RCB Champion | ಆರ್‌ಸಿಬಿ ತಂಡಕ್ಕೆ ಸರ್ಕಾರಿ ಸನ್ಮಾನ ; ತೆರೆದ ವಾಹನದಲ್ಲಿ ಆಟಗಾರರ ಮೆರವಣಿಗೆ ದಿಢೀರ್‌ ರದ್ದು
x

RCB Champion | ಆರ್‌ಸಿಬಿ ತಂಡಕ್ಕೆ ಸರ್ಕಾರಿ ಸನ್ಮಾನ ; ತೆರೆದ ವಾಹನದಲ್ಲಿ ಆಟಗಾರರ ಮೆರವಣಿಗೆ ದಿಢೀರ್‌ ರದ್ದು

ಆರ್‌ಸಿಬಿ ಗೆಲುವಿನ ಬೆನ್ನಲ್ಲೆ ಅಭಿಮಾನಿಗಳೊಂದಿಗೆ ಗೆಲುವಿನ ಸಂಭ್ರಮಾಚರಣೆ ಮಾಡಲು ಬೆಂಗಳೂರಿನಲ್ಲಿ ಏರ್ಪಡಿಸಿದ್ದ ವಿಜಯೋತ್ಸವ ಮೆರವಣಿಗೆಯನ್ನು ಸರ್ಕಾರ ಭದ್ರತಾ ಕ್ರಮಗಳ ಹಿನ್ನೆಲೆಯಲ್ಲಿ ರದ್ದುಪಡಿಸಿದೆ.


ಐಪಿಎಲ್‌-2025 ಚಾಂಪಿಯನ್‌ ಟ್ರೋಫಿಯೊಂದಿಗೆ ಬೆಂಗಳೂರಿಗೆ ಆಗಮಿಸುತ್ತಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದೊಂದಿಗೆ ವಿಜಯೋತ್ಸವ ಆಚರಿಸಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ರಾಜ್ಯ ಸರ್ಕಾರದಿಂದ ಆರ್‌ಸಿಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಿದೆ. ಬಳಿಕ ತೆರೆದ ವಾಹನದ ಮೆರವಣಿಗೆ ಮೂಲಕ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳುವ ಸಂತಸದಲ್ಲಿ ಅಭಿಮಾನಿಗಳ ದಂಡು ವಿಧಾನಸೌಧದತ್ತ ಆಗಮಿಸುತ್ತಿತ್ತು. ಆದರೆ, ಭದ್ರತಾ ಕಾರಣಗಳಿಂದ ಕೊನೆಯ ಕ್ಷಣದಲ್ಲಿ ಆರ್‌ಸಿಬಿ ಆಟಗಾರರ ತೆರೆದ ವಾಹನದ ಮೆರವಣಿಗೆಯನ್ನು ಸರ್ಕಾರ ರದ್ದುಪಡಿಸಿದೆ. ಇದರಿಂದ ಅಭಿಮಾನಿಗಳಿಗೆ ಭಾರೀ ನಿರಾಸೆಯಾಗಿದೆ.

ಆರ್‌ಸಿಬಿ ಆಟಗಾರರ ಮೆರವಣಿಗೆ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು, ಆರ್‌ಸಿಬಿ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದಿದೆ. ಈ ಹಿನ್ನೆಲೆಯಲ್ಲಿ ವಿಜಯೋತ್ಸವ ಮೆರವಣಿಗೆ ನಿಗದಿಪಡಿಸಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಪೊಲೀಸ್‌ ಇಲಾಖೆಯ ಅಭಿಪ್ರಾಯ ಹಾಗೂ ಭದ್ರತಾ ಕಾರಣಗಳಿಂದಾಗಿ ತೆರೆದ ವಾಹನದಲ್ಲಿ ಆಟಗಾರರ ಮೆರವಣಿಗೆ ರದ್ದು ಮಾಡಲಾಗಿದೆ. ಬದಲಿಗೆ ಆರ್‌ಸಿಬಿ ಆಟಗಾರರು ಬಸ್ಸಿನಲ್ಲಿ ನೇರವಾಗಿ ಕ್ರೀಡಾಂಗಣಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್‌) 2025 ಫೈನಲ್‌ ಪಂದ್ಯದಲ್ಲಿ ಆರ್‌ಸಿಬಿ ಐತಿಹಾಸಿಕ ಜಯ ಸಾಧಿಸಿದೆ. ಐಪಿಎಲ್ ಟ್ರೋಫಿಯೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಸಂಜೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಆಚರಿಸಲಿದೆ ಎಂದು ಹೇಳಿದರು.

ಆರ್‌ಸಿಬಿ ಗೆಲುವಿನ ಹಿನ್ನೆಲೆಯಲ್ಲಿ ಫ್ರಾಂಚೈಸಿಯು ಕ್ರಿಕೆಟ್‌ ಅಭಿಮಾನಿಗಳೊಂದಿಗೆ ವಿಜಯೋತ್ಸವ ಮೆರವಣಿಗೆ ನಡೆಸುವುದಾಗಿ ಘೋಷಣೆ ಮಾಡಿತ್ತು. ಆದರೆ, ಸಂಚಾರ ದಟ್ಟಣೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಮೆರವಣಿಗೆ ಸಾಧ್ಯವಾಗುವುದಿಲ್ಲ ಎಂದು ಸರ್ಕಾರ ಹೇಳಿರುವುದು ಆರ್‌ಸಿಬಿ ಅಭಿಮಾನಿಗಳಿಗೆ ನಿರಾಸೆ ತಂದೊಡ್ಡಿದೆ.

Read More
Next Story