
ಸಿಎಂ ಸಿದ್ದರಾಮಯ್ಯ, ಸಚಿವ ಎಚ್.ಸಿ. ಮಹದೇವಪ್ಪ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ನನ್ನದು ಕೃಷ್ಣತತ್ತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ತ್ವ; ಮನುವಾದಿ ಎಂಬ ಟೀಕೆಗೆ ಎಚ್ಡಿಕೆ ತಿರುಗೇಟು
ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿರುವ ಸಚಿವ ಎಚ್.ಸಿ. ಮಹದೇವಪ್ಪ ಇವರಿಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಲಿ ಎಂದು ಸಚಿವ ಎಚ್ಡಿಕೆ ಆಗ್ರಹಿಸಿದ್ದಾರೆ.
ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕೆಂಬ ವಿಚಾರ ರಾಜ್ಯ ರಾಜಕಾರಣದಲ್ಲಿ ವಾಕ್ಸಮರಕ್ಕೆ ಕಾರಣವಾಗಿದೆ. ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕೆಂದು ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದ ಕುಮಾರಸ್ವಾಮಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಮನುವಾದಿ ಎಂದು ಜರಿದಿದ್ದರು. ಸಿಎಂ ಟೀಕೆಗೆ ಭಾನುವಾರ ತಿರುಗೇಟು ನೀಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, "ನಾನು ಕೃಷ್ಣತತ್ವ ನಂಬಿದವನೇ ಹೊರತು ಕಂಸನ ಹಿಂಸೆಯನ್ನಲ್ಲ, ಕಾಂಗ್ರೆಸ್ ಪಕ್ಷ ಕಂಸನಲ್ಲಿ ನಂಬಿಕೆ ಇಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂಬ ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ತಮ್ಮನ್ನು ಮನುವಾದಿ ಎಂದ ಕರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇದು ಸೈದ್ಧಾಂತಿಕ ಅಧಃಪತನ ಎಂದಿರುವ ಸಚಿವ ಎಚ್.ಸಿ. ಮಹದೇವಪ್ಪ ಅವರು ಶಾಲಾ ಮಕ್ಕಳಿಗೇನು ಬೋಧಿಸಬೇಕು ಎಂದು ಹೇಳಲಿ. ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ? ಎಂದು ಕಿಡಿಕಾರಿದ್ದಾರೆ.
ಭಗವದ್ಗೀತೆ ಸನ್ಮಾರ್ಗದ ದೀವಿಗೆ
ಭಗವದ್ಗೀತೆ ಜಗದ ಬೆಳಕು, ಅರಿವು. ಸನ್ಮಾರ್ಗದ ದೀವಿಗೆ. ಆದರ್ಶಗಳ ಮಹಾಸಾರ. ಮಕ್ಕಳನ್ನು ಬಾಲ್ಯದಿಂದಲೇ ಒಳ್ಳೇ ಮಾರ್ಗದಲ್ಲಿ ನಡೆಸುವ ಸುದುದ್ದೇಶದಿಂದ ನಾನು ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದು ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು ಎಂದು ವಿನಂತಿಸಿದ್ದೇನೆ. ಬಹುಶಃ; ಮಹದೇವಪ್ಪನವರಿಗೆ ಭಗವದ್ಗೀತೆಯ ಸಾರ ಗೊತ್ತಿಲ್ಲ. ಅವರಿಗೆ ಇನ್ನಾವುದೋ ಗ್ರಂಥದ ಸಾರ ಗಾಢವಾಗಿ ಇಳಿದಿರಬೇಕು? ಎಂದು ಟಾಂಗ್ ನೀಡಿದ್ದಾರೆ.
ಮಹದೇವಪ್ಪನವರದು ಕಂಸ ಮಾರ್ಗವೇ ?
ನಾನೂ ಸೇರಿ ಜನಪ್ರತಿನಿಧಿಗಳೆಲ್ಲರೂ ಪ್ರಮಾಣ ಸ್ವೀಕರಿಸುವುದು ಸಂವಿಧಾನಬದ್ಧವಾಗಿಯೇ. ದೇವರು, ತಂದೆ ತಾಯಿ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸುತ್ತೇವೆ. ಇದು ಕೂಡ ಸನ್ಮಾರ್ಗವೇ. ಹಾಗಾದರೆ ಮಹದೇವಪ್ಪನವರ 'ಮಾರ್ಗ' ಯಾವುದು? ಕಂಸ ಮಾರ್ಗವೇ ? ನಿಮಗೆ ತಿಳಿದಿರಲಿ. ಇವತ್ತು ಭಾರತದ ರಾಜನೀತಿ ನಿಂತಿರುವುದೇ ಕೃಷ್ಣತತ್ತ್ವದ ಮೇಲೆ. ಸಮರ, ರಾಜಕೀಯ, ಜ್ಞಾನ, ಆಡಳಿತ, ಮನುಷ್ಯ ಸಂಬಂಧಗಳು ಎಲ್ಲಕ್ಕೂ ಭಗವದ್ಗೀತೆಯೇ ದೀವಿಗೆ. ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ. ನಿಮ್ಮನ್ನು ಅಜ್ಞಾನಿ ಎನ್ನುವುದು ನನಗೆ ಇಷ್ಟವಿಲ್ಲ. ಸಂವಿಧಾನ, ಪ್ರಜಾಪ್ರಭುತ್ವ ಎಂದು ಸದಾ ಜಪಿಸುವ ನೀವು, ಭಗವದ್ಗೀತೆಯ ಜತೆಗೆ ರಾಮಾಯಣ, ಮಹಾಭಾರತವನ್ನೂ ಓದಿ. ಇದು ನನ್ನ ಸಲಹೆಯಷ್ಟೇ. ಭಗವದ್ಗೀತೆ ಓದಬೇಡಿ ಎಂದು ನಾನೆಂದೂ ಹೇಳಿಲ್ಲ. ಹೇಳುವುದೂ ಇಲ್ಲ ಎಂದು ತಿಳಿಸಿದ್ದಾರೆ.

