ಅನುದಾನ ಹಂಚಿಕೆ ವಾಗ್ವಾದ | ನಿರ್ಮಲಾ ಸೀತಾರಾಮನ್‌ಗೆ ಕೃಷ್ಣ ಬೈರೇಗೌಡ ಸವಾಲು
x

ಅನುದಾನ ಹಂಚಿಕೆ ವಾಗ್ವಾದ | ನಿರ್ಮಲಾ ಸೀತಾರಾಮನ್‌ಗೆ ಕೃಷ್ಣ ಬೈರೇಗೌಡ ಸವಾಲು

ತೆರಿಗೆ ಅನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದರೆ, ಅನ್ಯಾಯವೇ ಸುಳ್ಳು ಎಂದು ಬಿಜೆಪಿಗರು ಹೇಳುತ್ತಾರೆ. ಬಿಎಸ್‌ ವೈ, ಬೊಮ್ಮಾಯಿ ಕೂಡ ಸಿಎಂ ಆಗಿದ್ದಾಗ ಪತ್ರ ಬರೆದಿದ್ದರು. ಹಾಗಾದರೆ ಅವರೂ ಸುಳ್ಳು ಹೇಳಿದ್ದರಾ? ಎಂದು ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದ್ದಾರೆ.


ಕರ್ನಾಟಕಕ್ಕೆ ಯಾವುದೇ ಅನುದಾನ ಬಾಕಿ ಉಳಿಸಿಕೊಂಡಿಲ್ಲ ಎಂಬ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆ ಸತ್ಯಕ್ಕೆ ದೂರವಾದುದು. ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ 11,495 ಕೋಟಿ ರು. ವಿಶೇಷ ಅನುದಾನ ನೀಡಬೇಕಿತ್ತು. ಆದರೆ ಕೇಂದ್ರ ಸರ್ಕಾರ ಅದನ್ನೂ ಬಾಕಿ ಉಳಿಸಿಕೊಂಡಿದೆ. ಈ ಬಗ್ಗೆ ಅವರು ಯಾವಾಗ ಬಂದರೂ ಚರ್ಚೆಗೆ ನಾವು ಸಿದ್ಧ ಎಂದು ಸಚಿವ ಕೃಷ್ಣ ಬೈರೇಗೌಡ ಸವಾಲು ಹಾಕಿದ್ದಾರೆ.

ಸೋಮವಾರ ವಿಕಾಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾವುದೇ ರಾಜ್ಯಕ್ಕೆ 2019- 20ರಲ್ಲಿ ಕೊಟ್ಟಿದ್ದಕ್ಕಿಂತ ಕಡಿಮೆ ಅನುದಾನವನ್ನು ಕೊಡುವಂತಿಲ್ಲ ಎಂದು ಹಣಕಾಸು ಆಯೋಗವೇ ಹೇಳಿದೆ. 2019-20ರಲ್ಲಿ ರಾಜ್ಯಕ್ಕೆ ಕೇಂದ್ರದಿಂದ 36,675 ಕೋಟಿ ರೂ. ತೆರಿಗೆ ಪಾಲು ಬಂದಿತ್ತು. 2020-21ಕ್ಕೆ ಇದು 31,180 ಕೋಟಿ ರೂ.ಗೆ ಕುಸಿದಿತ್ತು. ಹೀಗಾಗಿ ರಾಜ್ಯಕ್ಕೆ ಆಗಿರುವ 5495 ಕೋಟಿ ರು. ನಷ್ಟವನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಆಯೋಗ ವಿಶೇಷ ಅನುದಾನಕ್ಕೆ ಶಿಫಾರಸು ಮಾಡಿದೆ. ಆದರೆ, ಈ ಹಣ ಈವರೆಗೆ ರಾಜ್ಯಕ್ಕೆ ಬಂದಿಲ್ಲ. 2021-26ನೇ ಸಾಲಿನಲ್ಲಿ ಸುಮಾರು 6,000 ಕೋಟಿ ರೂ. ನೀಡಬೇಕೆಂದು ಶಿಫಾರಸು ಮಾಡಲಾಗಿದೆ. ಒಟ್ಟಾರೆ, 11,495 ಕೋಟಿ ರು. ಹಣ ರಾಜ್ಯಕ್ಕೆ ಬರಬೇಕಿದೆ. ಆದರೆ, ನಿರ್ಮಲಾ ಅಂತಹ ಶಿಫಾರಸ್ಸನ ಎಂದು ಮರೆಮಾಚುತ್ತಿದ್ದಾರೆ. ಆಯೋಗ ಮಾಡಿದ್ದ ಶಿಫಾರಸನ್ನು ಹಿಂಪಡೆಯುವಂತೆ ಅವರೇ ಪತ್ರ ಬರೆದು ಕರ್ನಾಟಕದ ಜನರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

ಕರ್ನಾಟದಿಂದ ರಾಜ್ಯ ಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಅವರಿಂದಲೇ ರಾಜ್ಯಕ್ಕೆ ತೆರಿಗೆ ಹಂಚಿಕೆ ಅನುದಾನದಲ್ಲಿ ಅನ್ಯಾಯವಾಗುತ್ತಿದೆ. ಮಾ.31ಕ್ಕೆ ಅವರು ಮೈಸೂರಿಗೆ ಆಗಮಿಸುತ್ತಿದ್ದು, ಈ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ದರಿದ್ದಾರೆಯೇ ಹೇಳಲಿ. ಹಣಕಾಸು ಆಯೋಗದ 2021ನೇ ವರ್ಷದ ಅಂತಿಮ ವರದಿಯ 36ನೇ ಪುಟದಲ್ಲಿ ಕರ್ನಾಟಕಕ್ಕೆ ಆಗಿರುವ ನಷ್ಟ ತುಂಬಿಕೊಡಬೇಕು ಎಂದು ಬರೆದಿರುವುದು ಸುಳ್ಳೇ ಎಂದು ಅವರು ಉತ್ತರಿಸಲಿ ಎಂದು ಸಾಕ್ಷಿ ಸಮೇತ ತಿರುಗೇಟು ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ತೆರಿಗೆ ಪಾಲಿನ ಅನ್ಯಾಯದ ಬಗ್ಗೆ ಪತ್ರ ಬರೆದರೆ ಬಿಜೆಪಿಗರು ಸುಳ್ಳು ಎನ್ನುತ್ತಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 2020 ಸೆ.17ರಂದು ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗಿ ವಿಶೇಷ ಅನುದಾನ ಬಿಡುಗಡೆ ಮಾಡಲು ಕೋರಿದ್ದರು. ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗಲೂ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದರು. ಹಾಗಾದರೆ ಅವರು ಸಹ ಸುಳ್ಳು ಹೇಳಿದ್ದರಾ ಎಂದು ಸಚಿವರು ಕುಟುಕಿದರು.

ಸಚಿವೆ ನಿರ್ಮಲಾ ಅವರು ಒಂದೆಡೆ ಹಣಕಾಸು ಆಯೋಗದ ಒಂದೇ ಒಂದು ಶಿಫಾರಸ್ಸನ್ನು ಸಹ ನಾವು ತಿದ್ದಲು ಹೋಗುವುದಿಲ್ಲ ಎನ್ನುತ್ತಾರೆ. ಮತ್ತೊಂದೆಡೆ ರಾಜ್ಯಗಳಿಗೆ ನೀಡುವ ವಿಶೇಷ ಅನುದಾನವನ್ನು ಹಿಂಪಡೆಯುವಂತೆ ಹಣಕಾಸು ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದು ಲೋಕಸಭೆಯಲ್ಲೇ ಉತ್ತರ ನೀಡುತ್ತಾರೆ. ಹಾಗಾದರೆ ರಾಜ್ಯದ ಪಾಲಿನ ಹಣವನ್ನು ತಡೆಹಿಡಿಯಲು ಮಾತ್ರ ಇವರ ಕಾನೂನುಗಳು ಇರುವುದಾ? ಎಂದು ಸಚಿವ ಕೃಷ್ಣ ಬೈರೇಗೌಡ ಆಕ್ರೋಶ ಹೊರಹಾಕಿದರು.

ತೆರಿಗೆ ಅನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದರೆ, ಅನ್ಯಾಯವೇ ಸುಳ್ಳು ಎಂದು ಬಿಜೆಪಿಗರು ಹೇಳುತ್ತಾರೆ. ಬಿಎಸ್‌ ವೈ, ಬೊಮ್ಮಾಯಿ ಕೂಡ ಸಿಎಂ ಆಗಿದ್ದಾಗ ಪತ್ರ ಬರೆದಿದ್ದರು. ಹಾಗಾದರೆ ಅವರೂ ಸುಳ್ಳು ಹೇಳಿದ್ದರಾ? ಎಂದು ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದ್ದಾರೆ.

Read More
Next Story