
ಸಮೀರ್ ಎಂ ಡಿ
ಧರ್ಮಸ್ಥಳ ಪ್ರಕರಣ| ಯೂಟ್ಯೂಬರ್ ಸಮೀರ್ ಎಂ.ಡಿಗೆ ನಿರೀಕ್ಷಣಾ ಜಾಮೀನು ಮಂಜೂರು
ಸಮೀರ್ ಎಂ.ಡಿ. ಆಗಸ್ಟ್ 19 ರಂದು ಮಂಗಳೂರು ಜಿಲ್ಲಾ ಸೆಶನ್ಸ್ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಾಲಯವು ಇಂದು ಜಾಮೀನು ಮಂಜೂರು ಮಾಡಿದೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ಮಂಗಳೂರು ಜಿಲ್ಲಾ ನ್ಯಾಯಾಲಯ ಗುರುವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರಿಂದ ಸಮೀರ್ಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜು.12 ರಂದು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು. ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದರೂ ಸಮೀರ್ ಹಾಜರಾಗಿರಲಿಲ್ಲ. ಈ ನಿಟ್ಟಿನಲ್ಲಿ ಸಮೀರ್ ಎಂ.ಡಿ. ಬಂಧನಕ್ಕೆ ಪೊಲೀಸರು ಮುಂದಾಗಿದ್ದರು.
ಪೊಲೀಸರ ಬಂಧನ ಭೀತಿಯಿಂದ ಸಮೀರ್ ಎಂ.ಡಿ. ಆಗಸ್ಟ್ 19 ರಂದು ಮಂಗಳೂರು ಜಿಲ್ಲಾ ಸೆಶನ್ಸ್ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಗುರುವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಧರ್ಮಸ್ಥಳ ಕ್ಷೇತ್ರದ ಬಗ್ಗೆ ಯೂಟ್ಯೂಬ್ ಚಾನಲ್ನಲ್ಲಿ ಅಪಪ್ರಚಾರ ನಡೆಸಿದ ಆರೋಪದಡಿ ಸಮೀರ್ ಎಂ.ಡಿ. ವಿರುದ್ಧ ಪ್ರಕರಣ ದಾಖಲಾಗಿತ್ತು. ಧರ್ಮಸ್ಥಳ ಪೊಲೀಸ್ ಠಾಣೆ ಪೊಲೀಸರು ಯೂಟ್ಯೂಬರ್ ಸಮೀರ್ ಎಂ.ಡಿ.ಗಾಗಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಹುಡುಕಾಟ ನಡೆಸಿದ್ದರು.
ಸಮೀರ್ ಎಂ.ಡಿ. ಕೆಲ ತಿಂಗಳ ಹಿಂದೆ ಧರ್ಮಸ್ಥಳದ ಸೌಜನ್ಯ ನಾಪತ್ತೆ ಮತ್ತು ನಿಗೂಢ ಕೊಲೆ ಪ್ರಕರಣದ ಬಗ್ಗೆ ಯೂಟ್ಯೂಬ್ನಲ್ಲಿ ವಿಡಿಯೋ ಮಾಡಿದ್ದರು. ಆ ವಿಡಿಯೋ ಯೂಟ್ಯೂಬ್ನಲ್ಲಿ ದೊಡ್ಡ ಸಂಚಲನ ಮೂಡಿಸಿತ್ತು. ಆ ವಿಡಿಯೋ ಬಳಿಕ ರಾಜ್ಯದ ಜನರಿಗೆ ಸಮೀರ್ ಎಂ.ಡಿ. ಎಂಬ ಒಬ್ಬ ಯೂಟ್ಯೂಬರ್ ಎಂದು ಪರಿಚಯವಾಯಿತು. ಧರ್ಮಸ್ಥಳದ ಬಗ್ಗೆಯೂ ಸಮೀರ್ ವಿಡಿಯೋ ಮಾಡಿದ್ದ. ಪದೇ ಪದೇ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್ ಅವರನ್ನು ಭೇಟಿಯಾಗಿದ್ದ ಹಿನ್ನೆಲೆಯಲ್ಲಿ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದರು.