
ಜಾತಿಗಣತಿ -2025 | ಹೊಸ ಜಾತಿಗಳ ಸೇರ್ಪಡೆಗೆ ವಿರೋಧ; ಸಮೀಕ್ಷೆಯಿಂದ ಎಲ್ಲ ಹೊಸ ಜಾತಿ ಕೈಬಿಡಲು ನಿರ್ಧಾರ?
ಎಚ್.ಕಾಂತರಾಜು ಹಾಗೂ ಜಯಪ್ರಕಾಶ್ ಹೆಗ್ಡೆ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ವರದಿಯಲ್ಲಿ ಸೃಷ್ಟಿಸಿದ 331 ಹೊಸ ಜಾತಿಗಳನ್ನು ಸಮೀಕ್ಷೆಯಲ್ಲಿ ಸೇರಿಸಿರುವುದು ವಿವಾದಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಅಂತಿಮ ಹಂತದ ಸಿದ್ಧತೆಗಳು ಮುಗಿದಿರುವ ಬೆನ್ನಲ್ಲೇ ಮಹತ್ವದ ಬೆಳವಣಿಗೆಯಲ್ಲಿ ಹೊಸ ಜಾತಿಗಳನ್ನು ಸಮೀಕ್ಷೆಯಿಂದ ಹೊರಗಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಜಾತಿ ಪಟ್ಟಿಯಲ್ಲಿ ಇಲ್ಲದ ಹೊಸ ಜಾತಿಗಳನ್ನು ಸಮೀಕ್ಷೆಗೆ ಪರಿಗಣಿಸಿದ ಸರ್ಕಾರದ ಕ್ರಮಕ್ಕೆ ವಿವಿಧ ಜಾತಿ ಸಮುದಾಯಗಳು, ಸಂಘಟನೆಗಳು ಹಾಗೂ ಸರ್ಕಾರದ ಸಚಿವರು ಕೂಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ರಾಜ್ಯ ಸರ್ಕಾರ ಸಮುದಾಯಗಳನ್ನು ಒಡೆಯುವ ಹುನ್ನಾರ ನಡೆಸಿದೆ ಎಂಬ ಟೀಕೆಗಳೂ ಕೇಳಿ ಬಂದಿದ್ದವು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹೊಸ ಜಾತಿಗಳನ್ನು ಸಮೀಕ್ಷೆಯಿಂದ ಕೈ ಬಿಡಲು ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
ಎಚ್.ಕಾಂತರಾಜು ಹಾಗೂ ಜಯಪ್ರಕಾಶ್ ಹೆಗ್ಡೆ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ವರದಿಯಲ್ಲಿ ಸೃಷ್ಟಿಸಿದ 331 ಹೊಸ ಜಾತಿಗಳನ್ನು ಸಮೀಕ್ಷೆಯಲ್ಲಿ ಸೇರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಮತಾಂತರ ಕ್ರಿಶ್ಚಿಯನ್ನರನ್ನು ಹಿಂದೂ ಜಾತಿಗಳೊಂದಿಗೆ ಸೇರಿಸಿರುವ ಸರ್ಕಾರದ ಧೋರಣೆಗೆ ಆಕ್ಷೇಪ ವ್ಯಕ್ತವಾಗಿತ್ತು. ಸಚಿವ ಸಂಪುಟ ಸಭೆಯಲ್ಲೂ ವಿರೋಧ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಮತಾಂತರ ಕ್ರಿಶ್ಚಿಯನ್ನರು ಸೇರಿದಂತೆ ಹೊಸ 331 ಜಾತಿಗಳನ್ನು ಕೈಬಿಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.
ಸಿಎಂ ಅಸಮಾಧಾನ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಂತೆ ಸಂಪುಟ ಸಹೋದ್ಯೋಗಿಗಳ ಆಕ್ರೋಶಕ್ಕೆ ಸಿಎಂ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ನನ್ನನ್ನು ಮೇಲ್ಜಾತಿಗಳ ವಿರೋಧಿ ಎಂದು ಬಿಂಬಿಸಲಾಗುತ್ತಿದೆ. ಎಲ್ಲಾ ವರ್ಗದಲ್ಲೂ ಬಡವರಿದ್ದಾರೆ, ಅವರಿಗೆ ಅನುಕೂಲ ಮಾಡಿಕೊಡಲು ಸಮೀಕ್ಷೆ ನಡೆಸಲಾಗುತ್ತಿದೆ. ಅದಕ್ಕಾಗಿಯೇ ಈ ಹಿಂದಿನ ಆಯೋಗದ ವರದಿ ತಡೆ ಹಿಡಿಯಲಾಯಿತು ಎಂದು ಆಪ್ತರ ಬಳಿ ಸಿಎಂ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ನಮ್ಮ ಸಚಿವರೇ ಈ ರೀತಿ ಅಸಮಾಧಾನ ಹೊರಹಾಕಿದರೆ ಪ್ರತಿಪಕ್ಷಗಳಿಗೆ ರಾಜಕೀಯ ಅಸ್ತ್ರವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರತಿಪಕ್ಷಗಳಿಂದ ವಿರೋಧ
ಹಿಂದೂ ಧರ್ಮದಿಂದ ಕ್ರೈಸ್ತ ಮತಕ್ಕೆ ಮತಾಂತರವಾಗಿರುವವರು ಮೂಲ ಜಾತಿಯ ಹೆಸರು ಬಳಸದಂತೆ ಬಿಜೆಪಿ ಆಗ್ರಹಿಸಿತ್ತು. ಮತಾಂತರ ಜಾತಿಗಳನ್ನು ಇತರೆ ಹಿಂದುಳಿದ ಜಾತಿಗಳ (ಒಬಿಸಿ) ಒಳಮೀಸಲಾತಿಗೆ ಸೇರಿಸುವ ಹುನ್ನಾರ ಅಡಗಿದೆ ಎಂದು ದೂರಲಾಗಿತ್ತು. ಈ ಸಂಬಂಧ ರಾಜ್ಯಪಾಲರಿಗೂ ಬಿಜೆಪಿ ದೂರು ನೀಡಿತ್ತು.
ಸಮೀಕ್ಷೆಯಲ್ಲಿ 33 ಮತಾಂತರ ಕ್ರಿಶ್ಚಿಯನ್ ಜಾತಿಗಳಿಗೆ ಜಾತಿ ಸಂಖ್ಯೆ ನೀಡಲಾಗಿದೆ. ಅಕ್ಕಸಾಲಿಗ ಕ್ರಿಶ್ಚಿಯನ್, ಬಣಜಿಗ ಕ್ರಿಶ್ಚಿಯನ್, ಬಾರಿಕಾರ್ ಕ್ರಿಶ್ಚಿಯನ್, ಬೆಸ್ತ ಕ್ರಿಶ್ಚಿಯನ್, ಬಿಲ್ಲವ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಚರೋಡಿ ಕ್ರಿಶ್ಚಿಯನ್, ದೇವಾಂಗ ಕ್ರಿಶ್ಚಿಯನ್, ಈಡಿಗ ಕ್ರಿಶ್ಚಿಯನ್ ಸೇರಿದಂತೆ ಹಲವು ಜಾತಿಗಳನ್ನು ಸೇರಿಸಲಾಗಿತ್ತು. ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಆಯೋಗ ಸ್ಪಷ್ಟನೆ ಕೂಡ ನೀಡಿತ್ತು.
ನಾವು ಯಾವುದೇ ಪ್ರತ್ಯೇಕ ಜಾತಿ, ಧರ್ಮವನ್ನು ಸೃಷ್ಟಿ ಮಾಡಿಲ್ಲ. ಜನ ಹೇಳಿರುವ ಜಾತಿಗಳ ಹೆಸರಲ್ಲೇ ದತ್ತಾಂಶ ಸಂಗ್ರಹಿಸಲಾಗಿದೆ. ಆ ದತ್ತಾಂಶವನ್ನು ಪರಿಶೀಲಿಸಿ, ಮತಾಂತರ ಜಾತಿಗಳನ್ನು ಎಲ್ಲಿಗೆ ಸೇರಿಸಬೇಕು ಎಂದು ತಜ್ಞರ ಸಲಹೆ ಮೇರೆಗೆ ತೀರ್ಮಾನ ಮಾಡಲಾಗುವುದು ಎಂದು ಸ್ಪಷ್ಟನೆ ನೀಡಿತ್ತು.