ಜನ ನನ್ನ ಜೊತೆ ಇರುವವರೆಗೂ BJP-JDS ಷಢ್ಯಂತ್ರಕ್ಕೆ ಹೆದರಲ್ಲ: ಸಿಎಂ ಸಿದ್ದರಾಮಯ್ಯ
x
ಮುಖ್ಯಮಂತ್ರಿ ಸಿದ್ದರಾಮಯ್ಯ

ಜನ ನನ್ನ ಜೊತೆ ಇರುವವರೆಗೂ BJP-JDS ಷಢ್ಯಂತ್ರಕ್ಕೆ ಹೆದರಲ್ಲ: ಸಿಎಂ ಸಿದ್ದರಾಮಯ್ಯ

ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು BJP-JDS ಷಢ್ಯಂತ್ರಕ್ಕೆ ಹೆದರಲ್ಲ. ಎಲ್ಲಾ ಷಢ್ಯಂತ್ರಗಳನ್ನು ಸೋಲಿಸುತ್ತೇನೆ ಎಂದು ಸಿದ್ದರಾಮಯ್ಯ ತಮ್ಮ ತವರು ಕ್ಷೇತ್ರ ವರುಣಾದಲ್ಲಿ ಹೇಳಿದ್ದಾರೆ


Click the Play button to hear this message in audio format

ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು BJP-JDS ಷಡ್ಯಂತ್ರಕ್ಕೆ ಹೆದರುವುದಿಲ್ಲ. ಎಲ್ಲಾ ಷಢ್ಯಂತ್ರ ಸೋಲಿಸುತ್ತೇನೆ. ಅವರ ಆಟಗಳಿಗೆ ಜಗ್ಗಲ್ಲ, ಬಗ್ಗಲ್ಲ. ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಅವರು ಮಾತನಾಡಿದರು.

ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೆಲ್ಲಾ ವರುಣಾ ಕ್ಷೇತ್ರ ಮಾತ್ರವಲ್ಲದೆ ರಾಜ್ಯದ ಎಲ್ಲ ಬಡವರಿಗೆ ಆರ್ಥಿಕ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೇನೆ. ಹತ್ತು ಹಲವು ಭಾಗ್ಯಗಳನ್ನು ಕೊಡುವ ಜೊತೆಗೆ ಹಲವು ನಿಗಮಗಳ ಸಾಲ ಮನ್ನಾ ಮಾಡಿದ್ದೇನೆ. ಅಂಬೇಡ್ಕರ್ ಅವರ ಆಶಯದಂತೆ ಬಡವರಿಗೆ ಆರ್ಥಿಕ‌ ಶಕ್ತಿ ಕೊಡುವ ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇನೆ.

ಎರಡನೇ ಬಾರಿ ಮುಖ್ಯಮಂತ್ರಿ ಆದಾಗಲೂ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ, ಮಧ್ಯಮ ವರ್ಗದವರ ಬದುಕಿಗೆ ಆಸರೆ ಆಗುವ ಐದೂ ಗ್ಯಾರಂಟಿ ಯೋಜನೆಗಳನ್ನು ಜನಪರವಾಗಿ ರೂಪಿಸಿ ಜಾರಿ ಮಾಡಿದ್ದೇವೆ. ಪ್ರತೀ ವರ್ಷ ಈ ಗ್ಯಾರಂಟಿಗಳ ಮೂಲಕ 56 ಸಾವಿರ ಕೋಟಿ ರೂಪಾಯಿಗಳನ್ನು ಜನರ ಖಾತೆಗೆ ನೇರವಾಗಿ ಹಾಕುತ್ತಿದ್ದೇವೆ. ಹೀಗೆ ದೇಶದಲ್ಲಿ ನುಡಿದಂತೆ ನಡೆದುಕೊಂಡಿರುವ ಪಕ್ಷ ನಿಮ್ಮ ಪಕ್ಷ. ನಿಮ್ಮದೇ ಕಾಂಗ್ರೆಸ್ ಪಕ್ಷ ಎಂದರು.

ಕೇಂದ್ರದಲ್ಲಿರುವ ಮೋದಿ ಸರ್ಕಾರವಾಗಲಿ, ರಾಜ್ಯದಲ್ಲಿದ್ದ ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಸರ್ಕಾರಗಳಾಗಲೀ ಜನರ ಕಲ್ಯಾಣ ಮಾಡದೆ ಲೂಟಿ ಮಾಡಿ ಹೋದರು ಎಂದರು.

ಬಿಜೆಪಿ ಸಾಮಾಜಿಕ ನ್ಯಾಯ, ಬಡವರ ವಿರೋಧಿ

ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ. ಬಡವರ ವಿರೋಧಿ. ಮೂರು ಬಾರಿ ಪ್ರಧಾನಿ ಆಗಿರುವ ಮೋದಿ ಕೊಟ್ಟ ಮಾತಿನಂತೆ ನಡೆದ ಉದಾಹರಣೆ ಇದೆಯಾ ಹೇಳಿ.‌ ಇಷ್ಟು ವರ್ಷ ಪ್ರಧಾನಿಯಾಗಿ ಮೋದಿ ಬಡಪರ ಪರವಾಗಿ ಒಂದೇ ಒಂದು ಯೋಜನೆ ಜಾರಿ ಮಾಡಿದ್ದಾರಾ ಹೇಳಿ ಎಂದರು.

ಕೇಂದ್ರದಿಂದ ರಾಜ್ಯಕ್ಕೆ ನಿರಂತರ ದ್ರೋಹ

ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಕಟ್ಟುವವರು ನಾವು. ನಾವು ನಮ್ಮ ಪಾಲಿನ ತೆರಿಗೆ ಪಡೆಯಲು ಭಿಕ್ಷೆ ಬೇಡಬೇಕಾ? ಮೊನ್ನೆ ಉತ್ತರ ಪ್ರದೇಶ, ಬಿಹಾರ ರಾಜ್ಯಗಳಿಗೆ ಅತಿ ಹೆಚ್ಚು ತೆರಿಗೆ ಪಾಲು ಕೊಟ್ಟಿರುವ ಕೇಂದ್ರಕ್ಕೆ ರಾಜ್ಯಕ್ಕೆ ಮಾತ್ರ ಕೇವಲ ಆರು ಸಾವಿರ ಕೋಟಿ ಕೊಟ್ಟು ಭಯಾನಕ ಅನ್ಯಾಯ ಮಾಡಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಅನ್ಯಾಯದ ವಿರುದ್ದ ದೆಹಲಿಗೇ ಹೋಗಿ ನಾವು ಪ್ರತಿಭಟನೆ ಮಾಡಿದೆವು. ಬಿಜೆಪಿ-ಜೆಡಿಎಸ್ ಒಬ್ಬೇ ಒಬ್ಬ ಲೋಕಸಭಾ ಸದಸ್ಯ ರಾಜ್ಯದ ಪಾಲನ್ನು ಕೇಳುವ ಧೈರ್ಯ ಮಾಡಿಲ್ಲ. ಮಾಡುವುದೂ ಇಲ್ಲ. ಆದ್ದರಿಂದ ಕೇಂದ್ರದ ದ್ರೋಹದ ವಿರುದ್ಧ ರಾಜ್ಯದ ಜನತೆ ಮಾತನಾಡಬೇಕು ಎಂದು ಕರೆ ನೀಡಿದರು.

ರಾಜ್ಯಕ್ಕೆ ವಿಶೇಷ ಅನುದಾನದ ಜೊತೆಗೆ ನೀರಾವರಿ ಯೋಜನೆಗೆ 5495 ಕೋಟಿ ನೀಡಲು ಶಿಫಾರಸು ಮಾಡಿದ್ದ ನಿರ್ಮಲಾ ಸೀತಾರಾಮನ್ ಈ ಹಣವನ್ನೂ ಕೊಡಲಿಲ್ಲ. ರಾಜ್ಯದ ಫೆರಿಫೆರಲ್ ರಸ್ತೆಗೆ, ಕೆರೆಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ಕೊಡ್ತೀವಿ ಅಂದು ಘೋಷಿಸಿದರು. ಆದರೆ ನಯಾಪೈಸೆ ಕೊಡಲಿಲ್ಲ. ಈ ಅನ್ಯಾಯಗಳ ವಿರುದ್ಧ ರಾಜ್ಯದ ಜನತೆ ಮಾತನಾಡಿದರೆ ತಪ್ಪಾ, ನಾವು ಪ್ರತಿಭಟಿಸಿದರೆ ತಪ್ಪಾ ಎಂದು ಗುಡುಗಿದರು.

ಲೋಕಸಭಾ ಯೋಜನೆ ಬಳಿಕ ನಮ್ಮ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ ಎಂದು ದೆಹಲಿಯ ಮೋದಿಯಿಂದ ಇಲ್ಲಿನ ಆರ್.ಅಶೋಕ್ ವರೆಗೂ ಸುಳ್ಳುಗಳ ಮೇಲೆ ಸುಳ್ಳು ಹೇಳಿದರು. ಇದುವರೆಗೂ ಗ್ಯಾರಂಟಿಗಳು ನಿಂತಿಲ್ಲ. ನಿಲ್ಲುವುದೂ ಇಲ್ಲ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ನಿಲ್ಲಲ್ಲ ಎಂದು ಘೋಷಿಸಿದರು.‌

ಮರಿಸ್ವಾಮಿ ಮನೇಲಿ ಇದೀನಿ

ನಾನು ಎರಡು ಬಾರಿ ಸಿಎಂ ಆಗಿ ಮೈಸೂರಲ್ಲಿ ಒಂದೂ ಮನೆ ಇಲ್ಲ. ಮರಿಸ್ವಾಮಿ ಮನೇಲಿ ಇದೀನಿ. ಕುವೆಂಪು ರಸ್ತೇಲಿ 3 ವರ್ಷದಿಂದ ಮನೆ ಕಟ್ಟುತ್ತಲೇ ಇದ್ದೀನಿ. ಇದುವರೆಗೂ ಪೂರ್ತಿ ಆಗಿಲ್ಲ. ನನಗೆ ವರ್ಚಸ್ಸು ಕೊಡುವವರು ನೀವು. ನಿಮ್ಮ ಎದುರಿಗೆ ಪ್ರಾಮಾಣಿಕವಾಗಿ ಇದ್ದೇನೆ ಎಂದರು.

ನೀವೇ ನನ್ನ ಮಾಲೀಕರು. ನೀವೇ ನನ್ನ ಯಜಮಾನರು. ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ. ಬಿಜೆಪಿ-ಜೆಡಿಎಸ್ ನಾಯಕರ ಹೊಟ್ಟೆಕಿಚ್ಚಿನಿಂದ ನನ್ನ ವರ್ಚಸ್ಸು ಕಡಿಮೆ ಆಗಲ್ಲ. ನನ್ನ ವರ್ಚಸ್ಸು ವರುಣಾ ಜನತೆ, ನನ್ನ ವರ್ಚಸ್ಸು ರಾಜ್ಯದ ಜನತೆ ಎಂದರು.

Read More
Next Story