ಮುರುಘಾ ಶ್ರೀ ಪ್ರಕರಣ | ಪೋಕ್ಸೋ ರದ್ದುಗೊಳಿಸಲು ಹೈಕೋರ್ಟ್‌ ನಕಾರ, ಪ್ರಕ್ರಿಯೆ ಮುಂದುವರಿಸಲು ಸೂಚನೆ
x

ಮುರುಘಾ ಶ್ರೀ ಪ್ರಕರಣ | ಪೋಕ್ಸೋ ರದ್ದುಗೊಳಿಸಲು ಹೈಕೋರ್ಟ್‌ ನಕಾರ, ಪ್ರಕ್ರಿಯೆ ಮುಂದುವರಿಸಲು ಸೂಚನೆ


ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ(ಪೋಕ್ಸೋ) ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶ್ರೀ ವಿರುದ್ಧದ ಅತ್ಯಾಚಾರ ಆರೋಪವನ್ನು ರದ್ದುಗೊಳಿಸಲು ಹೈಕೋರ್ಟ್‌ ನಿರಾಕರಿಸಿದೆ.

ಪೋಕ್ಸೋ ಕಾಯ್ದೆ, ಬಾಲನ್ಯಾಯ(ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆ, ಐಪಿಸಿ, ಧಾರ್ಮಿಕ ಸಂಸ್ಥೆಗಳ(ದುರುಪಯೋಗ ತಡೆ) ಕಾಯ್ದೆಯಡಿ ಬಾಕಿ ಉಳಿದಿರುವ ಪ್ರಕ್ರಿಯೆಗಳನ್ನು ಪ್ರಶ್ನಿಸಿ ಡಾ.ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿದ್ದ ನಾಲ್ಕು ಪ್ರತ್ಯೇಕ ಅರ್ಜಿಗಳನ್ನು ಭಾಗಶಃ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ಅತ್ಯಾಚಾರ ಪ್ರಕರಣ ರದ್ದು ಕೋರಿ ಮುರುಘಾ ಶ್ರೀ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿ, ಪ್ರಕರಣದ ಕಾನೂನು ಪ್ರಕ್ರಿಯೆಗಳು ಮುಂದುವರಿಸಲು ಆದೇಶಿಸಿದ್ದಾರೆ.

ಅದೇ ಹೊತ್ತಿಗೆ, ಮುರುಘಾ ಶ್ರೀ ವಿರುದ್ಧ ದಾಖಲಿಸಿದ್ದ ಸಾಮೂಹಿಕ ಅತ್ಯಾಚಾರ ಮತ್ತು ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಪ್ರಕರಣವನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಚಿತ್ರದುರ್ಗದ ವಿಶೇಷ ನ್ಯಾಯಾಲಯವು 2023ರ ಏಪ್ರಿಲ್‌ 13 ಮತ್ತು 20ರಂದು ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಆರೋಪ ನಿಗದಿ ಮಾಡಿರುವ ಆದೇಶಗಳನ್ನು ವಜಾ ಮಾಡುವಂತೆ ಕೋರಿ ಡಾ. ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಭಾಗಶಃ ಪುರಸ್ಕರಿಸಿದೆ.

ಪೋಕ್ಸೋ ಪ್ರಕರಣಗಳ ವಿಶೇಷ ನ್ಯಾಯಾಲಯ ಪ್ರಾಸಿಕ್ಯೂಷನ್‌ನ 'ಪೋಸ್ಟ್ ಆಫೀಸ್'ನಂತೆ ವರ್ತಿಸಬಾರದಿತ್ತು. ʼʼಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯಿದೆ-1988ರ ಸೆಕ್ಷನ್‌ಗಳಾದ 3(ಎಫ್‌), 3(ಸಿ), 3(5) ಮತ್ತು 7 ಮುರುಘಾ ಮಠಕ್ಕೆ ಅನ್ವಯಿಸುವುದಿಲ್ಲʼʼ ಎಂದು ಹೈಕೋರ್ಟ್‌ನ ಸಮನ್ವಯ ಪೀಠ ಆದೇಶದಲ್ಲಿ ಹೇಳಿದೆ.

ʼʼಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯಿದೆ–1989ರ ಸೆಕ್ಷನ್‌ಗಳಾದ 3(1)(ಡಬ್ಲ್ಯು)(i)(ii), 3(2)(v)(v-a) ಮತ್ತು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯಿದೆ–2015ರ ಸೆಕ್ಷನ್‌ 75 ಅನ್ನು ತಪ್ಪಾಗಿ ಮುರುಘಾ ಶರಣರಿಗೆ ಅನ್ವಯಿಸಲಾಗುವುದಿಲ್ಲ. ಬದಲಿಗೆ, ಇದು ಪ್ರಕರಣದಲ್ಲಿ ಎರಡನೇ ಆರೋಪಿ ಬಸವಶ್ರೀಗೆ ಅನ್ವಯಿಸುತ್ತದೆ. ಮುರುಘಾ ಶ್ರೀ ವಿರುದ್ಧ ತಪ್ಪಾಗಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ವರದಿಯಾಗುವುದಕ್ಕೂ ಮುನ್ನ 3.5 ವರ್ಷಗಳ ಹಿಂದೆ ಸಾಕ್ಷ್ಯ ನಾಶಪಡಿಸಲಾಗಿದ್ದು, ಐಪಿಸಿ ಸೆಕ್ಷನ್‌ 201ರ ಅಡಿ ತಪ್ಪಾಗಿ ಸಾಕ್ಷ್ಯ ನಾಶ ಆರೋಪ ಹೊರಿಸಲಾಗಿದೆʼʼ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.‌

ಇದೆಲ್ಲದರ ನಡುವೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್‌ 376(2)ಎನ್‌ ಮತ್ತು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯಿದೆ–2012ರ ಸೆಕ್ಷನ್‌ 4 ಮತ್ತು 6ರ ಅಡಿ ಆರೋಪ ಮುಂದುವರಿಯಲಿವೆ. ಹೊಸದಾಗಿ ಆರೋಪ ನಿಗದಿ ಮಾಡಿ, ಪ್ರಕ್ರಿಯೆ ಮುಂದುವರಿಸುವಂತೆ ಅಧೀನ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಆರೋಪ ನಿಗದಿ ಎಂಬುದು ಸಮಗ್ರ ವರದಿಯಾಗಿದ್ದು, ಈ ಆದೇಶದಲ್ಲಿನ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಆರೋಪಿ ಮುರುಘಾ ಶರಣರ ವಿರುದ್ಧ ಮರು ಆರೋಪ ನಿಗದಿ ಮಾಡಬೇಕು.

ಆಗಸ್ಟ್ 2022ರಲ್ಲಿ ಮುರುಘಾ ಶ್ರೀಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ನವೆಂಬರ್ 2023 ರಲ್ಲಿ ಒಂದು ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದ ಹೈಕೋರ್ಟ್, ಎರಡು ಪ್ರಕರಣಗಳಲ್ಲಿ ಬಾಕಿ ಉಳಿದಿರುವ ವಿಚಾರಣೆ ಮುಗಿಯುವವರೆಗೆ ಚಿತ್ರದುರ್ಗ ಜಿಲ್ಲೆಗೆ ಪ್ರವೇಶಿಸಬಾರದು ಎಂಬ ಷರತ್ತುಗಳನ್ನು ವಿಧಿಸಿದೆ. ವಿಚಾರಣೆ ವೇಳೆ ಅವರು ತಪ್ಪದೇ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

Read More
Next Story