ಬಿಜೆಪಿ-ಜೆಡಿಎಸ್‌ ಸುಳ್ಳು ಆರೋಪಗಳಿಗೆ ಹೆದರಲ್ಲ, ಅವರದ್ದೂ ಬಯಲಿಗೆಳಿತೀವಿ: ಸಿದ್ದರಾಮಯ್ಯ
x

ಬಿಜೆಪಿ-ಜೆಡಿಎಸ್‌ ಸುಳ್ಳು ಆರೋಪಗಳಿಗೆ ಹೆದರಲ್ಲ, ಅವರದ್ದೂ ಬಯಲಿಗೆಳಿತೀವಿ: ಸಿದ್ದರಾಮಯ್ಯ


ʻʻರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್‌ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ. ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದನಿದ್ದೇನೆʼʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ʻʻಜೆಡಿಎಸ್ ಹಾಗೂ ಬಿಜೆಪಿಯ ಪಾದಯಾತ್ರೆಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಬೃಹತ್ ಜನಾಂದೋಲನವನ್ನು ಮಾಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಸುಳ್ಳುಆರೋಪಗಳನ್ನು ಆಧರಿಸಿ ಪಾದಯಾತ್ರೆ ಮಾಡುತ್ತಿದ್ದು, ಸಿದ್ದರಾಮಯ್ಯ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಅವರ ಆರೋಪಗಳು ಸುಳ್ಳು ಎಂದು ಜನರಿಗೆ ಮನವರಿಕೆ ಮಾಡಲು ಜನಾಂದೋಲನ ಮಾಡಲಾಗಿದೆʼʼ ಎಂದು ಹೇಳಿದರು.

ʻʻಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ಹೂಡಿದ್ದಾರೆ. ಸುಳ್ಳು ಆರೋಪಗಳಿಂದ ನನ್ನ ಮೇಲೆ ಮಸಿ ಬಳಿದರೆ, ರಾಜಕೀಯವಾಗಿ ನನ್ನನ್ನು ಮಣಿಸಿ ಲಾಭ ಪಡೆಯಬಹುದು ಎಂಬ ಭ್ರಮೆಯಲ್ಲಿದ್ದಾರೆʼʼ ಎಂದರು.

ʻʻಬಿಜೆಪಿ ಜೆಡಿಎಸ್‌ನವರ ಹಗರಣಗಳು ಬೇಕಾದಷ್ಟಿದ್ದು ಅವುಗಳನ್ನು ಬಯಲಿಗೆಳೆಯುತ್ತೇವೆ. ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಯಡಿಯೂರಪ್ಪ ಸೇರಿದಂತೆ ಹಲವರ ಮೇಲೆ ಇರುವ ಹಗರಣಗಳ ವಿರುದ್ಧ ತನಿಖೆ ಕೈಗೊಳ್ಳಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದುʼʼ ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಸುವುದಾಗಿ ಬಿಜೆಪಿ, ಜೆಡಿಎಸ್ ನಾಯಕರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ʻʻಸುಳ್ಳು ಆರೋಪಗಳನ್ನಾಧರಿಸಿದ ಹೋರಾಟಗಳಿಗೆ ನಾನು ಹೆದರುವುದಿಲ್ಲ. ಬಿಜೆಪಿ ಜೆಡಿಎಸ್ ನ ಹೋರಾಟದ ಸತ್ಯಾಸತ್ಯತೆಗಳು ಜನರಿಗೆ ತಿಳಿದಾಗ, ಅವರೇ ಈ ಹೋರಾಟವನ್ನು ಹತ್ತಿಕ್ಕುತ್ತಾರೆ. ಸರ್ಕಾರ ಹಾಗೂ ನನ್ನ ಮೇಲೆ ಬಂದಿರುವ ಆರೋಪಗಳನ್ನು ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಎದುರಿಸುತ್ತೇವೆʼʼ ಎಂದರು.

Read More
Next Story