
ಕೃಷಿ ಸಚಿವ ಚಲುವರಾಯಸ್ವಾಮಿ
ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ; ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ
ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಯೂರಿಯಾ ಸೇರಿದಂತೆ ರಸಗೊಬ್ಬರದ ಕೊರತೆ ಕಂಡುಬಂದಲ್ಲಿ ಹೆಚ್ಚುವರಿಯಾಗಿ ಉಳಿಕೆಯಾಗಿರುವ ಜಿಲ್ಲೆಗಳಿಂದ ಮರುವಿಂಗಡಣೆ ಮಾಡಿ ಸರಬರಾಜು ಮಾಡಲಾಗುವುದು ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.
ರಾಜ್ಯದಲ್ಲಿ ಯಾವುದೇ ಜಿಲ್ಲೆಯಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ಕೊರತೆ ಇಲ್ಲ. ರೈತರು ಆತಂಕಕ್ಕೆ ಒಳಗಾಗಬಾರದು, ಅಲ್ಲದೆ ಬೇಡಿಕೆ ಹೆಚ್ಚಿರುವ ಪ್ರದೇಶಗಳಿಗೆ ಇತರೆಡೆಗಳಿಂದ ರಸಗೊಬ್ಬರ ವರ್ಗಾವಣೆ ಮಾಡಿ ಸರಿದೂಗಿಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ವಿಕಾಸ ಸೌಧದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈತರಿಗೆ ಯಾವುದೇ ರೀತಿ ತೊಂದರೆಗಳಾಗದಂತೆ ನಿಗಾ ವಹಿಸಲು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ವರ್ಷ ಮುಂಗಾರು ಬೇಗ ಆರಂಭವಾದ ಕಾರಣ ಸುಮಾರು 2 ಲಕ್ಷ ಹೆಕ್ಟೇರ್ ಮುಸುಕಿನ ಜೋಳ ಪ್ರದೇಶ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಿದೆ. ಕೆಲವು ರೈತರು ಆತಂಕದಿಂದ ಆಗಸ್ಟ್, ಸೆಪ್ಟೆಂಬರ್ಗೆ ಬೇಕಾದ ಗೊಬ್ಬರವನ್ನು ಈಗಲೇ ಖರೀದಿಸಲು ಮುಂದಾಗಿದ್ದು ಸಹ ತಕ್ಷಣ ಬೇಡಿಕೆ ಹೆಚ್ಚಲು ಕಾರಣವಾಗಿರಬಹುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ನಮ್ಮ ಗುರಿಗಿಂತ ಹೆಚ್ಚಿನ ದಾಸ್ತಾನು ಲಭ್ಯವಿದೆ, ಜುಲೈ ತಿಂಗಳ ಬೇಡಿಕೆಯ ಆಧಾರದಲ್ಲಿನ ವಿತರಣೆಯ ನಂತರವೂ ದಾಸ್ತಾನು ಉಳಿದಿದೆ. ಒಂದು ವೇಳೆ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಯೂರಿಯಾ ಸೇರಿದಂತೆ ರಸಗೊಬ್ಬರದ ಕೊರತೆ ಕಂಡುಬಂದಲ್ಲಿ ಹೆಚ್ಚುವರಿಯಾಗಿ ಉಳಿಕೆಯಾಗಿರುವ ಜಿಲ್ಲೆಗಳಿಂದ ಮರು ವಿಂಗಡಣೆ ಮಾಡಿ ಸರಬರಾಜು ಮಾಡಲಾಗುವುದು. ಕೃಷಿಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ತಿಳಿಸಿದ್ದಾರೆ.
ಜುಲೈ ತಿಂಗಳವರೆಗೆ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 5,34,009 ಮೆಟ್ರಿಕ್ ಟನ್ ರಸಗೊಬ್ಬರ ಹಂಚಿಕೆಯಾಗಿದೆ. ಇದರಲ್ಲಿ ಈವರೆಗೆ 4,30,633 ಮೆಟ್ರಿಕ್ ಟನ್ ಸರಬರಾಜಾಗಿದೆ. ಏಪ್ರಿಲ್ ನಿಂದ ಜುಲೈವರೆಗೆ ರಾಜ್ಯದಲ್ಲಿ 6,80,655 ಮೆಟ್ರಿಕ್ ಟನ್ ಯೂರಿಯಾ ಬೇಡಿಕೆ ಇದ್ದು, ಕೇಂದ್ರ ಸರ್ಕಾರದಿಂದ 6,82,500 ಮೆ. ಟನ್ ಹಂಚಿಕೆಯಾಗಿದೆ. ಇದರಲ್ಲಿ 5,26,817 ಮೆಟ್ರಿಕ್ ಟನ್ ಸರಬರಾಜಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ 3,46,499 ಹಳೆ ಯೂರಿಯಾ ದಾಸ್ತಾನು ಉಳಿಕೆ ಇದ್ದು, ಕೇಂದ್ರದಿಂದ ಸರಬರಾಜಾದ ಯೂರಿಯಾ ಸೇರಿದಂತೆ 8,73,315 ಮೆಟ್ರಿಕ್ ಟನ್ ಒಟ್ಟು ಲಭ್ಯತೆ ಇತ್ತು, ಇದರಲ್ಲಿ 7,08,859 ಮೆಟ್ರಿಕ್ ಟನ್ ಯೂರಿಯಾವನ್ನು ವಿವಿಧ ಜಿಲ್ಲೆಗಳಿಗೆ ವಿತರಿಸಿದ್ದು, ರೈತರಿಗೂ ಮಾರಾಟ ಮಾಡಲಾಗಿದೆ. ಇನ್ನು 1,64,567 ಮೆಟ್ರಕ್ ಟನ್ ಯೂರಿಯ ದಾಸ್ತಾನು ಉಳಿಕೆಯಿದೆ. ಅಲ್ಲದೆ ಕೇಂದ್ರದಿಂದ ಹಂತ ಹಂತವಾಗಿ ಪೂರೈಕೆಯಾಗುವ ರಸಗೊಬ್ಬರವನ್ನು ಆಗಿಂದಾಗಲೇ ಹಂಚಿಕೆ ಮಾಡಿ ವರ್ಗಾವಣೆ ಮಾಡಲಾಗುವುದು.
ರಾಜ್ಯ ಸರ್ಕಾರ ನಿರಂತರವಾಗಿ ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಸಹ ಯೂರಿಯ ಶೀಘ್ರ ಪೂರೈಕೆಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಯಾವುದೇ ಸಮಸ್ಯೆಗಳಿಲ್ಲದಂತೆ ರಸಗೊಬ್ಬರ ಪೂರೈಕೆ ನಿವಾರಿಸಲು ಅಧಿಕಾರಿಗಳ ತಂಡಕ್ಕೆ ಸೂಚಿಸಲಾಗಿದೆ.
ನ್ಯಾನೋ ಯೂರಿಯಾ ಕೂಡ ಪರಿಣಾಮಕಾರಿ
ರಾಜ್ಯದಲ್ಲಿ ಅಧಿಕ ಪ್ರಮಾಣದಲ್ಲಿ ನ್ಯಾನೋ ಯೂರಿಯಾ ಕೂಡ ಲಭ್ಯವಿದ್ದು ಇದು ಸಹ ಹೆಚ್ಚು ಪರಿಣಾಮಕಾರಿ ಮತ್ತು ಲಾಭದಾಯಕ ಎಂಬುದು ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾಲಯಗಳು, ರೈತರು ನಡೆಸಿದ ಪ್ರಯೋಗಗಳಿಂದ ದೃಢಪಟ್ಟಿದೆ. ಉಳಿತಾಯ ಕೂಡ ಆಗಲಿದೆ. ಆದ್ದರಿಂದ ಕೃಷಿಕರು ಈ ಬಗ್ಗೆಯೂ ಗಮನಹರಿಸಬೇಕು.
ಅತಿಯಾದ ರಸಗಬ್ಬರ ಬಳಕೆ ಭೂಮಿಯ ಫಲವತ್ತತೆ ಹಾಗೂ ಮಾನವನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಮುಂದಿನ ಭವಿಷ್ಯದ ದೃಷ್ಟಿಯಿಂದ ರಸಗೊಬ್ಬರಗಳ ಬಳಕೆ ಹಸಿರು ಗೊಬ್ಬರ, ಜೈವಿಕ ಗೊಬ್ಬರಗಳ ಬಳಕೆ ಹೆಚ್ಚಿಸುವುದು ಅಗತ್ಯವಿದೆ. ಈ ಬಗ್ಗೆಯೂ ರೈತರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ. ರಾಜ್ಯಾದ್ಯಂತ ಉತ್ತಮ ಮಳೆಯಾಗಿದ್ದು ಶೇ. 75ರಷ್ಟು ಬಿತ್ತನೆಯಾಗಿದೆ. ಶೇ.100ರಷ್ಟು ಗುರಿಸಾಧನೆ ನಿರೀಕ್ಷೆ ಹೊಂದಲಾಗಿದೆ.