
ಗುತ್ತಿಗೆದಾರನ ಆತ್ಮಹತ್ಯೆ| ಪ್ರಿಯಾಂಕ್ ವಿರುದ್ಧ ಸಾಕ್ಷ್ಯವಿಲ್ಲ; ರಾಜೀನಾಮೆ ಪಡೆಯುವುದಿಲ್ಲ: ಸಿದ್ದರಾಮಯ್ಯ
ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಹೆಸರಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ , ಸಾಕ್ಷ್ಯವಾಗಲಿ ಇಲ್ಲ. ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದಿದ್ದಾರೆ ಸಿದ್ದರಾಮಯ್ಯ.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಡ ಹೇರಿರುವ ನಡುವೆ ಖರ್ಗೆ ಪರ ಸಿಎಂ ಸಿದ್ದರಾಮಯ್ಯ ಬ್ಯಾಟ್ ಬೀಸಿದ್ದಾರೆ. ಪ್ರಿಯಾಂಕ್ ಮೇಲೆ ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ . ಹಾಗಾಗಿ ಅವರು ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ, ಎಂದು ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧ ಬಳಿ ಮಾಧ್ಯಮದ ಜತೆ ಮಾತನಾಡಿದ ಅವರು, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡಬೇಕೆಂಬ ಪ್ರತಿಪಕ್ಷಗಳ ಒತ್ತಾಯದ ಬಗ್ಗೆ ಪ್ರತಿಕ್ರಿಯೆ ನೀಡಿದರು.
"ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಹೆಸರಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ , ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ. ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ತನಿಖೆಯನ್ನು ಸಿಐಡಿ ಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ. ಆದರೆ ಇಂತಹದೇ ಪ್ರಕರಣದಲ್ಲಿ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು ಎಂದು ತಿಳಿಸಿದರು.
ಸಿಬಿಐ ಗೆ ವಹಿಸಿಲ್ಲ
ಬಿಜೆಪಿಯವರು ತನಿಖೆಯನ್ನು ಸಿಬಿಐ ಗೆ ವಹಿಸಬೇಕೆಂದು ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಪೊಲೀಸರ ಬಗ್ಗೆ ಬಿಜೆಪಿಯವರಿಗೆ ನಂಬಿಕೆಯಿಲ್ಲವೇ? ಬಿಜೆಪಿಯವರು ಅಧಿಕಾರದಲ್ಲಿದ್ದಾಗ , ಒಂದು ಪ್ರಕರಣವನ್ನೂ ಸಿಬಿಐಗೆ ವಹಿಸಿರಲಿಲ್ಲ. ಆದ್ದರಿಂದ ಸಿಬಿಐಗೆ ತನಿಖೆ ವಹಿಸಬೇಕೆಂಬ ಬೇಡಿಕೆ ಮುಂದಿರಿಸಲು ಬಿಜೆಪಿಯವರಿಗೆ ನೈತಿಕತೆ ಇಲ್ಲ ಎಂದು ತಿಳಿಸಿದರು.
ಸಿ.ಟಿ.ರವಿ ಪ್ರಕರಣ ಸಿಐಡಿ ತನಿಖೆ
ಎಂಎಲ್ಸಿ ಸಿ.ಟಿ. ರವಿಯವರು ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಿ.ಟಿ.ರವಿಯವರ ಪ್ರಕರಣವನ್ನೂ ಸಿಐಡಿಗೆ ವಹಿಸಲಾಗಿದೆ. ಅವಾಚ್ಯ ಪದಬಳಕೆ ಆಗಿರುವ ಬಗ್ಗೆ ಎಫ್ ಎಸ್ ಎಲ್ ವರದಿ ಬರಲಿದೆ. ಮಹಿಳಾ ಸಚಿವರಿಗೆ ಅವಹೇಳನ ಮಾಡಿರುವ ಆರೋಪವಿದ್ದು, ಸಿ.ಟಿ.ರವಿಯವರ ಮೇಲೆ ದೂರು ದಾಖಲಾಗಿದೆ ಎಂದರು.