
ರಾಜಕೀಯ ಏರುಪೇರು ಹೊಸತಲ್ಲ; ಅಭಿಮಾನದ ಅತಿರೇಕ ಬೇಡ: ಅಭಿಮಾನಿಗಳಿಗೆ ಕೆ.ಎನ್ ರಾಜಣ್ಣ ಭಾವುಕ ಪೋಸ್ಟ್
ಅಭಿಮಾನದ ಅತಿರೇಕದಲ್ಲಿ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ, ಕೆಲವು ಯುವಜನರು ಅಹಿತಕರವಾಗಿ ತಮಗೆ ತಾವು ನೋವು ಮಾಡಿಕೊಂಡಿದ್ದು ನನ್ನ ಮನಸ್ಸಿಗೆ ದುಃಖ ತಂದಿದ್ದಾರೆ ಎಂದು ರಾಜಣ್ಣ ಹೇಳಿದ್ದಾರೆ.
ಸಂಪುಟದಿಂದ ವಜಾಗೊಂಡ ನಂತರ ಇದೇ ಮೊದಲ ಬಾರಿಗೆ ಕೆ.ಎನ್.ರಾಜಣ್ಣ ಅವರು ಭಾವುಕರಾಗಿ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ.
"ಆತ್ಮೀಯ ಹಾಗೂ ಅಭಿಮಾನಿ ಬಂಧುಗಳಲ್ಲಿ ನನ್ನದೊಂದು ಕೋರಿಕೆ. ರಾಜಕೀಯ ಏರುಪೇರುಗಳು ನನಗೆ ಹೊಸತಲ್ಲ, ಯಾವುದೇ ರಾಜಕೀಯ ಬದಲಾವಣೆಗೂ ಎಂದೂ ದೃಢಿಗೆಟ್ಟವನಲ್ಲ ನಾನು,ಇದು ಸಹ ಹಾಗೆಯೇ ಎಂದು ಹೇಳಲು ಇಚ್ಛಿಸುತ್ತೇನೆ.
ನಿಮ್ಮಲ್ಲಿ ನನ್ನ ವಿನಂತಿ ಏನೆಂದರೆ, ಯಾವುದೇ ಕಾರಣಕ್ಕೂ ಅಭಿಮಾನದ ಅತಿರೇಕದಲ್ಲಿ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ, ಕೆಲವು ಯುವಜನರು ಅಹಿತಕರವಾಗಿ ತಮಗೆ ತಾವು ನೋವು ಮಾಡಿಕೊಂಡಿದ್ದು ನನ್ನ ಮನಸ್ಸಿಗೆ ದುಃಖ ತಂದಿದ್ದಾರೆ. ನಿಮ್ಮನ್ನು ನಂಬಿಕೊಂಡು ನಿಮ್ಮ ಕುಟುಂಬಗಳು ಮನೆಯಲ್ಲಿ ಕಾಯುತ್ತವೆ. ನಾನು ಸಹ ನಿಮ್ಮನ್ನು ನನ್ನ ಕುಟುಂಬವೆಂದೇ ಭಾವಿಸಿದ್ದೇನೆ. ನಿಮ್ಮ ಪ್ರೀತಿ, ಅಭಿಮಾನ ಎಂತಹದ್ದು ಎಂಬುದನ್ನು ಕಣ್ಣಾರೆ ಕಂಡಿದ್ದೇನೆ. ಹಾಗಾಗಿ, ಯಾವುದೇ ತಪ್ಪು ನಿರ್ಧಾರ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.
ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವಂತಹ ಪ್ರಯತ್ನವನ್ನು ಮಾಡಬೇಡಿ, ನಾವೆಲ್ಲರೂ ಬುದ್ಧ, ಬಸವ, ಅಂಬೇಡ್ಕರ್ ಅವರ ಹಾದಿಯಲ್ಲೇ ಸಮಾಜ ಮುಖ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ನಮ್ಮ ನಾಯಕರಾದ ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಸಂವಿಧಾನ ಉಳಿಸುವ ಪ್ರಯತ್ನಕ್ಕೆ ಬಲ ತರಬೇಕಿದೆ, ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಕೈ ಬಲಪಡಿಸುವ ಕಡೆಗೆ ನಮ್ಮ ಚಿಂತನೆ ಇರಲಿ ಎಂದು ನಿಮ್ಮನ್ನು ಕೋರುತ್ತೇನೆ ಎಂದು ಹೇಳಿದ್ದಾರೆ.
ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವುದನ್ನು ಖಂಡಿಸಿ ತವರು ಕ್ಷೇತ್ರ ಮಧುಗಿರಿಯಲ್ಲಿ ಮಂಗಳವಾರ ರಾಜಣ್ಣ ಅಭಿಮಾನಿಗಳು ತೀವ್ರ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ರಾಜಣ್ಣ ಅಭಿಮಾನಿ ಶಿವಲಿಂಗ ಎಂಬುವರು ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆದಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ನಿರ್ಧಾರವನ್ನು ಹಿಂಪಡೆದು, ರಾಜಣ್ಣ ಅವರನ್ನು ಶೀಘ್ರವೇ ಸಂಪುಟಕ್ಕೆ ಮರುಸೇರ್ಪಡೆ ಮಾಡಿಕೊಳ್ಳಬೇಕು. ತಮ್ಮ ಈ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುವುದಾಗಿ ರಾಜಣ್ಣ ಅವರ ಅಭಿಮಾನಿಗಳು ಎಚ್ಚರಿಕೆ ನೀಡಿದ್ದರು.
ಸೋಮವಾರ ವಿಧಾನ ಮಂಡಲ ಅಧಿವೇಶನ ಆರಂಭವಾದ ಕೆಲ ಹೊತ್ತಿನಲ್ಲೇ ಕೆ.ಎನ್. ರಾಜಣ್ಣ ರಾಜೀನಾಮೆ ನೀಡಿದ ಬೆಳವಣಿಗೆ ನಡೆಯಿತು. ಸಂಜೆ ವೇಳೆ ರಾಜೀನಾಮೆ ಅಂಗೀಕರಿಸಿ ರಾಜ್ಯಪಾಲರು ಹೊರಡಿಸಿದ ಆದೇಶದಲ್ಲಿ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಲಾಗಿದೆ ಎಂದು ಉಲ್ಲೇಖಿಸಲಾಗಿತ್ತು.