ಕರ್ನಾಟಕದ ರೈತರಿಗೆ ನವರಾತ್ರಿ ಕೊಡುಗೆ:  5 ಧಾನ್ಯಗಳ ಬೆಂಬಲ ಬೆಲೆ ಖರೀದಿಗೆ ಅನುಮತಿ
x

ಕರ್ನಾಟಕದ ರೈತರಿಗೆ ನವರಾತ್ರಿ ಕೊಡುಗೆ: 5 ಧಾನ್ಯಗಳ ಬೆಂಬಲ ಬೆಲೆ ಖರೀದಿಗೆ ಅನುಮತಿ

ರೈತರ ನೆರವಿಗೆ ಧಾವಿಸಿರುವ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ನೇತೃತ್ವದಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.


ಅತಿವೃಷ್ಟಿಯಿಂದ ತತ್ತರಿಸಿರುವ ಕರ್ನಾಟಕದ ರೈತರಿಗೆ ಕೇಂದ್ರ ಸರ್ಕಾರವು ನವರಾತ್ರಿ ಹಬ್ಬದ ಕೊಡುಗೆಯಾಗಿ, ಬೆಂಬಲ ಬೆಲೆ ಯೋಜನೆಯಡಿ ಐದು ಪ್ರಮುಖ ಧಾನ್ಯಗಳನ್ನು ಖರೀದಿಸಲು ಅನುಮತಿ ನೀಡಿದೆ. 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ಹೆಸರು ಕಾಳು, ಉದ್ದಿನ ಕಾಳು, ನೆಲಗಡಲೆ (ಶೇಂಗಾ), ಸೋಯಾಬಿನ್, ಮತ್ತು ಸೂರ್ಯಕಾಂತಿ ಬೆಳೆಯನ್ನು ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಾಜ್ಯದ ರೈತರು ಅತಿವೃಷ್ಟಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನೆಲೆಯಲ್ಲಿ, ರೈತರ ನೆರವಿಗೆ ಧಾವಿಸಿರುವ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ನೇತೃತ್ವದಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಕೇಂದ್ರದ ಈ ಕ್ರಮದಿಂದಾಗಿ ಸಂಕಷ್ಟದಲ್ಲಿರುವ ರಾಜ್ಯದ ಲಕ್ಷಾಂತರ ರೈತರಿಗೆ ಅನುಕೂಲವಾಗಲಿದೆ. ಕೇಂದ್ರ ಸರ್ಕಾರವು ಬೆಂಬಲ ಬೆಲೆ ಯೋಜನೆಯಡಿ (MSP) ಕರ್ನಾಟಕದಿಂದ 38,000 ಮೆಟ್ರಿಕ್ ಟನ್ ಹೆಸರು ಕಾಳು, 60,810 ಮೆಟ್ರಿಕ್ ಟನ್ ಉದ್ದು, 15,650 ಮೆಟ್ರಿಕ್ ಟನ್ ಸೂರ್ಯಕಾಂತಿ, 61,148 ಮೆಟ್ರಿಕ್ ಟನ್ ನೆಲಗಡಲೆ, ಮತ್ತು 1,15,000 ಮೆಟ್ರಿಕ್ ಟನ್ ಸೋಯಾಬಿನ್ ಖರೀದಿಸಲು ಅನುಮತಿ ನೀಡಿದೆ.

ಕೇಂದ್ರ ಸರ್ಕಾರವು ರೈತರಿಗೆ ಕಲ್ಪಿಸಿರುವ ಈ ಬೆಂಬಲ ಬೆಲೆ ಯೋಜನೆಯ ನೆರವನ್ನು ರಾಜ್ಯ ಸರ್ಕಾರವು ತ್ವರಿತವಾಗಿ ತಲುಪಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ. ರಾಜ್ಯಾದ್ಯಂತ ಜಿಲ್ಲಾವಾರು ಖರೀದಿ ಕೇಂದ್ರಗಳನ್ನು ತಕ್ಷಣವೇ ತೆರೆದು, ಧಾನ್ಯಗಳ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಕರ್ನಾಟಕದ ರೈತರ ಸಂಕಷ್ಟಕ್ಕೆ ಸ್ಪಂದಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಸಚಿವ ಪ್ರಲ್ಹಾದ ಜೋಶಿ ರಾಜ್ಯದ ರೈತರ ಪರವಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

Read More
Next Story