Screenshot 2025-06-02 165012
x

Muda Case: ಮುಡಾ ಪ್ರಕರಣ ; ಮಾಜಿ ಅಧ್ಯಕ್ಷರು, ಅಧಿಕಾರಿಗಳೇ ತಪ್ಪಿತಸ್ಥರು?

ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಪೊಲೀಸರು ಪ್ರಾಧಿಕಾರದ ಮಾಜಿ ಅಧ್ಯಕ್ಷರು ಮತ್ತು ಅಧಿಕಾರಿಗಳು ತಪ್ಪಿತಸ್ಥರು ಎಂಬುದಾಗಿ ಬಿಂಬಿಸುವ ಸಾಧ್ಯತೆ ಇದೆ.


ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಪೊಲೀಸರು ಪ್ರಾಧಿಕಾರದ ಮಾಜಿ ಅಧ್ಯಕ್ಷರು ಮತ್ತು ಅಧಿಕಾರಿಗಳು ತಪ್ಪಿತಸ್ಥರು ಎಂಬುದಾಗಿ ಬಿಂಬಿಸುವ ಸಾಧ್ಯತೆ ಇದೆ.

ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಮೊದಲ ನಾಲ್ವರು ಆರೋಪಿಗಳ ವಿರುದ್ಧ 'ಬಿ ರಿಪೋರ್ಟ್‌' ಸಲ್ಲಿಕೆ ಮಾಡಲಾಗಿದೆ. ಆದರೆ, ಮಾಜಿ ಅಧ್ಯಕ್ಷರು, ಅಧಿಕಾರಿಗಳ ವಿರುದ್ಧ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿಲ್ಲ. ಹೀಗಾಗಿ ಅವರ ವಿರುದ್ಧ ತನಿಖೆ ಮುಂದುವರಿಸಿ ಅಂತಿಮ ವರದಿ ಸಲ್ಲಿಕೆ ಮಾಡಬೇಕಾಗಿದೆ. ಇತರೆ ಆರೋಪಿಗಳ ವಿರುದ್ಧ ತನಿಖೆ ಮುಂದುವರಿಸಿರುವ ಲೋಕಾಯುಕ್ತ ಪೊಲೀಸರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಮಾಡಬೇಕಿದೆ. ಈ ಸಂಬಂಧ ನ್ಯಾಯಾಲಯದಲ್ಲಿ ಮತ್ತಷ್ಟು ಕಾಲಾವಕಾಶ ಕೋರಿದೆ. ಆದರೆ, ದೂರುದಾರ ಸ್ನೇಹಮಯಿ ಕೃಷ್ಣ ಅವರು ಆಕ್ಷೇಪಣೆ ಸಲ್ಲಿಕೆ ಮಾಡಿರುವುದರಿಂದ ಅದರ ಅರ್ಜಿ ವಿಚಾರಣೆ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.

ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ಅಧಿಕಾರದ ಅವಧಿಯಲ್ಲಿ ಅಕ್ರಮ ನಡೆದಿದೆ ಎಂಬುದಾಗಿ ಹೇಳಲಾಗಿದೆ. ಅವರು ಅಧ್ಯಕ್ಷರಾಗಿದ್ದ ವೇಳೆ ಒಂದೇ ದಿನದಲ್ಲಿ 848 ನಿವೇಶನಗಳನ್ನು ಮುಡಾದಿಂದ ಬಿಡುಗಡೆಗೊಳಿಸಿ ಖಾತೆ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆಯುಕ್ತರ ಅನುಮೋದನೆ ಇಲ್ಲದಿದ್ದರೂ ನಿವೇಶನಗಳನ್ನು ಬಿಡುಗಡೆಗೊಳಿಸಿಕೊಂಡಿದ್ದಾರೆ ಎಂದು ಈ ಹಿಂದೆ ಆಯುಕ್ತರಾಗಿದ್ದ ಡಿ.ಬಿ.ನಟೇಶ್ ರಾಜ್ಯ ಸರ್ಕಾರಕ್ಕೆ ಬರೆದಿದ್ದರು. ಇದು ರಾಜೀವ್‌ಗೆ ಸಂಕಷ್ಟ ಎದುರಾಗಿದೆ. ಪ್ರಕರಣದಲ್ಲಿ ಅವರನ್ನು ಆರೋಪಿಯನ್ನಾಗಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘದಿಂದ ಕೇರ್ಗಳ್ಳಿ, ನಗರ್ತಳ್ಳಿ, ಬಲ್ಲಹಳ್ಳಿ ಗ್ರಾಮದ 252 ಎಕರೆ 10 ಗುಂಟೆ ಪ್ರದೇಶದಲ್ಲಿ ಬಡಾವಣೆ ನಿರ್ಮಾಣ ಮಾಡಲಾಗಿದೆ. ಈ ವ್ಯಾಜ್ಯ ನ್ಯಾಯಾಲಯದಲ್ಲಿ ಇರುವ ಕಾರಣ ಬಡಾವಣೆಗಳ ನಿವೇಶನಗಳ ಹಕ್ಕುಗಳನ್ನು ಮುಡಾ ವರ್ಗಾವಣೆ ಮಾಡಬಾರದೆಂದು ನ್ಯಾಯಾಲಯ ಆದೇಶ ನೀಡಿತ್ತು. ಹೀಗಿದ್ದರೂ ರಾಜೀವ್ ಅವರು ಖಾತೆ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರಲ್ಲದೇ, ಮತ್ತೊಂದೆಡೆ ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘದಿಂದ 252.10 ಎಕರೆಯಲ್ಲಿ ಬಡಾವಣೆ ವಿನ್ಯಾಸ ನಕ್ಷೆ ಅನುಮೋದನೆಗೆ ಸಂಬಂಧಿಸಿದಂತೆಯೂ ಅಕ್ರಮ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದಲ್ಲದೇ, ಮುಡಾದ ಮಾಜಿ ಆಯುಕ್ತರಾಗಿದ್ದ ಅಧಿಕಾರಗಳನ್ನು ಸಹ ಪ್ರಕರಣದಲ್ಲಿ ತಪ್ಪಿತಸ್ಥರು ಎಂಬುದಾಗಿ ಅಂತಿಮ ವರದಿಯಲ್ಲಿ ಉಲ್ಲೇಖಿಸುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿದುಬಂದಿದೆ. ಮಾಜಿ ಆಯುಕ್ತರಾಗಿದ್ದ ನಟೇಶ್‌, ದಿನೇಶ್‌ ಸೇರಿದಂತೆ ಅಧಿಕಾರಿಗಳ ವಿರುದ್ಧ ಆರೋಪ ಮಾಡುವ ನಿರೀಕ್ಷೆ ಇದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಮೊದಲ ನಾಲ್ವರು ಆರೋಪಿಗಳನ್ನು ಬಚಾವ್‌ ಮಾಡಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ.

ಲೋಕಾಯುಕ್ತ ಪೊಲೀಸರು ಈಗಾಗಲೇ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಭಾಮೈದಾ ಮಲ್ಲಿಕಾರ್ಜುನ ಸ್ವಾಮಿ ಮತ್ತು ಜಮೀನು ಮಾಲೀಕ ದೇವರಾಜು ವಿರುದ್ಧ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಯಾವುದೇ ತನಿಖೆ ನಡೆಸುವುದಿಲ್ಲ. ಇನ್ನೇನಿದ್ದರೂ ಇತರೆ ಆರೋಪಿಗಳ ವಿರುದ್ಧ ಮಾತ್ರ ತನಿಖೆ ನಡೆಸಲಿದ್ದು, ಮಾಜಿ ಅಧ್ಯಕ್ಷರು, ಅಧಿಕಾರಿಗಳನ್ನು ತಪ್ಪಿತಸ್ಥರನ್ನಾಗಿ ಮಾಡಿ ಅಂತಿಮ ವರದಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದು ಒಟ್ಟು 1,48,104 ಚದರ ಅಡಿ ಜಾಗ ಇತ್ತು. ಅದರ ಬದಲಿಗೆ ಮುಡಾ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ಕೊಟ್ಟಿದ್ದಾರೆ ಇದು ಚರ್ಚೆಗೆ ಕಾರಣವಾಗಿತ್ತು.

ಮೈಸೂರಿನ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿರೋ 3ಎಕರೆ 16 ಗುಂಟೆ ಜಾಗವನ್ನ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಸಹೋದರ, ಪಾರ್ವತಿಯವರಿಗೆ ದಾನವಾಗಿ ನೀಡಿದ್ದರು. ಈ ಜಾಗವನ್ನು ಅಭಿವೃದ್ಧಿಗಾಗಿ ಪ್ರಾಧಿಕಾರ, ಕಾನೂನು ಪ್ರಕಾರವೇ ವಶಪಡಿಸಿಕೊಂಡಿತ್ತು. 1998ರಲ್ಲಿ ನೋಟಿಫೈ ಮಾಡಿತ್ತು. ಇದೇ ಜಾಗದಲ್ಲಿ ದೇವನೂರು 3ನೇ ಹಂತದ ಬಡಾವಣೆಯನ್ನೂ ಅಭಿವೃದ್ಧಿ ಮಾಡಿದೆ. ವಶಪಡಿಸಿಕೊಂಡ ಜಾಗಕ್ಕೆ ಬದಲಿ ಭೂಮಿ ಕೊಡುವುದು ಪ್ರಾಧಿಕಾರದ ಕರ್ತವ್ಯ. ಹೀಗಾಗಿ ಬದಲಿ ಭೂಮಿ ನೀಡುವಂತೆ 2014ರಲ್ಲಿ ಅರ್ಜಿ ಹಾಕಲಾಗಿದ್ದು, 2017ರಲ್ಲಿ ನಡೆದ ಸಭೆಯಲ್ಲಿ ಅಭಿವೃದ್ಧಿಪಡಿಸದ ಭೂಮಿ ನೀಡಲು ತೀರ್ಮಾನಿಸಲಾಗಿತ್ತು. ಆದರೆ, ಇದಕ್ಕೆ ಒಪ್ಪದ ಪಾರ್ವತಿ 2021ರಲ್ಲಿ ಮತ್ತೊಂದು ಪತ್ರ ಬರೆದಿದ್ದರು. 50:50ಅನುಪಾತದಲ್ಲಿ ಬದಲಿ ನಿವೇಶನ ಕೊಡಿ ಎಂದು ಮನವಿ ಸಲ್ಲಿಸಿದ್ದರು. ಅವರ ಕೋರಿಕೆಯಂತೆ 2021ರಲ್ಲಿ 50:50ಅನುಪಾತದಲ್ಲಿ ಭೂಮಿ ನೀಡಲಾಗಿದೆ ಎಂಬುದು ಆರೋಪ. ಭೂಮಿ ವಶಪಡಿಸಿಕೊಂಡ ಜಾಗ ಬಿಟ್ಟು ಅಥವಾ ಸಮಾನಾಂತರವಾದ ಜಾಗ ಬಿಟ್ಟು ವಿಜಯನಗರದಲ್ಲಿ ಅಭಿವೃದ್ಧಿ ಆಗಿರುವ 38ಸಾವಿರದ 284 ಚದರಡಿ ಭೂಮಿ ಹಂಚಿಕೆ ಮಾಡಲಾಗಿದೆ. ಅಲ್ಲದೇ, 1998ರಲ್ಲಿ ಕಳೆದುಕೊಂಡ ಭೂಮಿಗೆ 2021ರಲ್ಲಿ ಪರಿಹಾರ ನೀಡಲಾಗಿದೆ ಎಂಬುದು ಆರ್‌ಟಿಐ ಕಾರ್ಯಕರ್ತರ ಆರೋಪವಾಗಿದೆ.










Read More
Next Story