
ಆಪರೇಶನ್ ಸಿಂಧೂರದ ಮೂಲಕ ವಿಶ್ವಕ್ಕೆ ದೇಶಿ ವಿಜ್ಞಾನಿಗಳ ಸಾಧನೆ ಗೊತ್ತಾಗಿದೆ : ಎಚ್ಡಿಕೆ
ಬೆಂಗಳೂರಿನ CMTI ಕೇಂದ್ರಕ್ಕೆಎಚ್.ಡಿ. ಕುಮಾರಸ್ವಾಮಿ ಭೇಟಿ. ವಿಜ್ಞಾನಿಗಳ ಕೊಡುಗೆ ಸ್ಮರಿಸಿದ ಸಚಿವರು
ದೇಶೀಯ ವಿಜ್ಞಾನಿಗಳು, ತಂತ್ರಜ್ಞರ ಸಾಧನೆ ಮತ್ತು ಹೆಗ್ಗಳಿಕೆ ಏನೆಂಬುದು ಆಪರೇಶನ್ ಸಿಂಧೂರದ ಮೂಲಕ ವಿಶ್ವಕ್ಕೆ ಗೊತ್ತಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನ ತುಮಕೂರು ರಸ್ತೆಯಲ್ಲಿ ಕೇಂದ್ರೀಯ ಉತ್ಪಾದನಾ ತಂತ್ರಜ್ಞಾನ ಸಂಸ್ಥೆಯ 64ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವ ಮೊದಲು ಹಲವು ವಿಷಯಗಳಲ್ಲಿ ವಿದೇಶಗಳನ್ನು ಅವಲಂಬಿಸಬೇಕಾಗಿತ್ತು. ಇದೀಗ ಪರಿಸ್ಥಿತಿ ಬದಲಾಗಿದ್ದು, ಪ್ರತಿಯೊಂದು ಸ್ವದೇಶಿಯವಾಗಿಯೇ ಉತ್ಪಾದನೆ ಮಾಡಲಾಗುತ್ತಿದೆ ಎಂದಿದ್ದಾರೆ.
ರಕ್ಷಣಾ ಪಡೆಗಳಿಗೆ ಅಗತ್ಯವಾದ ಅನೇಕ ಶಸ್ತ್ರಾಸ್ತ್ರಗಳನ್ನು ಮೇಕ್ ಇನ್ ಇಂಡಿಯಾ, ಆತ್ಮನಿರ್ಭರ್ ಭಾರತ ಕಾರ್ಯಕ್ರಮಗಳ ಮೂಲಕ ತಯಾರು ಮಾಡಲಾಗುತ್ತಿದೆ. ಭಾರತ ಇಂದು ರಕ್ಷಣಾ ವಲಯದಲ್ಲಿ ಸಶಕ್ತ, ಬಲಿಷ್ಠ ದೇಶವಾಗಿ ಹೊರಹೊಮ್ಮಿದೆ. ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ದೂರದೃಷ್ಟಿ ಹಾಗೂ ನಮ್ಮ ವಿಜ್ಞಾನಿಗಳು, ತಂತ್ರಜ್ಞರು ಕಾರಣ. ದೇಶದ ಶಸ್ತ್ರಾಸ್ತ್ರಗಳ ಶಕ್ತಿ ಏನೆಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಅಪಪರೇಶನ್ ಸಿಂಧೂರ ಜಗತ್ತಿಗೆ ತೋರಿಸಿಕೊಟ್ಟಿದೆ ಎಂದು ಹೇಳಿದ್ದಾರೆ.
ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ದೊಡ್ಡ ಮಟ್ಟದಲ್ಲಿ ಸಂಶೋಧನೆ ನಡೆಸುತ್ತಿದೆ. ಸೆಮಿಕಂಡಕ್ಟರ್ ಹಾಗೂ ಕೃತಕ ಬುದ್ಧಿಮತ್ತೆ ಕ್ಷೇತ್ರಗಳಿಗೆ ಬೆಂಗಳೂರು ನೆಚ್ಚಿನ ತಾಣವಾಗಿದೆ. ಸಮರ್ಪಕ ಮಾನವ ಸಂಪನ್ಮೂಲ ಹಾಗೂ ಅದಕ್ಕೆ ಬೇಕಾದ ಪೂರಕ ವ್ಯವಸ್ಥೆ ಇರುವುದರಿಂದ ಈ ಕ್ಷೇತ್ರಗಳಿಗೆ ಬೆಂಗಳೂರಿನಲ್ಲಿ ಭಾರೀ ಅವಕಾಶಗಳು ಇವೆ. ಕೇಂದ್ರೀಯ ಉತ್ಪಾದನಾ ತಂತ್ರಜ್ಞಾನ ಸಂಸ್ಥೆ ಕೇಂದ್ರದ ಸರ್ಕಾರದ ಬೃಹತ್ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಸಂಸ್ಥೆಯಾಗಿದೆ. ರಕ್ಷಣೆ, ಬಾಹ್ಯಾಕಾಶ ಸೇರಿದಂತೆ ವಿವಿಧ ಕೈಗಾರಿಕೆ ಅಗತ್ಯಗಳಿಗೆ ತಕ್ಕಂತೆ ಇಲ್ಲಿ ಉತ್ಪಾದನೆ ನಡೆಯುತ್ತಿದೆ ಎಂದಿದ್ದಾರೆ.