Strict action against those responsible for the death of five tigers: Minister Eshwar Khandre
x
ಮೃತ ಹುಲಿಗಳಿಗೆ ಅಗ್ನಿ ಸ್ಪರ್ಶ ಮಾಡಿದ ಸಂದರ್ಭದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಜರಿದ್ದರು.  

Save Karnataka Tigers|ಐದು ಹುಲಿಗಳ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ: ಸಚಿವ ಈಶ್ವರ ಖಂಡ್ರೆ

ರಾಜ್ಯವು ಹುಲಿಗಳ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೆ ಐದು ಹುಲಿಗಳು ಒಂದೇ ದಿನ ಮೃತಪಟ್ಟಿರುವುದು ಅತ್ಯಂತ ನೋವಿನ ಹಾಗೂ ಹೃದಯ ವಿದ್ರಾವಕ ಘಟನೆಯಾಗಿದ್ದು ಅತೀವ ನೋವು ತಂದಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.


ಮಲೆ ಮಹದೇಶ್ವರ ಬೆಟ್ಟದ ಹೂಗ್ಯಂ ವಲಯದಲ್ಲಿ ವಿಷಪ್ರಾಶನದಿಂದ ಮೃತಪಟ್ಟ ಐದು ಹುಲಿಗಳ ಅಂತ್ಯ ಸಂಸ್ಕಾರವನ್ನು ಶುಕ್ರವಾರ ನೆರವೇರಿಸಲಾಯಿತು.

ದುಷ್ಕರ್ಮಿಗಳ ವಿಷಪ್ರಾಶನದಿಂದ ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿಗಳು ಮೃತಪಟ್ಟಿದ್ದವು. ಒಂದೇ ದಿನ ಐದು ಹುಲಿಗಳ ಸಾವು ತೀವ್ರ ಆತಂಕ ಸೃಷ್ಟಿಸಿತ್ತು. ಹುಲಿಗಳ ಅಸಹಜ ಸಾವು ಕುರಿತಂತೆ ಉನ್ನತ ಮಟ್ಟದ ತನಿಖೆ ನಡೆಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ತಂಡ ರಚಿಸಿದ್ದರು.

ಹುಲಿಗಳ ಸಂಖ್ಯೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿರುವ ಕರ್ನಾಟಕದಲ್ಲಿ ಐದು ಹುಲಿಗಳ ಸಾವಿಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ವನ್ಯಜೀವಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದರು.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ

ಐದು ಹುಲಿಗಳ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಮಲೆ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ ಹುಲಿಗಳು ಮೃತಪಟ್ಟ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು, ಬಳಿಕ ಐದು ಹುಲಿಗಳ ಮೃತದೇಹಗಳ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದರು.

ತನಿಖೆಗೆ ಆಗಮಿಸಿರುವ ಅಧಿಕಾರಿಗಳು ಮತ್ತು ತಜ್ಞರು, ವಿಷಪ್ರಾಶನದಿಂದ ಹುಲಿಗಳು ಮೃತಪಟ್ಟಿವೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಇದೊಂದು ಘೋರ ಅಪರಾಧ.ಈ ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಖಂಡ್ರೆ ಹೇಳಿದ್ದಾರೆ.

ರಾಜ್ಯ ಸರ್ಕಾರ ವನ್ಯಜೀವಿ ಸಂರಕ್ಷಣೆಗೆ ಎಲ್ಲ ಅಗತ್ಯ ಕ್ರಮ ಕೈಗೊಂಡಿರುವುದರಿಂದಲೇ ರಾಜ್ಯ ಹುಲಿಗಳ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೆ, ಐದು ಹುಲಿಗಳು ಒಂದೇ ದಿನ ಮೃತಪಟ್ಟಿರುವುದು ಅತ್ಯಂತ ನೋವಿನ ಹಾಗೂ ಹೃದಯ ವಿದ್ರಾವಕ ಘಟನೆಯಾಗಿದ್ದು ಅತೀವ ನೋವು ತಂದಿದೆ ಎಂದಿದ್ದಾರೆ.

ಹುಲಿಗಳ ಅಸಹಜ ಸಾವಿನ ವಿಷಯ ತಿಳಿದ ಕೂಡಲೇ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ. ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರ (ಎನ್‌ಟಿಸಿಎ) ಪ್ರತಿನಿಧಿಗಳೂ ಇಲ್ಲಿಗೆ ಆಗಮಿಸಿದ್ದಾರೆ. ವನ್ಯಜೀವಿ ತಜ್ಞರು ಮತ್ತು ಸಾಕ್ಷಿಗಳೂ ಆಗಮಿಸಿದ್ದಾರೆ. ಮರಣೋತ್ತರ ಪರೀಕ್ಷೆಯನ್ನು ನಿಯಮಾನುಸಾರ ನಡೆಸಲಾಗಿದ್ದು, ಮೃತದೇಹಗಳ ಸಂಸ್ಕಾರವೂ ಆಗಿದೆ, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಹೊರಗುತ್ತಿಗೆಯ ಅರಣ್ಯ ಸಿಬ್ಬಂದಿಗೆ ಸಕಾಲದಲ್ಲಿ ವೇತನ ಆಗದಿರುವ ಬಗ್ಗೆ ವರದಿ ಇದೆ. ಈ ಬಗ್ಗೆಯೂ ತನಿಖೆ ನಡೆಸಿ, ಸಿಬ್ಬಂದಿಗೆ ಸಕಾಲದಲ್ಲಿ ವೇತನ ಪಾವತಿಗೆ ಕ್ರಮವಹಿಸಲಾಗುವುದು. ಹುಲಿಗಳ ಸಾವಿನ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ತನಿಖೆಯಿಂದ ಕಂಡು ಬಂದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

Read More
Next Story