
ರಾಜ್ಯ ಮಹಿಳಾ ಆಯೋಗವು ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ದ ಮುಖ್ಯಸ್ಥರಿಗೆ ಪತ್ರ ಬರೆದಿದೆ.
ಧರ್ಮಸ್ಥಳ ಪ್ರಕರಣ| ಸಮಗ್ರ ತನಿಖೆಗೆ ರಾಜ್ಯ ಮಹಿಳಾ ಆಯೋಗದಿಂದ ಎಸ್ಐಟಿಗೆ ಪತ್ರ
ಧರ್ಮಸ್ಥಳದ ಸುತ್ತಮುತ್ತ ನಡೆದ ಎಲ್ಲಾ ಅಸಹಜ ಸಾವುಗಳು, ಹಾಗೂ ವಿದ್ಯಾರ್ಥಿನಿಯರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಬಗ್ಗೆಯೂ ಸಮಗ್ರ ತನಿಖೆ ನಡೆಯಬೇಕು.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಮತ್ತೊಂದು ಪತ್ರ ಬರೆದಿದ್ದಾರೆ.
ಎಸ್ಐಟಿ ತನಿಖೆಯು ಕೇವಲ ಚಿನ್ನಯ್ಯ ಅವರ ಹೇಳಿಕೆಯ ಸುತ್ತಮುತ್ತಲೇ ನಡೆಯುತ್ತಿದೆ. ಆದರೆ, ಎಸ್ಐಟಿ ರಚನೆಯ ಉದ್ದೇಶ ಕೇವಲ ಚಿನ್ನಯ್ಯ ಅವರ ಹೇಳಿಕೆಯನ್ನು ಪರಿಶೀಲಿಸುವುದಷ್ಟೇ ಅಲ್ಲ ಎಂದು ಪತ್ರದಲ್ಲಿ ನಾಗಲಕ್ಷ್ಮೀ ಚೌಧರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಧರ್ಮಸ್ಥಳದ ಸುತ್ತಮುತ್ತ ನಡೆದ ಎಲ್ಲಾ ಅಸಹಜ ಸಾವುಗಳು, ಹಾಗೂ ವಿದ್ಯಾರ್ಥಿನಿಯರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಬಗ್ಗೆಯೂ ಸಮಗ್ರ ತನಿಖೆ ನಡೆಯಬೇಕು. ಈ ತನಿಖೆ ನಡೆಸಿದ ಬಗ್ಗೆ ಮಾಹಿತಿ ಒದಗಿಸಬೇಕು ಎಂದು ನಾಗಲಕ್ಷ್ಮೀ ಚೌಧರಿ ಅವರು ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಅವರಿಗೆ ಆಗ್ರಹಿಸಿದ್ದಾರೆ.
ಈ ಹಿಂದೆ ಸಿಎಂಗೆ ಪತ್ರ ಬರೆದಿದ್ದ ಆಯೋಗ
ಈ ವರ್ಷದ ಜುಲೈ 14 ರಂದು, ರಾಜ್ಯ ಮಹಿಳಾ ಆಯೋಗವು ಮುಖ್ಯಮಂತ್ರಿಗಳಿಗೆ ಪತ್ರ ಬರೆದು, ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ವ್ಯಕ್ತಿಯೊಬ್ಬರ ನ್ಯಾಯಾಲಯದ ಹೇಳಿಕೆ ಹಾಗೂ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ, ವಿಶೇಷ ತನಿಖಾ ತಂಡ ರಚಿಸುವಂತೆ ಮನವಿ ಮಾಡಿತ್ತು. ಕಳೆದ 20 ವರ್ಷಗಳಲ್ಲಿ ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ಮೇಲೆ ನಡೆದ ಗಂಭೀರ ಸ್ವರೂಪದ ದೌರ್ಜನ್ಯ, ಹತ್ಯೆ, ಅತ್ಯಾಚಾರ, ಮತ್ತು ಅಸ್ವಾಭಾವಿಕ ಸಾವುಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲು ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್ಐಟಿ ರಚಿಸಬೇಕು ಎಂದು ಆಯೋಗ ಒತ್ತಾಯಿಸಿತ್ತು. ಈ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರವು ಎಸ್ಐಟಿಯನ್ನು ರಚಿಸಿತ್ತು.
ಎಸ್ಐಟಿ ತನಿಖೆಗೆ ಹೈಕೋರ್ಟ್ ತಾತ್ಕಾಲಿಕ ತಡೆ
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಹತ್ಯೆ, ಅತ್ಯಾಚಾರ ಮತ್ತು ಶವಗಳನ್ನು ಹೂತಿರುವ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡದ ಕಾರ್ಯಾಚರಣೆಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕವಾಗಿ ತಡೆ ನೀಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರಾಗಿರುವ ನಾಲ್ವರು ಸಾಮಾಜಿಕ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಮತ್ತು ವಿಠ್ಠಲ ಗೌಡ ಅವರ ವಿರುದ್ಧವೇ ಎಸ್ಐಟಿ ಎಫ್ಐಆರ್ ದಾಖಲಿಸಿತ್ತು. ಇದನ್ನು ಪ್ರಶ್ನಿಸಿ ದೂರುದಾರರು ಹೈಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಲಯವು ದೂರುದಾರರ ವಿರುದ್ಧದ ಪ್ರಕರಣಕ್ಕೆ ಹಾಗೂ ಶವ ಹೂತಿಟ್ಟ ಆರೋಪಕ್ಕೆ ಸಂಬಂಧಿಸಿದ ತನಿಖೆಗೆ ನವೆಂಬರ್ 12ರವರೆಗೆ ತಡೆ ನೀಡಿದೆ.
ಪ್ರಕರಣಕ್ಕೆ ಹೊಸ ತಿರುವು
ಇತ್ತೀಚೆಗೆ ಧರ್ಮಸ್ಥಳ ಸಮೀಪದ ಬಂಗ್ಲೆಗುಡ್ಡ ಕಾಡಿನಲ್ಲಿ ವಿಠ್ಠಲ ಗೌಡರ ಹೇಳಿಕೆಯ ಮೇರೆಗೆ ಶೋಧ ನಡೆಸಿದಾಗ ಹಲವು ಮಾನವ ತಲೆಬುರುಡೆಗಳು ಮತ್ತು ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಇವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಎಫ್ಎಸ್ಎಲ್ನ ವರದಿಯ ಪ್ರಕಾರ, ಚಿನ್ನಯ್ಯ ತಂದಿದ್ದ ತಲೆಬುರುಡೆಯು ಸುಮಾರು 40ವರ್ಷದ ಪುರುಷನದ್ದು ಎಂದು ಹೇಳಲಾಗಿದೆ. ಕೆಲವು ತಲೆಬುರುಡೆಗಳ ಪತ್ತೆಯು ವಾಮಾಚಾರದ ಕುರಿತು ಶಂಕೆಗಳಿಗೂ ಕಾರಣವಾಗಿದ್ದು, ಎಸ್ಐಟಿ ಅಧಿಕಾರಿಗಳು ಈ ದಿಕ್ಕಿನಲ್ಲೂ ತನಿಖೆ ಮುಂದುವರಿಸಲು ಮುಂದಾಗಿದ್ದಾರೆ ಎಂದು ವರದಿಯಾಗಿತ್ತು.
ಮಹಿಳಾ ಆಯೋಗದಿಂದ ಒತ್ತಾಯ
ಈ ಮಧ್ಯೆ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಅವರಿಗೆ ಮತ್ತೆ ಪತ್ರ ಬರೆದಿದ್ದು, ತನಿಖೆಯು ಕೇವಲ ಚಿನ್ನಯ್ಯ ಅವರ ಹೇಳಿಕೆಗೆ ಸೀಮಿತವಾಗಬಾರದು. ಧರ್ಮಸ್ಥಳ ಸುತ್ತಮುತ್ತ ನಡೆದ ಎಲ್ಲಾ ಅಸಹಜ ಸಾವುಗಳು, ವಿದ್ಯಾರ್ಥಿನಿಯರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಬಗ್ಗೆಯೂ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

