿ. ಪ್ರಸ್ತಾವನೆ ಸಿದ್ಧ ಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಿ. ಏಕೆಂದರೆ, ನಮ್ಮ ಬಳಿ ದುಡ್ಡಿಲ್ಲ. ಸಿದ್ದರಾಮಣ್ಣನ ಬಳಿ ದುಡ್ಡಿಲ್ಲ ಎಂದು ಹೇಳಿದ್ದಾರೆ.
ನಮ್ಮ ಬಳಿ ಇರುವ ದುಡ್ಡಿನಲ್ಲಿ ನಿಮಗೆ ಈಗಾಗಲೇ ಅಕ್ಕಿ, ಬೇಳೆ, ಎಣ್ಣೆ ಕೊಟ್ಟಿದ್ದೇವೆ ಎಂದು ಹೇಳುವ ಮೂಲಕ ಉಚಿತ ಭಾಗ್ಯಗಳಿಗೆ ಅನುದಾನ ಸಾಗುತ್ತಿದೆ ಎಂಬುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.
ಪ್ರಕರಣ-5: ಶಕ್ತಿ ಯೋಜನೆಯಿಂದ ತೊಂದರೆ ಎಂದ ದೇಶಪಾಂಡೆ
ಕಾಂಗ್ರೆಸ್ ನ ಹಿರಿಯ ಶಾಸಕ ಹಾಗೂ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್. ವಿ ದೇಶಪಾಂಡೆ ಅವರು ಗ್ಯಾರಂಟಿ ಯೋಜನೆ ಕುರಿತು ವ್ಯಂಗ್ಯಾತ್ಮಕವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇದು ಸರ್ಕಾರವನ್ನು ಮುಜುಗರಕ್ಕೆ ಸಿಲುಕಿಸಿದೆ.
ಉಚಿತ ಬಸ್ ನ ಶಕ್ತಿ ಯೋಜನೆಯಿಂದ ಪುರುಷರಿಗೆ ತೊಂದರೆ ಆಗುತ್ತಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆ ಬಳಸಿಕೊಂಡು ಮಹಿಳೆಯರು ರಾಜ್ಯದ ಎಲ್ಲ ಭಾಗದಲ್ಲಿಯೂ ಓಡಾಡುತ್ತಿದ್ದಾರೆ. ಗಂಡು ಮಕ್ಕಳಿಗೆ ಬಸ್ನಲ್ಲಿ ಹತ್ತಲು ಸಾಧ್ಯವಾಗುತ್ತಿಲ್ಲ. ಪುರುಷರ ಪರಿಸ್ಥಿತಿ ಕೆಟ್ಟದಾಗಿದೆ ಎಂದು ಹೇಳಿದ್ದಾರೆ.
ಒಟ್ಟಾರೆ, ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಜಾರಿಗೆ ಮಾತ್ರ ಹೆಚ್ಚು ಆಸಕ್ತಿ ವಹಿಸುತ್ತಿದ್ದು, ಶಾಸಕರ ಕ್ಷೇತ್ರಾಭಿವೃದ್ಧಿ ಕಡೆಗಣಿಸಲಾಗುತ್ತಿದೆ. ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅನುದಾನ ಸಿಗುತ್ತಿಲ್ಲ. ಕ್ಷೇತ್ರದ ಜನರಿಗೆ ಮುಖ ತೋರಿಸಲು ಆಗುತ್ತಿಲ್ಲ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರು ಹಲವು ಬಾರಿ ಅಳಲು ತೋಡಿಕೊಂಡಿದ್ದರು. ಈಗ ಕಾಂಗ್ರೆಸ್ ನೇತೃತ್ವದ ಸರ್ಕಾರದ ಶಾಸಕರೇ ಬಹಿರಂಗವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವುದು ಕಗ್ಗಂಟಾಗಿಸಿದೆ. ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯದ ಬೊಕ್ಕಸವನ್ನು ಸರ್ಕಾರ ಭರಿದು ಮಾಡಿದೆ ಎಂಬ ಪ್ರತಿಪಕ್ಷಗಳ ಆರೋಪ ಕೂಡ ತಲೆನೋವಾಗಿ ಪರಿಣಮಿಸಿದೆ.