
ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಅಕ್ಟೋಬರ್ 15ರವರೆಗೆ ಮಳೆ ಮುಂದುವರಿಕೆ
ಮಳೆಯೊಂದಿಗೆ ಮಿಂಚು, ಗುಡುಗು ಮತ್ತು ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮಳೆ ಅಕ್ಟೋಬರ್ 15ರವರೆಗೆ ಮುಂದುವರಿಯುವ ಸಾಧ್ಯತೆ ಇದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ತನ್ನ 'X' ಖಾತೆಯಲ್ಲಿ ಹವಾಮಾನ ವರದಿಯನ್ನು ಹಂಚಿಕೊಂಡಿದ್ದು, ಅಕ್ಟೋಬರ್ 15 ವರೆಗೆ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಗುಡುಗು ಸಹಿತ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮಳೆಯೊಂದಿಗೆ ಮಿಂಚು, ಗುಡುಗು ಮತ್ತು ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಅವಧಿಯಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನವು ಕ್ರಮವಾಗಿ 21 ಡಿಗ್ರಿ ಸೆಲ್ಸಿಯಸ್ ಮತ್ತು 29 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದೆರಡು ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ನಿರೀಕ್ಷೆಯಿದೆ. ಇದರ ಜೊತೆಗೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ರಾಮನಗರ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿಯೂ ಸಹ ಮಳೆ ಬೀಳುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಬಳ್ಳಾರಿ, ದಾವಣಗೆರೆ, ಕೊಡಗು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳು ಸೇರಿದಂತೆ ಬಹುತೇಕ ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಇಂದು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.