ಸಿದ್ದರಾಮಯ್ಯ ಯಾವುದೇ ಕ್ಷಣದಲ್ಲಿ ರಾಜೀನಾಮೆ ಕೊಡಬಹುದು: ಬಿ ವೈ ವಿಜಯೇಂದ್ರ
x

ಸಿದ್ದರಾಮಯ್ಯ ಯಾವುದೇ ಕ್ಷಣದಲ್ಲಿ ರಾಜೀನಾಮೆ ಕೊಡಬಹುದು: ಬಿ ವೈ ವಿಜಯೇಂದ್ರ


ಕಳೆದ ಎರಡು ತಿಂಗಳುಗಳಿಂದ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದ ಕ್ಷಣಗಣನೆ ಆರಂಭವಾಗಿದೆ. ಸಿದ್ದರಾಮಯ್ಯನವರು ಯಾವುದೇ ಕ್ಷಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ದೆಹಲಿಯಲ್ಲಿ ಮಂಗಳವಾರ ಮಾಧ್ಯಮ ಗೋಷ್ಠಿ ನಡೆಸಿದ ಅವರು, ʻʻಸಚಿವರಿಗೆ ವಿಶ್ವಾಸ ಇಲ್ಲ, ವಿಧಾನಸೌಧಕ್ಕೂ ಸಚಿವರು ಹೋಗುತ್ತಿಲ್ಲ. ಯಾವಾಗ ಮುಖ್ಯಮಂತ್ರಿ ರಾಜೀನಾಮೆ ಕೊಡುತ್ತಾರೋ, ಯಾವಾಗ ಸಿದ್ದರಾಮಯ್ಯರ ಪರವಾಗಿ ಬ್ಯಾಟಿಂಗ್ ಮಾಡಲು ದೆಹಲಿಗೆ ಹೋಗಬೇಕೋ ಎಂಬ ಆತಂಕ ಅವರಲ್ಲಿದೆ" ಎಂದು ವ್ಯಂಗ್ಯವಾಡಿದ್ದಾರೆ.

"ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವೈಷ್ಣೋದೇವಿಗೆ ಹೋಗಿ ಬಂದಿದ್ದಾರೆ. ತಾಯಿಯಲ್ಲಿ ಆಶೀರ್ವಾದ ಪಡೆದುಕೊಂಡು ಬಂದಂತೆ ಕಾಣುತ್ತದೆ, ಅದು ಬೇರೆ ವಿಚಾರ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದ ಕ್ಷಣಗಣನೆ ಆರಂಭವಾಗಿದೆ. ಯಾವುದೇ ಕ್ಷಣದಲ್ಲಿ ರಾಜೀನಾಮೆ ಕೊಡಬಹುದು" ಎಂದರು.

ʻʻಬಿಜೆಪಿ-ಜೆಡಿಎಸ್ ಪಾದಯಾತ್ರೆಯಲ್ಲಿ ಸಾವಿರಾರು ಜನರು ಉತ್ಸಾಹದಿಂದ ಭಾಗವಹಿಸಿದ್ದರು. ಪಾಪ, ಕಾಂಗ್ರೆಸ್ಸಿಗರು ಗಾಬರಿಯಿಂದ ನಮ್ಮ ಪಾದಯಾತ್ರೆ ತಲುಪುವ ಮುನ್ನ ಜನಾಂದೋಲನ ಮಾಡಿದ್ದರು. ಮತ್ತೊಂದೆಡೆ ಸ್ವತಃ ಸಿದ್ದರಾಮಯ್ಯನವರು ಮೈಸೂರಿನಲ್ಲಿದ್ದು, ಜನಾಂದೋಲನಕ್ಕೆ ಸಿದ್ಧತೆ ಮಾಡಿದ್ದರು. ಮುಖ್ಯಮಂತ್ರಿಗಳು ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಅವರ ಕುರಿತು ಕಾಂಗ್ರೆಸ್ಸಿನ ಶಾಸಕರೂ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆʼʼ ಎಂದು ಟೀಕಿಸಿದರು.

"ಇವತ್ತಲ್ಲ ನಾಳೆ ಸಿಎಂ ರಾಜೀನಾಮೆ ಕೊಡಲೇಬೇಕು. ಹೈಕೋರ್ಟಿನ ತೀರ್ಪು ಬಂದ ಬಳಿಕವಾದರೂ ಅವರು ರಾಜೀನಾಮೆ ನೀಡಲಿದ್ದಾರೆ. ಆ 14 ನಿವೇಶನಗಳು ಮುಡಾ ಪಾಲಾಗಿ ಬಡವರಿಗೆ ಸಿಗಲಿವೆ" ಎಂದರು.

"ಸರ್ಕಾರದ ಗ್ಯಾರಂಟಿ ಯೋಜನೆ ಪರಿಣಾಮವಾಗಿ ಕೆಎಸ್ಸಾರ್ಟಿಸಿಗೆ 4,500 ಕೋಟಿ ರೂ. ಕೊಡಬೇಕಿದೆ. ಇನ್ನೂ ಮೂರ್ನಾಲ್ಕು ತಿಂಗಳು ಹೀಗೇ ಮುಂದುವರಿದರೆ ಕೆಎಸ್ಸಾರ್ಟಿಸಿ ಬಾಗಿಲು ಮುಚ್ಚಲಿದೆ. ಸಂಬಳ ಕೊಡಲೂ ದುಡ್ಡಿಲ್ಲ. ಮತ್ತೊಂದು ಕಡೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸುವುದಾಗಿ ತಿಳಿಸಿದ್ದರು. ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಕುಗ್ಗಿ ಹೋಗಿದ್ದು, 14 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿಗಳಿದ್ದರೂ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವುದು ಇರಲಿ, ಅವರ ಗೌರವಧನವನ್ನು 3 ತಿಂಗಳಿಂದ ಪಾವತಿಸಿಲ್ಲ" ಎಂದು ಆರೋಪಿಸಿದರು.

"ಕರ್ನಾಟಕದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾನೂನು- ಸುವ್ಯವಸ್ಥೆ ಹಾಳಾಗಿದೆ. ಸರ್ಕಾರ ಕಾಲಾಹರಣ ಮಾಡುತ್ತಿದೆ. ವಾಲ್ಮೀಕಿ ನಿಗಮದಲ್ಲಿ 87 ಕೋಟಿ ರೂ. ಹಗರಣ ನಡೆದ ಕುರಿತು ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ. ಅದೇ ಮಾದರಿಯಲ್ಲಿ ಮುಡಾದ ತಪ್ಪನ್ನೂ ಒಪ್ಪಿಕೊಂಡು, ನ್ಯಾಯಾಲಯದ ಆದೇಶಕ್ಕೆ ಕಾಯದೆ ಕೂಡಲೇ ರಾಜೀನಾಮೆ ಕೊಟ್ಟರೆ ಒಳಿತು" ಎಂದರು.

ಅಹಿಂದ ಸಮುದಾಯಗಳಿಗೆ ಅನ್ಯಾಯ

"ವಾಲ್ಮೀಕಿ ನಿಗಮದ ಹಗರಣ ಸಂಬಂಧ ಎಸ್ಐಟಿ ರಚಿಸಿ ಕ್ಲೀನ್ ಚಿಟ್ ಕೊಡಿಸುವ ಅಗತ್ಯ ಏನಿತ್ತು? ಸರ್ಕಾರದ ದಲಿತಪರ ಕಾಳಜಿ ಅಂದರೆ ಇದೇನಾ? ಈ ಹಗರಣಕ್ಕೆ ಸಂಬಂಧಿಸಿ ಸಿಬಿಐ, ಇ.ಡಿ. ತನಿಖೆ ನಡೆಯುತ್ತಿವೆ. ಇದೊಂದು ಗಂಭೀರ ಪ್ರಕರಣ. ಲೆಕ್ಕಾಧಿಕಾರಿ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಶಾಸಕರನ್ನು ದೂರವಿಟ್ಟು ಯಾರಿಗೆ ದ್ರೋಹ ಮಾಡುತ್ತಿದ್ದೀರಿ? ಅಹಿಂದ ಸಮುದಾಯಗಳಿಗೆ ಸಿದ್ದರಾಮಯ್ಯನವರು ಅನ್ಯಾಯ ಮಾಡುತ್ತಿದ್ದಾರೆ" ಎಂದು ಅವರು ಆಕ್ಷೇಪಿಸಿದರು.

"ಹಿಂದೆ ಇದೇ ಸಿದ್ದರಾಮಯ್ಯನವರು ಎಸಿಬಿ ಮೂಲಕ ಕ್ಲೀನ್ ಚಿಟ್ ಪಡೆದುಕೊಂಡ ಇತಿಹಾಸ ಇದೆ" ಎಂದ ಅವರು, "ರಾಷ್ಟ್ರಮಟ್ಟದಲ್ಲಿ ಸಿದ್ದರಾಮಯ್ಯನವರ ವಿಚಾರದಲ್ಲಿ ಹೋರಾಟ ಮಾಡುವ ಕುರಿತು ರಾಜ್ಯದ ನಾಯಕರ ಕೆಲವು ಸಲಹೆಗಳಿದ್ದು, ಅದರ ಬಗ್ಗೆ ಚರ್ಚಿಸಿ ನಿರ್ಧರಿಸುತ್ತೇವೆ" ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

"ಪಕ್ಷದ ವರಿಷ್ಠರು ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ. ಯತ್ನಾಳ್ ಅಥವಾ ಇನ್ಯಾರದೋ ವಿರುದ್ಧ ದೆಹಲಿಯಲ್ಲಿ ದೂರು ಕೊಡಲು ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿಲ್ಲ; ಸಂಘಟನೆ ಬಲಪಡಿಸಲು, ಬಿಜೆಪಿ ಸ್ಪಷ್ಟ ಬಹುಮತ ಪಡೆಯಲು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ. ಯತ್ನಾಳ್ ಅವರ ಕುರಿತು ಇಲ್ಲಿ ನಾನು ಪ್ರಸ್ತಾಪಿಸಿಲ್ಲ. ಅದರ ಅವಶ್ಯಕತೆಯೂ ನನಗಿಲ್ಲ" ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ ಮಾಡಿದ ವಿಜಯೇಂದ್ರ

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ʻʻನವದೆಹಲಿಯಲ್ಲಿಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಲಾಯಿತು. ಕರ್ನಾಟಕದ ರಾಜಕೀಯ ವಿದ್ಯಮಾನಗಳು ಹಾಗೂ ಪಕ್ಷದ ಸಂಘಟನೆ, ಹೋರಾಟಗಳು ಅದರಲ್ಲೂ ಇತ್ತೀಚೆಗೆ 'ಮೈಸೂರು ಚಲೋ' ಯಶಸ್ವಿ ಬೃಹತ್ ಪಾದಯಾತ್ರೆ ನಡೆಸಿದ ಪರಿಣಾಮದ ಕುರಿತು ವಿವರಣೆ ನೀಡಲಾಯಿತುʼʼ ಎಂದು ತಿಳಿಸಿದ್ದಾರೆ.

ʻʻಪಾದಯಾತ್ರೆಯ ತರುವಾಯ ಕಾರ್ಯಕರ್ತರಲ್ಲಿ ವ್ಯಕ್ತವಾಗುತ್ತಿರುವ ಸಂಘಟನಾತ್ಮಕ ಉತ್ಸಾಹ ಹಾಗೂ ಸಮರ್ಪಣಾ ಮನೋಭಾವದ ಹೋರಾಟದ ಭಾಗಿತ್ವದ ಕುರಿತು ಮಾಹಿತಿ ನೀಡಲಾಯಿತಲ್ಲದೇ ಸದಸ್ಯತ್ವ ಮಹಾ ಅಭಿಯಾನವನ್ನು ದಾಖಲೆಯ ಪ್ರಮಾಣದಲ್ಲಿ ಗುರಿ ಸಾಧಿಸುವ ಕುರಿತು ಯೋಜಿಸಿರುವ ಚಟುವಟಿಕೆಗಳ ಬಗ್ಗೆ ವಿವರಿಸಲಾಯಿತುʼʼ ಎಂದು ಹೇಳಿದ್ದಾರೆ.

Read More
Next Story