Stampede | CMs close aide Govindaraju dismissed: KPCC vice president happy
x

ವಿಧಾನಪರಿಷತ್‌ ಸದಸ್ಯ ಗೋವಿಂದರಾಜು.

Stampede| ಸಿಎಂ ಆಪ್ತ ಗೋವಿಂದರಾಜು ವಜಾ: ಕೆಪಿಸಿಸಿ ಉಪಾಧ್ಯಕ್ಷರಿಂದಲೇ ಸಂತಸ!

ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಬಿಡುಗಡೆಗೊಳಿಸಬೇಕಿತ್ತು ಅವರಿಂದ ಯಾವುದೇ ಲಾಭವಿಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ ಎ.ಆರ್.ಎಂ.‌ಹುಸೇನ್ ತಿಳಿಸಿದ್ದಾರೆ.


ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಬಿಡುಗಡೆಗೊಳಿಸಿರುವ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂತಸ ಮೂಡಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಎ.ಆರ್.ಎಂ.‌ ಹುಸೇನ್ ಹೇಳಿದ್ದಾರೆ. ಈ ಮೂಲಕ ತಮ್ಮ ಪಕ್ಷದ ನಾಯಕರೊಬ್ಬರ ಮೇಲಿನ ಕ್ರಮವನ್ನು ಅವರು ಸಂಭ್ರಮಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಗೋವಿಂದರಾಜು ಅವರಿಂದ ಪಕ್ಷಕ್ಕಾಗಲಿ ಅಥವಾ ಸರ್ಕಾರಕ್ಕಾಗಲಿ ಯಾವುದೇ ಲಾಭವಿಲ್ಲದ ಕಾರಣ ಅವರನ್ನು ಈ ಹುದ್ದೆಯಿಂದ ಬಿಡುಗಡೆಗೊಳಿಸಬೇಕಿತ್ತು ಎಂದಿದ್ದಾರೆ. ಅಲ್ಲದೆ, ಮುಖ್ಯಮಂತ್ರಿಗಳ ಸುತ್ತಲಿನ "ಶನಿಸಂತಾನ"ಗಳನ್ನು ದೂರವಿಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದೇ ಸಂದರ್ಭದಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸುತ್ತಲೂ "ವಂಚಕರ ಸಂತೆ" ಇದೆ ಮತ್ತು ಅವರ ಅಂಗರಕ್ಷಕರ (ಗನ್‌ಮ್ಯಾನ್) ಉಪಟಳ ಹೆಚ್ಚಾಗಿದೆ ಎಂದು ಹುಸೇನ್ ಪೋಸ್ಟ್ ಮಾಡಿದ್ದಾರೆ. ಇಂತಹವರಿಂದ ಪಕ್ಷದ ಕಾರ್ಯಕರ್ತರು ರೋಸಿ ಹೋಗಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಲ್ತುಳಿತ ಪ್ರಕರಣ ಮತ್ತು ಗೋವಿಂದರಾಜು ಬಿಡುಗಡೆ

ಇತ್ತೀಚೆಗೆ ಆರ್‌ಸಿಬಿ ವಿಜಯೋತ್ಸವದ ವೇಳೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟು 56ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ದುರಂತದ ವಿರುದ್ಧ ಹೈಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು. ರಾಜ್ಯ ಸರ್ಕಾರವು ದುರಂತದ ತನಿಖೆ ನಡೆಸಲು ಮ್ಯಾಜಿಸ್ಟೀರಿಯಲ್, ಸಿಐಡಿ ಮತ್ತು ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ ಏಕ ಸದಸ್ಯ ಆಯೋಗವನ್ನು ನೇಮಿಸಿತ್ತು.

ವಿರೋಧ ಪಕ್ಷಗಳು ಮಾಧ್ಯಮಗೋಷ್ಠಿ ನಡೆಸಿ ಈ ದುರಂತಕ್ಕೆ ಸರ್ಕಾರವೇ ನೇರ ಕಾರಣ ಎಂದು ಆರೋಪಿಸಿದ್ದವು. ಸಚಿವ ಸಂಪುಟ ಸಭೆಯಲ್ಲಿಯೂ ಹಲವು ಸಚಿವರು, ಕಾರ್ಯಕ್ರಮ ಆಯೋಜಿಸಲು ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದರು ಎಂಬ ಆರೋಪದ ಮೇಲೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರನ್ನು ಬಿಡುಗಡೆಗೊಳಿಸಬೇಕೆಂದು ಪಟ್ಟಿ ಹಿಡಿದಿದ್ದರು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶುಕ್ರವಾರ (ಜೂನ್ 6) ದಂದು ಗೋವಿಂದರಾಜು ಅವರನ್ನು ಅಧಿಕೃತವಾಗಿ ಸರ್ಕಾರ ಬಿಡುಗಡೆಗೊಳಿಸಿತ್ತು.

Read More
Next Story