ನೇಪಾಳದಲ್ಲಿ ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿ ಹೋರಾಟ : ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ
x

ನೇಪಾಳದಲ್ಲಿ ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿ ಹೋರಾಟ : ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ

ಸೋಮವಾರ ನಡೆದ ಪ್ರತಿಭಟನೆ ವೇಳೆ ಪೊಲೀಸರು ಪ್ರತಿಭಟನಾಕಾರರ ಮೇಲೆ ಅಶ್ರುವಾಯು, ರಬ್ಬರ್ ಬುಲೆಟ್ ಮತ್ತು ಅಂತಿಮವಾಗಿ ಗುಂಡಿನ ದಾಳಿ ನಡೆಸಿದ್ದರು.


Click the Play button to hear this message in audio format

ನೇಪಾಳದಲ್ಲಿ ಭ್ರಷ್ಟಾಚಾರ ಮತ್ತು ಸರ್ಕಾರದ ದಮನಕಾರಿ ನೀತಿಗಳ ವಿರುದ್ಧ ಭುಗಿಲೆದ್ದ ಬೃಹತ್ ಜನಾಂದೋಲನವು ಹಿಂಸಾರೂಪಕ್ಕೆ ತಿರುಗಿದ ಪರಿಣಾಮವಾಗಿ, ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರು ಮಂಗಳವಾರ (ಸೆಪ್ಟೆಂಬರ್ 9 ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ದೇಶದ ರಾಜಕೀಯ ಇತಿಹಾಸದಲ್ಲಿಯೇ ಇತ್ತೀಚಿನ ದಶಕಗಳಲ್ಲಿ ನಡೆದ ಅತ್ಯಂತ ತೀವ್ರ ಪ್ರತಿಭಟನೆ ಇದಾಗಿದ್ದು, ಯುವಜನರ ಆಕ್ರೋಶಕ್ಕೆ ಇಡೀ ಸರ್ಕಾರವೇ ತಲೆಬಾಗಿದೆ. ದೇಶದಲ್ಲಿ ಉಂಟಾಗಿರುವ ಗಂಭೀರ ಬಿಕ್ಕಟ್ಟನ್ನು ಪರಿಹರಿಸಲು ಮತ್ತು ಸಾಂವಿಧಾನಿಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಓಲಿ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಬೃಹತ್ ಪ್ರತಿಭಟನೆಯ ಕಿಡಿಯನ್ನು ಹೊತ್ತಿಸಿದ್ದು ಸರ್ಕಾರದ ಒಂದು ತಪ್ಪು ನಿರ್ಧಾರ. ಓಲಿ ಸರ್ಕಾರದ ವಿರುದ್ಧ ವ್ಯಾಪಕ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದವು. ಸಚಿವರು ಮತ್ತು ರಾಜಕಾರಣಿಗಳ ಮಕ್ಕಳು ನಡೆಸುತ್ತಿದ್ದ ಐಷಾರಾಮಿ ಜೀವನಶೈಲಿಯನ್ನು 'ಜೆನ್-ಝಡ್' (Gen Z) ಎಂದು ಕರೆಯಲ್ಪಡುವ ಯುವ ಸಮುದಾಯವು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶ್ನಿಸಲು ಆರಂಭಿಸಿತ್ತು. "ಸಾರ್ವಜನಿಕ ಸೇವಕರ ಮಕ್ಕಳಿಗೆ ಇಷ್ಟೊಂದು ಸಂಪತ್ತು ಎಲ್ಲಿಂದ ಬಂತು?" ಎಂಬ ಅಭಿಯಾನವು ದೇಶಾದ್ಯಂತ ಸಂಚಲನ ಮೂಡಿಸಿತ್ತು. ಈ ಆನ್‌ಲೈನ್ ಆಕ್ರೋಶವನ್ನು ಹತ್ತಿಕ್ಕುವ ಉದ್ದೇಶದಿಂದ, ಸರ್ಕಾರವು ಫೇಸ್‌ಬುಕ್ ಮತ್ತು 'ಎಕ್ಸ್' ಸೇರಿದಂತೆ 26 ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಷೇಧಿಸಿತು. ಇದು ಜನರ ವಾಕ್ ಸ್ವಾತಂತ್ರ್ಯದ ಮೇಲಿನ ಹಲ್ಲೆ ಎಂದು ಪರಿಗಣಿಸಲ್ಪಟ್ಟು, ಆಕ್ರೋಶದ ಬೆಂಕಿಗೆ ತುಪ್ಪ ಸುರಿದಂತಾಯಿತು.

ವಿದ್ಯಾರ್ಥಿಗಳ ಪ್ರತಿಭಟನೆ

ಸರ್ಕಾರದ ನಿಷೇಧದ ವಿರುದ್ಧ ದೇಶದಾದ್ಯಂತ, ವಿಶೇಷವಾಗಿ ರಾಜಧಾನಿ ಕಠ್ಮಂಡುವಿನಲ್ಲಿ, ವಿದ್ಯಾರ್ಥಿಗಳು ಮತ್ತು ಯುವಜನರು ಬೀದಿಗಿಳಿದು ಪ್ರತಿಭಟನೆ ಆರಂಭಿಸಿದರು. ಸೋಮವಾರ ನಡೆದ ಪ್ರತಿಭಟನೆ ವೇಳೆ ಪೊಲೀಸರು ಪ್ರತಿಭಟನಾಕಾರರ ಮೇಲೆ ಅಶ್ರುವಾಯು, ರಬ್ಬರ್ ಬುಲೆಟ್ ಮತ್ತು ಅಂತಿಮವಾಗಿ ಗುಂಡಿನ ದಾಳಿ ನಡೆಸಿದರು. ಈ ಘಟನೆಯಲ್ಲಿ ಕನಿಷ್ಠ 19 ಜನರು ಮೃತಪಟ್ಟು, ನೂರಾರು ಮಂದಿ ಗಾಯಗೊಂಡರು. ಇದು ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಿತು.

ಸರ್ಕಾರದ ಕರ್ಫ್ಯೂ ಆದೇಶವನ್ನು ಧಿಕ್ಕರಿಸಿ, ಪ್ರತಿಭಟನಾಕಾರರು "ವಿದ್ಯಾರ್ಥಿಗಳನ್ನು ಕೊಲ್ಲಬೇಡಿ" ಎಂಬ ಘೋಷಣೆಗಳನ್ನು ಕೂಗುತ್ತಾ ಬೀದಿಗಿಳಿದರು. ಆಕ್ರೋಶಗೊಂಡ ಪ್ರತಿಭಟನಾಕಾರರು ಮಾಜಿ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರ ಮನೆಗೆ ಬೆಂಕಿ ಹಚ್ಚಿದರು. ಅಷ್ಟೇ ಅಲ್ಲದೆ, ಪ್ರಧಾನಿ ಓಲಿ ಅವರ ಖಾಸಗಿ ನಿವಾಸಕ್ಕೂ ಬೆಂಕಿ ಹಚ್ಚಲಾಗಿದೆ ಎಂದು ವರದಿಯಾಗಿದೆ.

ಪರಿಸ್ಥಿತಿ ಕೈಮೀರುತ್ತಿದ್ದಂತೆ, ಪ್ರಧಾನಿ ಓಲಿ ಅವರು ಸೇನಾ ಮುಖ್ಯಸ್ಥ ಜನರಲ್ ಅಶೋಕ್ ರಾಜ್ ಸಿಗ್ಡೆಲ್ ಅವರನ್ನು ಭೇಟಿಯಾಗಿ ಸೇನಾ ನೆರವು ಕೋರಿದರು. ಆದರೆ, ಸೇನಾ ಮುಖ್ಯಸ್ಥರು ಪರಿಸ್ಥಿತಿಯನ್ನು ತಿಳಿಗೊಳಿಸಲು ರಾಜೀನಾಮೆ ನೀಡುವಂತೆ ಸಲಹೆ ನೀಡಿದರು ಎನ್ನಲಾಗಿದೆ. ಇದರ ಬೆನ್ನಲ್ಲೇ, ಸರ್ಕಾರದ ಕ್ರಮಗಳನ್ನು ವಿರೋಧಿಸಿ ಮತ್ತು ಹೆಚ್ಚುತ್ತಿರುವ ಹಿಂಸಾಚಾರದ ನೈತಿಕ ಹೊಣೆ ಹೊತ್ತು, ಗೃಹ ಸಚಿವ ರಮೇಶ್ , ಕೃಷಿ ಸಚಿವ ರಾಮ್ ನಾಥ್ ಅಧಿಕಾರಿ ಮತ್ತು ಜಲಸಂಪನ್ಮೂಲ ಸಚಿವ ಪ್ರದೀಪ್ ಯಾದವ್ ಸೇರಿದಂತೆ ಹಲವು ಸಚಿವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದರು.

ಪ್ರತಿಭಟನೆಯ ಕಾವು ಹೆಚ್ಚಾದ ನಂತರ ಸರ್ಕಾರ ಸಾಮಾಜಿಕ ಮಾಧ್ಯಮಗಳ ಮೇಲಿನ ನಿಷೇಧವನ್ನು ಹಿಂತೆಗೆದುಕೊಂಡರೂ, ಪರಿಸ್ಥಿತಿ ತಿಳಿಗೊಂಡಿಲ್ಲ. ಪ್ರಧಾನಿ ಓಲಿ ಅವರ ರಾಜೀನಾಮೆಯ ನಂತರ, ನೇಪಾಳ ಮತ್ತೊಮ್ಮೆ ರಾಜಕೀಯ ಅಸ್ಥಿರತೆಯ ಸುಳಿಗೆ ಸಿಲುಕಿದೆ. ಸಂಸತ್ತನ್ನು ವಿಸರ್ಜಿಸಿ, ಹೊಸದಾಗಿ ಚುನಾವಣೆ ನಡೆಸಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.

Read More
Next Story