
ದಿನೇಶ್ ಗುಂಡೂರಾವ್
ಧರ್ಮಸ್ಥಳ ರಕ್ಷಣೆಗೆ ಯಾರು ಹಿಂದೇಟು ಹಾಕುವ ಪ್ರಶ್ನೆಯಿಲ್ಲ : ಸಚಿವ ದಿನೇಶ್ ಗುಂಡೂರಾವ್
ಹಿಂದೂ ಆಗಲು ಬಿಜೆಪಿ ಸದಸ್ಯತ್ವ ಪಡೆಯಬೇಕಿಲ್ಲ. ಕಾಂಗ್ರೆಸ್ನಲ್ಲಿ ನಾವೆಲ್ಲರೂ ಹಿಂದೂಗಳೇ ಇದ್ದೇವೆ. ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಕೂಡ ಅಪ್ಪಟ ಹಿಂದೂ," ಎಂದು ಅವರು ತಿರುಗೇಟು ನೀಡಿದರು.
ಧರ್ಮಸ್ಥಳದ ರಕ್ಷಣೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಎಂದಿಗೂ ಹಿಂದೇಟು ಹಾಕುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಧರ್ಮಸ್ಥಳಕ್ಕೆ ದುರುದ್ದೇಶಪೂರ್ವಕವಾಗಿ ಕಳಂಕ ತರುವ ಹುನ್ನಾರ ನಡೆಯುತ್ತಿದೆಯೇ ಎಂಬುದರ ಬಗ್ಗೆಯೂ ವಿಶೇಷ ತನಿಖಾ ತಂಡ (SIT) ತನಿಖೆ ನಡೆಸುತ್ತಿದ್ದು, ಸತ್ಯಾಂಶ ಶೀಘ್ರದಲ್ಲೇ ಹೊರಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ವಿಕಾಸಸೌಧದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಸೌಜನ್ಯ ಪ್ರಕರಣ ನಡೆದಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ಈಗ ಅದರ ಹೆಸರಿನಲ್ಲಿ ಧರ್ಮಸ್ಥಳಕ್ಕೆ ಕಳಂಕ ಹಚ್ಚುವ ಪ್ರಯತ್ನವನ್ನು ಯಾರೋ ಮಾಡುತ್ತಿದ್ದಾರೆ. ಬಿಜೆಪಿ ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ," ಎಂದು ಆರೋಪಿಸಿದರು. ಅನಾಮಧೇಯ ದೂರಿನ ಆಧಾರದ ಮೇಲೆ ಉತ್ಖನನ ಮಾಡಿ ಸಿಕ್ಕ ವಸ್ತುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ನೂರಾರು ಶವಗಳಿವೆ ಎಂದು ದೊಡ್ಡ ಮಟ್ಟದಲ್ಲಿ ಬಿಂಬಿಸಿದ್ದು ಪೂರ್ವನಿಯೋಜಿತ ಪಿತೂರಿಯೇ ಎಂಬ ಬಗ್ಗೆಯೂ ಎಸ್ಐಟಿ ತನಿಖೆ ನಡೆಸುತ್ತಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಮೇಲೆ ಬಿಜೆಪಿ "ಹಿಂದೂ ವಿರೋಧಿ" ಎಂಬ ಆರೋಪ ಹೊರಿಸಲು ಪ್ರಯತ್ನಿಸುತ್ತಿದೆ ಎಂದು ದಿನೇಶ್ ಗುಂಡೂರಾವ್ ಕಿಡಿಕಾರಿದರು. "ಹಿಂದೂ ಆಗಲು ಬಿಜೆಪಿ ಸದಸ್ಯತ್ವ ಪಡೆಯಬೇಕಿಲ್ಲ. ಕಾಂಗ್ರೆಸ್ನಲ್ಲಿ ನಾವೆಲ್ಲರೂ ಹಿಂದೂಗಳೇ ಇದ್ದೇವೆ. ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಕೂಡ ಅಪ್ಪಟ ಹಿಂದೂ," ಎಂದು ಅವರು ತಿರುಗೇಟು ನೀಡಿದರು.
ದಸರಾ ಉದ್ಘಾಟನೆ ವಿವಾದ: ಬಿಜೆಪಿಗೆ ತಿರುಗೇಟು
ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಅವರ ಆಯ್ಕೆಯನ್ನು ಬಿಜೆಪಿ ವಿರೋಧಿಸುತ್ತಿರುವುದಕ್ಕೆ ಸಚಿವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. "ಬಾನು ಮುಷ್ತಾಕ್ ನಮ್ಮ ರಾಜ್ಯದ ಮಹಿಳೆ, ಅಂತರರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದಾರೆ. ಅವರ ಬಗ್ಗೆ ಬಿಜೆಪಿಗೆ ಏನು ಸಮಸ್ಯೆ? ಅಂದು ನಿಸಾರ್ ಅಹ್ಮದ್ ಅವರನ್ನು ಒಪ್ಪಿಕೊಂಡವರು, ಇಂದು ಬಾನು ಮುಷ್ತಾಕ್ ಅವರನ್ನು ಏಕೆ ವಿರೋಧಿಸುತ್ತಿದ್ದಾರೆ? ಇದು ಬಿಜೆಪಿಯ ಸಂಕುಚಿತ ಮನೋಭಾವವನ್ನು ತೋರಿಸುತ್ತದೆ," ಎಂದು ಅವರು ಹೇಳಿದರು.