
ಮುಖ್ಯಮಂತ್ರಿ ಸಿದ್ದರಾಮಯ್ಯ
ಸಂವಿಧಾನ ಬದಲಾವಣೆ ಹೇಳಿಕೆಗೆ ಪ್ರಧಾನಿ ಉತ್ತರಿಸಲಿ: ಸಿಎಂ ಸಿದ್ದರಾಮಯ್ಯ
ಪ್ರಜಾಪ್ರಭುತ್ವದ ಮೂಲ ಆಶಯಗಳಾದ ʼಜಾತ್ಯತೀತತೆʼ ಮತ್ತು ʼಸಮಾಜವಾದದʼ ಮೇಲೆ ಆರ್ಎಸ್ಎಸ್ ಮತ್ತು ಜನಸಂಘಗಳು ದಾಳಿ ಮಾಡಲು ಪ್ರಾರಂಭಿಸಿದಾಗ ಪ್ರಧಾನಿ ಇಂದಿರಾ ಗಾಂಧಿ 42ನೇ ತಿದ್ದುಪಡಿಗಳ ಮೂಲಕ ಈ ಪದಗಳನ್ನು ಸೇರಿಸಿದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಂವಿಧಾನದ ಪೀಠಿಕೆಯಲ್ಲಿರುವ ʼಸಮಾಜವಾದʼ ಹಾಗೂ ʼಜಾತ್ಯಾತೀತತೆʼ ಪದಗಳನ್ನು ತೆಗೆಯಲು ಆರ್ಎಸ್ಎಸ್ ಹುನ್ನಾರ ನಡೆಸುತ್ತಿದೆ. ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ನೀಡಿರುವ ಬಿಜೆಪಿಗರ ಮನಸ್ಥಿತಿ ಸೂಚಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ʼಎಕ್ಸ್ʼ ಖಾತೆಯಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅವರು, ಸಂವಿಧಾನದ ಪೀಠಿಕೆಯಿಂದ ’ಸಮಾಜವಾದಿ’ ಮತ್ತು ʼಜಾತ್ಯತೀತʼ ಪದಗಳನ್ನು ತೆಗೆಯುವ ಕುರಿತಂತೆ ಆರ್ಎಸ್ಎಸ್ ನಾಯಕರು ನೀಡಿರುವ ಹೇಳಿಕೆ ಬಗ್ಗೆ ಗಂಭೀರ ಚರ್ಚೆ ನಡೆಯಬೇಕಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಪ್ರಧಾನಿ ಉತ್ತರಕ್ಕೆ ಸಿಎಂ ಆಗ್ರಹ
ಆಡಳಿತಾರೂಢ ಬಿಜೆಪಿ ಹೈಕಮಾಂಡ್ನಿಂದಲೇ ಇಂತಹ ಅಭಿಪ್ರಾಯ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ದೇಶದ ಜನರಿಗೆ ಉತ್ತರ ನೀಡಬೇಕು ಎಂದು ಸಿಎಂ ಒತ್ತಾಯಿಸಿದ್ದಾರೆ.
ಭಾರತದ ಸಂವಿಧಾನದಲ್ಲಿ ಅಡಕವಾಗಿರುವ ʼಸಮಾಜವಾದಿʼ ಮತ್ತು ʼಜಾತ್ಯತೀತʼ ಪದಗಳನ್ನು ದೇಶ ಒಪ್ಪಿಕೊಂಡಿದೆ. ಸಂವಿಧಾನದ ಮೂಲಪೀಠಿಕೆಯಲ್ಲಿ ಈ ಪದಗಳನ್ನು ಮೊದಲು ಸೇರಿಸಿರಲಿಲ್ಲ. ಸಂವಿಧಾನದ ಮೇಲೆ ಆರ್ಎಸ್ಎಸ್ ಮತ್ತು ಜನಸಂಘಗಳು ದಾಳಿ ಮಾಡಲು ಪ್ರಾರಂಭಿಸಿದಾಗ ಪ್ರಧಾನಿ ಇಂದಿರಾಗಾಂಧಿ ಅವರು 42ನೇ ತಿದ್ದುಪಡಿ ಮೂಲಕ ಈ ಪದಗಳನ್ನು ಸೇರಿಸಿದರು. ಇಡೀ ದೇಶವೇ ಜಾತ್ಯಾತೀತ ಹಾಗೂ ಸಮಾಜವಾದ ಒಪ್ಪಿಕೊಂಡಿವೆ ಎಂದು ಹೇಳಿದ್ದಾರೆ.
ಆರಂಭದಿಂದಲೂ ಸಂವಿಧಾನ ವಿರೋಧಿ
ಸಂವಿಧಾನವನ್ನು ಆರ್ಎಸ್ಎಸ್ ವಿರೋಧಿಸುತ್ತಿರುವುದು ಹೊಸ ಬೆಳವಣಿಗೆಯೇನಲ್ಲ. ಬಿಜೆಪಿ ಮತ್ತು ಅದರ ಮಾತೃಸಂಸ್ಥೆಯಾಗಿರುವ ಆರ್ಎಸ್ಎಸ್ ಸಂವಿಧಾನವನ್ನು ಅದರ ರಚನೆಯ ದಿನದಿಂದಲೇ ವಿರೋಧಿಸುತ್ತಾ ಬಂದಿವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ದೇಶಕ್ಕೆ ಅರ್ಪಿಸಿದ್ದ ನಾಲ್ಕೇ ದಿನಕ್ಕೆ ಅದನ್ನು ವಿರೋಧಿಸಿ ಆರ್ಎಸ್ಎಸ್ ಮುಖವಾಣಿ ಆರ್ಗನೈಸರ್ ನಲ್ಲಿ ‘’ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಭಾರತೀಯತೆಯಾಗಲಿ, ಪುರಾತನ ಭಾರತದ ಕಟ್ಟುಕಟ್ಟಳೆಗಳಾಗಲಿ ಇಲ್ಲ, ಇದೇ ಈ ಸಂವಿಧಾನದ ಅತ್ಯಂತ ಕೆಟ್ಟ ವಿಚಾರ’’ ಎಂದು ಸಂಪಾದಕೀಯ ಬರೆಯಲಾಗಿತ್ತು.
ಆರ್ಎಸ್ಎಸ್ ನಾಯಕರ ವಾದವೇನು?
‘’ ಭಾರತದ ಸಂವಿಧಾನ ಎನ್ನುವುದು ಬೇರೆ ದೇಶಗಳ ಸಂವಿಧಾನದ ಕಾಲಂಗಳನ್ನು ಹೆಕ್ಕಿ ತಂದು ಒಟ್ಟುಗೂಡಿಸಿದ ಕಂತೆ, ಅದರಲ್ಲಿ ಭಾರತೀಯತೆಯೇ ಇಲ್ಲ." ಎಂದು ಎಂ.ಎಸ್.ಗೋಲ್ವಾಲ್ಕರ್ ಹೇಳಿದ್ದರು.
‘’ಮನುಸ್ಮೃತಿಯೇ ನಿಜವಾದ ಹಿಂದೂ ಕಾನೂನು, ಅದೇ ಹಿಂದೂಗಳ ಪೂಜ್ಯನೀಯ ಗ್ರಂಥ. ಈ ಮನುಸ್ಮೃತಿಯ ಆಶಯಗಳು ಸಂವಿಧಾನದಲ್ಲಿ ಇಲ್ಲ." ಎಂದು ವಿ.ಡಿ. ಸಾವರ್ಕರ್ ತಿಳಿಸಿದ್ದರು.
ಜನರ ತಾಳ್ಮೆ ಪರೀಕ್ಷೆಗೆ ಪದೇ ಪದೇ ಹೇಳಿಕೆ
ಸಂವಿಧಾನದ ಬಗ್ಗೆ ಆರ್ಎಸ್ಎಸ್ ಮತ್ತು ಅದರ ನಾಯಕರು ಬಹಿರಂಗವಾಗಿ ವ್ಯಕ್ತಪಡಿಸುವ ಅಭಿಪ್ರಾಯವನ್ನು ಇಲ್ಲಿಯವರೆಗೂ ಬಿಜೆಪಿ ನಾಯಕರು ತಿರಸ್ಕರಿಸಿಲ್ಲ. ಇದರ ಬದಲಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲ ಆರ್ಎಸ್ಎಸ್ ನಾಯಕರು ಹಾಗೂ ಬಿಜೆಪಿಯ ಕೆಳಹಂತದ ನಾಯಕರು ಸಂವಿಧಾನ ಬದಲಾವಣೆಯ ಕೂಗು ಹಾಕುತ್ತಾ ಜನರ ನಾಡಿ ಮಿಡಿತ ಪರೀಕ್ಷಿಸುವ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ಈ ಕಳ್ಳಾಟವನ್ನು ದೇಶದ ಪ್ರಜ್ಞಾವಂತ ಜನ ಅರ್ಥಮಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ 400 ಸ್ಥಾನಗಳನ್ನು ಗೆದ್ದರೆ ಸಂವಿಧಾನವನ್ನು ಬದಲಾಯಿಸುವುದಾಗಿ ಬಿಜೆಪಿ ಪಕ್ಷದ ಕೆಲ ಕೂಗುಮಾರಿಗಳಿಂದ ಘೋಷಣೆ ಮಾಡಿಸಿದ್ದ ಬಿಜೆಪಿ ಅದಕ್ಕೆ ತಕ್ಕ ಉತ್ತರ ಪಡೆದಿದೆ. ನಮ್ಮ ನಡುವಿನ ಒಂದಷ್ಟು ಜಾತ್ಯತೀತ ನಿಲುವಿನ ಪಕ್ಷಗಳು ಅಧಿಕಾರದ ಲಾಲಸೆಯಿಂದ ರಾಜಿ ಮಾಡಿಕೊಳ್ಳದೆ ಇದ್ದರೆ ಬಿಜೆಪಿ ಇಂದು ವಿರೋಧಪಕ್ಷದ ಸ್ಥಾನದಲ್ಲಿ ಕೂರಬೇಕಾಗಿತ್ತು. ಇದರ ನಂತರವೂ ಬಿಜೆಪಿ ತನ್ನ ಕುಟಿಲ ಪ್ರಯತ್ನವನ್ನು ಮುಂದುವರಿಸಿರುವುದು ವಿಷಾದನೀಯ ಎಂದು ಟೀಕಿಸಿದ್ದಾರೆ.
ಈಗಲೂ ಎಚ್ಚೆತ್ತುಕೊಳ್ಳದೆ ತಮ್ಮ ಕುಟಿಲ ಪ್ರಯತ್ನವನ್ನು ಹೀಗೆಯೇ ಮುಂದುವರಿಸಿದರೆ ದೇಶದ ಪ್ರಜಾಪ್ರಭುತ್ವ ಪ್ರೇಮಿಗಳು ಬಿಜೆಪಿಗೆ ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದು ತಿಳಿಸಿದ್ದಾರೆ.