Mysore Dasara 2025: ಈ ಬಾರಿಯ ಮೈಸೂರು ದಸರಾ 11 ದಿನ: ಎಷ್ಟು ಅನುದಾನ?
x

Mysore Dasara 2025: ಈ ಬಾರಿಯ ಮೈಸೂರು ದಸರಾ 11 ದಿನ: ಎಷ್ಟು ಅನುದಾನ?

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ದಸರಾದ ಚಾರಿತ್ರಿಕ ಮಹತ್ವವನ್ನು ಮರೆಯದೆ, ಅನಗತ್ಯ ಹಣ ಖರ್ಚು ಮಾಡುವ ಬದಲು ಜನರ ಮತ್ತು ಪ್ರವಾಸಿಗರ ಸುರಕ್ಷತೆ ಹಾಗೂ ಅನುಕೂಲಕ್ಕೆ ಪ್ರಥಮ ಆದ್ಯತೆ ನೀಡಬೇಕು ಎಂದು ಸೂಚಿಸಿದರು.


ಈ ವರ್ಷದ ನಾಡಹಬ್ಬ ಮೈಸೂರು ದಸರಾ 10 ದಿನಗಳ ಬದಲಾಗಿ 11 ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ (ಜೂನ್ 28) ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 22ರಂದು ದಸರಾಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್ 2ರಂದು ವಿಜಯದಶಮಿ ಹಾಗೂ ಜಂಬೂಸವಾರಿ ನಡೆಯಲಿದೆ.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ದಸರಾದ ಚಾರಿತ್ರಿಕ ಮಹತ್ವವನ್ನು ಮರೆಯದೆ, ಅನಗತ್ಯ ಹಣ ಖರ್ಚು ಮಾಡುವ ಬದಲು ಜನರ ಮತ್ತು ಪ್ರವಾಸಿಗರ ಸುರಕ್ಷತೆ ಹಾಗೂ ಅನುಕೂಲಕ್ಕೆ ಪ್ರಥಮ ಆದ್ಯತೆ ನೀಡಬೇಕು ಎಂದು ಸೂಚಿಸಿದರು. ಈ ವರ್ಷ ರಾಜ್ಯದಲ್ಲಿ ಉತ್ತಮ ಮಳೆ ಸುರಿದು ನದಿ-ಕೆರೆಗಳು ತುಂಬಿರುವುದರಿಂದ ದಸರಾವನ್ನು ಇನ್ನಷ್ಟು ವೈಭವದಿಂದ ಆಚರಿಸುವ ಭರವಸೆ ನೀಡಿದರು. ಕಳೆದ ವರ್ಷ ದಸರಾ ಆಚರಣೆಗೆ 40 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ಬೇಕಾದಷ್ಟು ಅನುದಾನವನ್ನು ಒದಗಿಸಲಾಗುವುದು ಎಂದು ಅವರು ತಿಳಿಸಿದರು.

ಗಾಂಧೀಜಿ ವಿಚಾರಧಾರೆ

ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುದನ್ನು ಮುಖ್ಯಮಂತ್ರಿಯವರ ವಿವೇಚನೆಗೆ ಬಿಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಸರ್ಕಾರದ ಸಾಧನೆಗಳು, ವಿವಿಧ ಇಲಾಖೆಗಳು ಜಾರಿಗೊಳಿಸಿರುವ ಜನಪರ ಕಾರ್ಯಕ್ರಮಗಳು ಜನರಿಗೆ ಪರಿಣಾಮಕಾರಿಯಾಗಿ ತಲುಪುವಂತೆ ಯೋಜನೆಗಳನ್ನು ರೂಪಿಸಬೇಕು ಎಂದು ಸಿಎಂ ಸಲಹೆ ನೀಡಿದರು. ಅಕ್ಟೋಬರ್ 2ರಂದು ವಿಜಯದಶಮಿ ಗಾಂಧಿ ಜಯಂತಿಯೊಂದಿಗೆ ಸೇರಿಕೊಳ್ಳುವುದರಿಂದ, ಸ್ತಬ್ಧಚಿತ್ರಗಳಲ್ಲಿ ಗಾಂಧೀಜಿ ವಿಚಾರಧಾರೆಗಳಿಗೂ ಅವಕಾಶ ಕಲ್ಪಿಸುವಂತೆ ಅವರು ಸೂಚಿಸಿದರು.

ದಸರಾ ಸಂದರ್ಭದಲ್ಲಿ 10 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದ್ದು, ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಮುಖ್ಯಮಂತ್ರಿ ಸೂಚಿಸಿದರು. ಅರಮನೆ ಮುಂಭಾಗದಲ್ಲಿ ಕಳೆದ ಬಾರಿಗಿಂತ ಈ ಬಾರಿ ಆಸನ ವ್ಯವಸ್ಥೆಯನ್ನು ಕಡಿಮೆ ಮಾಡುವ ಮೂಲಕ ಜನದಟ್ಟಣೆ ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಪೊಲೀಸರು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಮತ್ತು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆ, ಕೆಆರ್‌ಎಸ್ (KRS) ಗೆ ಹೋಗುವ ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ರಸ್ತೆಗಳನ್ನು ಈಗಲೇ ದುರಸ್ತಿ ಮಾಡುವ ಕಾರ್ಯವನ್ನು ಆರಂಭಿಸಲು ಸೂಚಿಸಲಾಯಿತು. ಜಾನಪದ ಕಲೆಗಳ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಬೇಕು ಮತ್ತು ಪ್ರದರ್ಶನಗಳಲ್ಲಿ ಏಕತಾನತೆ ಇಲ್ಲದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಹೇಳಿದರು. ಕಳೆದ ಬಾರಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ವಿದ್ಯುತ್ ದೀಪಾಲಂಕಾರವನ್ನು ಈ ಬಾರಿಯೂ ಇನ್ನಷ್ಟು ಉತ್ತಮವಾಗಿ ಮಾಡುವಂತೆ ಸೂಚಿಸಲಾಯಿತು. ಎಲ್ಲಾ ಜಿಲ್ಲೆಗಳಿಂದ ಬರುವ ಸ್ತಬ್ಧಚಿತ್ರಗಳು ವೈವಿಧ್ಯಮಯವಾಗಿರಬೇಕು ಹಾಗೂ ವಸ್ತು ಪ್ರದರ್ಶನದ ಮಳಿಗೆಗಳು ಉದ್ಘಾಟನೆ ಸಂದರ್ಭದಲ್ಲೇ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಂಡಿರಬೇಕು ಎಂದು ತಿಳಿಸಿದರು. ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಗೋಲ್ಡ್ ಕಾರ್ಡ್‌ಗಳನ್ನು ವಿತರಿಸಲು ಸೂಚಿಸಲಾಯಿತು.

ಮೂಲ ಸೌಕರ್ಯಕ್ಕೆ ಆದ್ಯತೆ

ಮೈಸೂರು ನಗರದ ಸೌಂದರ್ಯವನ್ನು ಹೆಚ್ಚಿಸುವುದು, ದಸರಾ ವೀಕ್ಷಿಸಲು ಆಗಮಿಸುವವರಿಗೆ ಶೌಚಾಲಯ, ವಾಹನ ಪಾರ್ಕಿಂಗ್‌ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸುವುದು, ಮತ್ತು ದೊಡ್ಡ ಪ್ರಮಾಣದಲ್ಲಿ ಡ್ರೋನ್ ಶೋ ಆಯೋಜಿಸುವುದು ಈ ಬಾರಿಯ ದಸರಾ ಆಯೋಜನೆಯ ಪ್ರಮುಖ ಅಂಶಗಳಾಗಿವೆ. ದಸರಾ ಸಂದರ್ಭದಲ್ಲಿ ಅಧಿಕಾರಿಗಳು ಜನಸಾಮಾನ್ಯರಿಗೆ ದೊರೆಯುವುದಿಲ್ಲ ಎಂಬ ದೂರುಗಳಿಗೆ ಅವಕಾಶ ನೀಡಬಾರದು ಮತ್ತು ಜನಸಾಮಾನ್ಯರ ಕೆಲಸ ಕಾರ್ಯಗಳು, ಅಭಿವೃದ್ಧಿ ಕಾರ್ಯಗಳು ಯಾವುದೇ ಕಾರಣಕ್ಕೂ ಕುಂಠಿತವಾಗಬಾರದು ಎಂದು ಸಿಎಂ ಕಟ್ಟುನಿಟ್ಟಾಗಿ ಸೂಚಿಸಿದರು.

ಸಭೆಯಲ್ಲಿ ಮಾತನಾಡಿದ ಸಚಿವ ಎಚ್.ಸಿ. ಮಹದೇವಪ್ಪ, ಅರಮನೆ ಮುಂದೆ ಆಸನ ವ್ಯವಸ್ಥೆಯನ್ನು ಕಡಿಮೆ ಮಾಡಿ ಜನದಟ್ಟಣೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. ಶಾಸಕ ತನ್ವೀರ್ ಸೇಠ್, ಮೈಸೂರು ದಸರಾ ಪ್ರಾಧಿಕಾರ ಸ್ಥಾಪಿಸಿ, ದಸರಾವನ್ನು ವ್ಯವಸ್ಥಿತವಾಗಿ ಆಚರಿಸಬೇಕು ಎಂದರು. ಉತ್ತಮ ಮಳೆಯಾಗಿದ್ದು, ರೈತರು ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದಾರೆ ಎಂದು ಹೇಳಿದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ, ಜಂಬೂ ಸವಾರಿ ಸಂದರ್ಭದಲ್ಲಿ ಕಲಾ ತಂಡಗಳನ್ನು ಹೊರತುಪಡಿಸಿ ಬೇರೆ ಯಾರೂ ಓಡಾಡಲು ಅವಕಾಶ ನೀಡಬಾರದು ಎಂದು ಸಲಹೆ ನೀಡಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಶಿವರಾಜ ತಂಗಡಗಿ, ಕೆ. ವೆಂಕಟೇಶ್, ಸುರೇಶ್ ಭೈರತಿ ಸೇರಿದಂತೆ ಹಲವು ಶಾಸಕರು ಮತ್ತು ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Read More
Next Story