
ಸಹಕಾರಿ ಸಂಘಗಳ ಪುನಶ್ಚೇತನ, ರೈತರಿಗೆ ಸಕಾಲದಲ್ಲಿ ಸಾಲ: ಸಹಕಾರ ಇಲಾಖೆಗೆ ಸಿಎಂ ಸೂಚನೆ
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಿಎಂ ಹಲವು ಸೂಚನೆಗಳನ್ನು ನೀಡಿದರು.
ರೈತರಿಗೆ ಸಕಾಲದಲ್ಲಿ ಕೃಷಿ ಸಾಲ ಸಿಗುವುದನ್ನು ಖಾತ್ರಿಪಡಿಸಬೇಕು ಮತ್ತು ನಷ್ಟದಲ್ಲಿರುವ ಹಾಲು ಉತ್ಪಾದಕ ಸಹಕಾರ ಸಂಘಗಳ ಪುನಶ್ಚೇತನಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಬಲಪಡಿಸಲು ಕಾನೂನು ಪ್ರಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ತಾಕೀತು ಮಾಡಿದರು.
ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28 ಸಾವಿರ ಕೋಟಿ ರೂಪಾಯಿ ಸಾಲ ವಿತರಣೆಯ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8.69 ಲಕ್ಷ ರೈತರಿಗೆ 8362.68 ಕೋಟಿ ರೂಪಾಯಿ ಸಾಲ ವಿತರಿಸಲಾಗಿದೆ. ಈ ಪ್ರಗತಿಯನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು, "ಯಾವುದೇ ಕಾರಣಕ್ಕೂ ರೈತರಿಗೆ ಸಾಲ ವಿತರಣೆ ವಿಳಂಬವಾಗಬಾರದು, ಸಕಾಲದಲ್ಲಿ ಸಾಲ ಸಿಗುವುದನ್ನು ಖಾತ್ರಿಪಡಿಸಬೇಕು" ಎಂದು ಸ್ಪಷ್ಟ ಸೂಚನೆ ನೀಡಿದರು.
ನಷ್ಟದಲ್ಲಿರುವ ಸಂಘಗಳ ಬಗ್ಗೆ ಪರಿಶೀಲನೆ
ರಾಜ್ಯದಲ್ಲಿ 14,670 ಸಹಕಾರ ಸಂಘಗಳು ನಷ್ಟದಲ್ಲಿರುವುದನ್ನು ಗಂಭೀರವಾಗಿ ಪರಿಗಣಿಸಿದ ಅವರು, ಇದರಲ್ಲಿ 2200 ಹಾಲು ಉತ್ಪಾದಕ ಸಂಘಗಳು ಸೇರಿರುವುದಕ್ಕೆ ಕಳವಳ ವ್ಯಕ್ತಪಡಿಸಿದರು. ಸಾಲ ವಸೂಲಾತಿ ಸರಿಯಾಗಿ ಆಗದಿರುವುದೇ ಬಹುತೇಕ ಸಂಘಗಳ ನಷ್ಟಕ್ಕೆ ಕಾರಣವಾಗಿದ್ದು, ನಷ್ಟದಲ್ಲಿರುವ ಹಾಲು ಉತ್ಪಾದಕ ಸಂಘಗಳ ವೆಚ್ಚದ ಮೇಲೆ ನಿಗಾ ಇರಿಸಲು ಹಾಗೂ ಹಾಲು ಉತ್ಪಾದನೆ ಹೆಚ್ಚಿಸುವ ಜವಾಬ್ದಾರಿಯನ್ನು ಸಂಘಗಳ ಕಾರ್ಯದರ್ಶಿಗಳಿಗೆ ವಹಿಸಲು ಸೂಚಿಸಿದರು. ಈ ಸಂಘಗಳ ಪುನಶ್ಚೇತನಕ್ಕೆ ತಕ್ಷಣವೇ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಹಲವು ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿಗಳು, ಕನ್ನಡ ಸಾಹಿತ್ಯ ಪರಿಷತ್ನ ಅವ್ಯವಹಾರಗಳ ತನಿಖೆ ನಡೆಯುತ್ತಿರುವಾಗಲೇ ಸದಸ್ಯತ್ವ ರದ್ದುಪಡಿಸುತ್ತಿರುವ ದೂರುಗಳ ಬಗ್ಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಇಲಾಖೆಯಲ್ಲಿ ಖಾಲಿಯಿರುವ 126 ಹಿರಿಯ ನಿರೀಕ್ಷಕರು ಹಾಗೂ 403 ನಿರೀಕ್ಷಕರ ಹುದ್ದೆಗಳ ಭರ್ತಿಗೆ ಶೀಘ್ರ ಪ್ರಸ್ತಾವನೆ ಸಲ್ಲಿಸಲು, ನಿಬಂಧಕರ ಕಚೇರಿಯ ಸೇವೆಗಳ ಗಣಕೀಕರಣವನ್ನು ತ್ವರಿತವಾಗಿ ಪೂರ್ಣಗೊಳಿಸಲು ಮತ್ತು ರಾಜ್ಯದಲ್ಲಿ ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಗಿರವಿದಾರ ಹಾಗೂ ಚೀಟಿ ಸಂಸ್ಥೆಗಳ ಮೇಲೆ ಕಟ್ಟುನಿಟ್ಟಿನ ನಿಗಾ ಇರಿಸಲು ಸೂಚನೆ ನೀಡಿದರು.
ಸಭೆಯಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.