ಕನ್ನಡಿಗರಿಗೆ ಉದ್ಯೋಗ ಮೀಸಲಾತಿ| ಸಿದ್ದರಾಮಯ್ಯ ಹೊಸ  ನಾಟಕ: ಪ್ರತಿಪಕ್ಷ ನಾಯಕ ಅಶೋಕ್‌ ಲೇವಡಿ
x

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ| ಸಿದ್ದರಾಮಯ್ಯ ಹೊಸ ನಾಟಕ: ಪ್ರತಿಪಕ್ಷ ನಾಯಕ ಅಶೋಕ್‌ ಲೇವಡಿ


"ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು" ಎಂಬ ಕನ್ನಡದ ಗಾದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಹಳ ಸೂಕ್ತವಾಗಿ ಅನ್ವಯಿಸುತ್ತದೆ. ದಲಿತರ ದೊಡ್ಡು ಹೊಡೆದು ಕಳೆದುಕೊಂಡಿರುವ ಮಾನ ಕನ್ನಡಿಗರ ಮೂಗಿಗೆ ತುಪ್ಪ ಸವರಿದರೆ ವಾಪಸ್ಸು ಬರುತ್ತದೆಯೇ? ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಲೇವಡಿ ಮಾಡಿದ್ದಾರೆ.

ಖಾಸಗಿ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಡ್ಡಾಯಗೊಳಿಸುವ ನೂತನ ಮಸೂದೆಗೆ ರಾಜ್ಯ ಸಚಿವ ಸಂಪುಟ ಮಂಗಳವಾರ ಅನುಮೋದನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ದಲಿತರ ದುಡ್ಡು ಹೊಡೆದಿರುವ ಬಗ್ಗೆ ಉತ್ತರ ಕೋಡಿ ಸ್ವಾಮಿ ಅಂದರೆ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಹೊಸ ನಾಟಕ ಶುರು ಮಾಡಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದೀರಲ್ಲ ಎಂದು ಪ್ರಶ್ನಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು "ಸಿದ್ದರಾಮಯ್ಯನವರೇ, ಕರ್ನಾಟಕದ ಜನತೆ ನಿಮ್ಮ ಕುತಂತ್ರಗಳನ್ನ ಅರಿಯದಷ್ಟು ದಡ್ಡರು, ಅಮಾಯಕರು ಎಂದು ತಿಳಿದಿದ್ದೀರಾ?" ಎಂದು ಪ್ರಶ್ನಸಿದ್ದಾರೆ.

ಚುನಾವಣೆ ಬಂದಾಗಲೆಲ್ಲಾ ಅಥವಾ ನಿಮ್ಮ ಸರ್ಕಾರ/ಪಕ್ಷ ಮುಜುಗರಕ್ಕೊಳಗಾದಾಗಲೆಲ್ಲ ಪ್ರತ್ಯೇಕ ಧರ್ಮ, ಪ್ರತ್ಯೇಕ ಧ್ವಜ, ನಂದಿನಿ - ಅಮುಲ್, 'ನನ್ನ ತೆರಿಗೆ ನನ್ನ ಹಕ್ಕು', ಎಂಬ ಇಲ್ಲಸಲ್ಲದ ವಿಚಾರಗಳನ್ನ ಹುಟ್ಟುಹಾಕಿ ಜನರ ಗಮನ ಬೇರೆಡೆ ಸೆಳೆಯುವ ನಿಮ್ಮ ಗೋಸುಂಬೆ ರಾಜಕೀಯ ಕನ್ನಡಿಗರಿಗೆ ಗೊತ್ತಿಲ್ಲ ಎಂಬ ಭ್ರಮೆಯಲ್ಲಿದ್ದೀರಾ? ನಿಮ್ಮ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ, ವೈಫಲ್ಯಗಳನ್ನ ಮುಚ್ಚಿಕೊಳ್ಳಲು ಸಾಧ್ಯವೇ ಇಲ್ಲ. ನಿಮ್ಮ ಪಾಪದ ಕೊಡ ತುಂಬಿದೆ ಸಿದ್ದರಾಮಯ್ಯನವರೇ, ನಿಮ್ಮ ಮುಖವಾಡ ಕಳಚಿದೆ, ಆಟ ಮುಗಿದಿದೆ. ಈ ನಾಟಕವೆಲ್ಲಾ ಬಿಟ್ಟು ತೆಪ್ಪಗೆ ರಾಜೀನಾಮೆ ಕೊಟ್ಟು ನಿಮ್ಮ ಮರ್ಯಾದೆ ಉಳಿಸಿಕೊಳ್ಳಿ, ರಾಜ್ಯದ ಗೌರವವನ್ನೂ ಉಳಿಸಿ ಎಂದು ಉತ್ತರಿಸಿದ್ದಾರೆ.

Read More
Next Story