ʼದೇವರೇ ನನ್ನನ್ನು ಕಳುಹಿಸಿದ್ದುʼ ಎಂಬ ಮೋದಿ ಮಾತಿಗೆ ಸಿದ್ದರಾಮಯ್ಯ ವ್ಯಂಗ್ಯ
x

ʼದೇವರೇ ನನ್ನನ್ನು ಕಳುಹಿಸಿದ್ದುʼ ಎಂಬ ಮೋದಿ ಮಾತಿಗೆ ಸಿದ್ದರಾಮಯ್ಯ ವ್ಯಂಗ್ಯ


ಪ್ರಧಾನಿ ಮೋದಿಯವರಿಗೆ ಬಿಜೆಪಿ, ಎನ್ ಡಿ ಎ ಸೋಲು ಖಚಿತವಾಗಿ ಗೊತ್ತಾಗಿದೆ. ಹತಾಶರಾಗಿ ವಿಚಿತ್ರ ವಿಚಿತ್ರವಾಗಿ ಮಾತಾಡುತ್ತಿದ್ದಾರೆ. ದೇವರೇ ನನ್ನನ್ನು ಕಳುಹಿಸಿದ್ದು ಎಂದು ಮಾತಾಡುತ್ತಿದ್ದಾರೆ. ಅವರ ಸೋಲು ಮೋದಿಯವರನ್ನು ಈ ಮಟ್ಟಕ್ಕೆ ಮಾಡಿಟ್ಟಿದೆ ಎಂದು ವ್ಯಂಗ್ಯವಾಡಿದರು.

KPCC ಕಚೇರಿಯಲ್ಲಿ ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ನಮ್ಮ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ದೇಶವನ್ನು ಮಾರ್ಪಡಿಸಲು ಬಿಜೆಪಿ ಮತ್ತು ಮೋದಿ ಯತ್ನಿಸುತ್ತಿದ್ದು ಇದಕ್ಕೆ ಭಾರತೀಯರು ಅವಕಾಶ ಕೊಡುವುದಿಲ್ಲ. ಬಿಜೆಪಿಗೆ ಸಂವಿಧಾನದಲ್ಲಿ ನಂಬಿಕೆ ಇಲ್ಲ. ಸಂವಿಧಾನದ ಆಶಯಗಳಲ್ಲಿ ದೇಶವನ್ನು ಮುನ್ನಡೆಸುವುದು ಕಾಂಗ್ರೆಸ್ ಪಕ್ಷ ಮಾತ್ರ. ನೆಹರೂ, ಇಂದಿರಾಗಾಂಧಿ ಅವಧಿಯಲ್ಲಿ ಭೂ ಸುಧಾರಣೆ ಮಾಡಿದರು‌. ಕೈಗಾರಿಕೆಗಳನ್ನು ಸ್ಥಾಪಿಸಿದರು. ಈಗ ಬಿಜೆಪಿ ಇದಕ್ಕೆ ವಿರುದ್ಧವಾದ ಕೆಲಸ ಮಾಡುತ್ತಿದೆ. ರೈತರಿಂದ ಭೂಮಿ ಕಿತ್ತುಕೊಳ್ಳುವುದು , ದೇಶದ ಕೈಗಾರಿಕೆಳನ್ನು ಖಾಸಗಿಯವರಿಗೆ ಮಾರಾಟ ಮಾಡುವುದು ಬಿಜೆಪಿಯ ಸಾಧನೆಯಾಗಿದೆ ಎಂದರು.

ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಭಾರತ ಬಹುತ್ವದ ದೇಶ. ಈ ಬಹುತ್ವದ ದೇಶವನ್ನು ನಾಶ ಮಾಡಿ ಬಿಜೆಪಿ ಮೂಗಿನ ನೇರದ ಹಿಂದೂ ದೇಶ ಮಾಡುವುದು ಅಸಾಧ್ಯ. ಈ ದೇಶ ಪ್ರತಿಯೊಬ್ಬ ಭಾರತೀಯರಿಗೆ ಸೇರಿದ್ದು ಎಂದರು. ತಮ್ಮನ್ನು ತೀವ್ರವಾಗಿ ಟೀಕಿಸುತ್ತಿದ್ದ ಲೋಹಿಯಾ ಅವರ ಮಾತನ್ನು ಪಾರ್ಲಿಮೆಂಟಿನಲ್ಲಿ ಕುಳಿತು ನೆಹರೂ ಆಲಿಸುತ್ತಿದ್ದರು, ಸ್ಪಂದಿಸುತ್ತಿದ್ದರು‌. ಇದು ನೆಹರೂ ರೂಢಿಸಿಕೊಂಡಿದ್ದ ರಾಜಕೀಯ ಮೌಲ್ಯ ಎಂದರು.

28 ಗೆಲ್ಲುತ್ತೀವಿ ಎನ್ನುತ್ತಿದ್ದ ಬಿಜೆಪಿಗೆ ಈಗ ಸತ್ಯ ಗೊತ್ತಾಗಿದೆ

ಕಾಂಗ್ರೆಸ್ ಕಾರ್ಯಕರ್ತರ ಶ್ರಮದಿಂದ ಲೋಕಸಭೆಯಲ್ಲಿ ಕಾಂಗ್ರೆಸ್ 15-20 ಸ್ಥಾನ ಗೆದ್ದೇ ಗೆಲ್ಲುತ್ತದೆ. 28 ಕ್ಕೆ 28 ಗೆಲ್ಲುತ್ತೀವಿ ಎನ್ನುತ್ತಿದ್ದ ಬಿಜೆಪಿ ಬಾಯಿ ಬಂದಾಗಿದೆ. ಇಡೀ ದೇಶದಲ್ಲಿ ಬಿಜೆಪಿ ತಿರಸ್ಕೃತಗೊಂಡಿದೆ ಎಂದರು.

Read More
Next Story