ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆ ಜಾರಿ, ಶಾಸಕರೇ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ: ಆರ್‌.ಅಶೋಕ ಟೀಕೆ
x

ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆ ಜಾರಿ, ಶಾಸಕರೇ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ: ಆರ್‌.ಅಶೋಕ ಟೀಕೆ


ʻʻಕಾಂಗ್ರೆಸ್‌ ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಕಾಂಗ್ರೆಸ್‌ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆʼʼ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ.

ಈ ಬಗ್ಗೆ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʻʻಯಾವುದೇ ಪಕ್ಷದ ಸರ್ಕಾರ ಬಂದರೂ ಸಾಲ ಮಾಡಲೇಬೇಕು. ಇಂತಹ ಸ್ಥಿತಿಯಲ್ಲಿ ಸಂಪನ್ಮೂಲದ ಗ್ಯಾರಂಟಿಯೇ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆ ತರಲಾಗಿದೆ. ಇದನ್ನು ನಿರ್ವಹಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಬೆಸ್ಕಾಂ ಹಾಗೂ ಇಲಾಖೆಗಳು ನಷ್ಟದಲ್ಲಿವೆ. ಕಾಂಗ್ರೆಸ್‌ ಶಾಸಕರೇ ಸರ್ಕಾರದ ವಿರುದ್ಧ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ. ಅದಕ್ಕೂ ಮುಂದೆ ಎಚ್ಚೆತ್ತುಕೊಳ್ಳಲಿʼʼ ಎಂದು ಹೇಳಿದ್ದಾರೆ.

ʻʻಬೆಂಗಳೂರಿಗೆ ನಿಗದಿಯಾದ ಅನುದಾನಗಳನ್ನು ಈ ಹಿಂದೆಯೂ ವಾಪಸ್‌ ಪಡೆಯಲಾಗಿದೆ. ನಗರದಲ್ಲಿ ಪ್ರವಾಹದ ನಿಯಂತ್ರಣಕ್ಕಾಗಿ ಯೋಜನೆ ರೂಪಿಸಲು ಬಿಜೆಪಿ ಸರ್ಕಾರ ಅನುದಾನ ಮೀಸಲಿಟ್ಟಿತ್ತು. ಅದನ್ನು ಗ್ಯಾರಂಟಿಗೆ ನೀಡಲಾಗಿದೆ. ಪಾದಚಾರಿ ಮಾರ್ಗ, ಮೇಲ್ಸೇತುವೆ, ರಾಜಕಾಲುವೆ ಸೇರಿದಂತೆ ಎಲ್ಲ ಅಭಿವೃದ್ಧಿ ಯೋಜನೆಗಳ ಹಣವನ್ನು ಗ್ಯಾರಂಟಿಗೆ ವರ್ಗಾಯಿಸಲಾಗಿದೆ. ಬಿಬಿಎಂಪಿ ಅನುದಾನ ಬಿಟ್ಟು, ಬಿಜೆಪಿ ಸರ್ಕಾರ 8-9 ಸಾವಿರ ಕೋಟಿ ರೂ. ನೀಡಿತ್ತು. ಈಗ ಸರ್ಕಾರದ ಖಜಾನೆ ಖಾಲಿ ಮಾಡುತ್ತಿದ್ದಾರೆʼʼ ಎಂದರು.

ಪಾದಯಾತ್ರೆ ಯಶಸ್ವಿ

ʻʻಇತ್ತೀಚೆಗೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಉತ್ತಮವಾಗಿ ಸಾಮೂಹಿಕ ನಾಯಕತ್ವದಲ್ಲಿ ಪಾದಯಾತ್ರೆ ನಡೆದಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರು ನನಗೆ ಕರೆ ಮಾಡಿ, ಈ ಪಾದಯಾತ್ರೆಯಲ್ಲಿ ಎಲ್ಲರೂ ಭಾಗವಹಿಸಿ ಎಂದು ಹೇಳಿದ್ದರು. ಪಾದಯಾತ್ರೆ ಯಶಸ್ವಿಯಾಗಿರುವುದರಿಂದಲೇ ಕಾಂಗ್ರೆಸ್‌ ನಾಯಕರು ಭಯಕ್ಕೊಳಗಾಗಿ ಹೇಳಿಕೆಗಳನ್ನು ನೀಡಿದ್ದಾರೆ. ಸರ್ಕಾರದ ಎರಡು ಹಗರಣಗಳ ವಿರುದ್ಧ ಪಾದಯಾತ್ರೆಯ ಜೊತೆಗೆ, ಕೆಲವರು ರಾಜಭವನಕ್ಕೂ ದೂರು ಸಲ್ಲಿಸಿದ್ದಾರೆʼʼ ಎಂದರು.

ಬಿಜೆಪಿಯ ಭಿನ್ನಮತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ʻʻಈ ಎಲ್ಲ ಬೆಳವಣಿಗೆಯನ್ನು ಕೇಂದ್ರದ ನಾಯಕರ ಗಮನಕ್ಕೆ ತರುತ್ತೇನೆ. ಈಗಾಗಲೇ ಕೇಂದ್ರದ ನಾಯಕರು ಇದನ್ನು ಗಮನಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ರಾಜಕೀಯ ಪಕ್ಷವಲ್ಲ. ಆದ್ದರಿಂದ ರಾಜಕೀಯದ ಸಭೆ ಮಾಡುವ ಪದ್ಧತಿ ಸಂಘದಲ್ಲಿಲ್ಲʼʼ ಎಂದು ಯತ್ನಾಳ ಅವರ ಬಣಕ್ಕೆ ಟಾಂಗ್‌ ಕೊಟ್ಟಿದ್ದಾರೆ.

ʻʻಬಳ್ಳಾರಿ ಪಾದಯಾತ್ರೆಗೆ ಕೇಂದ್ರದ ನಾಯಕರು ಒಪ್ಪಿಗೆ ನೀಡಿದರೆ ನಾವು ಕೂಡ ಅದರಲ್ಲಿ ಭಾಗವಹಿಸುತ್ತೇವೆ. ಸಣ್ಣ ಪುಟ್ಟ ವ್ಯತ್ಯಾಸ ಇರುವುದು ನನ್ನ ಗಮನಕ್ಕೂ ಬಂದಿದೆ. ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಮೊದಲಾದವರನ್ನು ಕೇಂದ್ರದ ನಾಯಕರು ಕರೆಸಿ ಈ ಹಿಂದೆಯೂ ಚರ್ಚೆ ಮಾಡಿದ್ದಾರೆ. ಈ ಭಿನ್ನಾಭಿಪ್ರಾಯ ಬಿಟ್ಟು ಒಟ್ಟಾಗಿ ವಿರೋಧ ಪಕ್ಷವಾಗಿ ನಮ್ಮ ಕರ್ತವ್ಯ ಮಾಡುತ್ತೇವೆ. ಜನರು ಕೂಡ ನಮ್ಮಿಂದ ಅದನ್ನೇ ನಿರೀಕ್ಷೆ ಮಾಡುತ್ತಾರೆʼʼ ಎಂದರು.

ʻʻಸಿ.ಪಿ.ಯೋಗೇಶ್ವರ್‌ ಅವರ ಮನೆಗೆ ಹೋಗಿ ಚರ್ಚೆ ಮಾಡಲಾಗಿದೆ. ಅವರಿಗೆ ಚೆನ್ನಪಟ್ಟಣ ಉಪಚುನಾವಣೆಯ ಟಿಕೆಟ್‌ ನೀಡುವ ಬಗ್ಗೆ ಎನ್‌ಡಿಎ ನಿರ್ಧಾರ ಮಾಡಬೇಕಿದ್ದು, ಆ ಬಗ್ಗೆಯೂ ಮನವರಿಕೆ ಮಾಡಿಕೊಡುತ್ತೇವೆ. ಬಂಡಾಯ ಸ್ಪರ್ಧೆ ಮಾಡುವುದು ಸರಿಯಲ್ಲ. ಏಕ ಅಭ್ಯರ್ಥಿ ಸ್ಪರ್ಧಿಸುವಂತೆ ಮಾಡಲು ಎಲ್ಲ ಪ್ರಯತ್ನ ಮಾಡುತ್ತೇವೆʼʼ ಎಂದು ಆರ್‌ ಅಶೋಕ ಹೇಳಿದ್ದಾರೆ.

Read More
Next Story