
Air India plane crash | ವಿಮಾನ ಅಫಘಾತದಲ್ಲಿ ಮೃತಪಟ್ಟ ಮಾಜಿ ಸಿಎಂ ವಿಜಯ್ ರೂಪಾನಿ ಸಂಬಂಧಿಕರ ಭೇಟಿಯಾದ ಮೋದಿ
ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತುಕೊಂಡು ಗುರುವಾರ ಮಧ್ಯಾಹ್ನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿತ್ತು.
ಅಹಮದಾಬಾದ್ನಲ್ಲಿ ಸಂಭವಿಸಿದ ಭೀಕರ ಏರ್ ಇಂಡಿಯಾ ವಿಮಾನ ಅಪಘಾತದ ಸ್ಥಳಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಶುಕ್ರವಾರ) ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಿದರು.
ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ, ಅಲ್ಲಿಂದ ಕಾರಿನಲ್ಲಿ ಅಪಘಾತ ಸಂಭವಿಸಿದ ಮೇಘನಿನಗರ ಪ್ರದೇಶಕ್ಕೆ ತೆರಳಿದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಪ್ರಧಾನಿಯವರೊಂದಿಗೆ ಇದ್ದರು.
ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತುಕೊಂಡು ಗುರುವಾರ ಮಧ್ಯಾಹ್ನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿತ್ತು. ಈ ದುರಂತದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ಕನಿಷ್ಠ 265 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
Live Updates
- 13 Jun 2025 11:37 AM IST
ಹತ್ತು ನಿಮಿಷಗಳ ಅಂತರದಲ್ಲಿ ಏರ್ ಇಂಡಿಯಾ ವಿಮಾನವನ್ನು ತಪ್ಪಿಸಿಕೊಂಡಿದ್ದ ಯುವತಿ
ಅಹಮದಾಬಾದ್ ವಿಮಾನ ನಿಲ್ದಾಣದ ರಸ್ತೆಯಲ್ಲಿ ಸಂಚಾರ ದಟ್ಟಣೆಯಿಂದಾಗಿ ಹತ್ತು ನಿಮಿಷಗಳ ಅಂತರದಲ್ಲಿ ಏರ್ ಇಂಡಿಯಾ ವಿಮಾನವನ್ನು ತಪ್ಪಿಸಿಕೊಂಡಿದ್ದ ಭೂಮಿ ಚೌಹಾಣ್ ಎಂಬ ಯುವತಿ ಮಾತನಾಡಿದ್ದು, "ನಾನು ಲಂಡನ್ಗೆ ತೆರಳಬೇಕಿತ್ತು. ಆದರೆ ಹತ್ತು ನಿಮಿಷ ತಡವಾಗಿ ವಿಮಾನ ನಿಲ್ದಾಣಕ್ಕೆ ಹೋಗಿದ್ದರಿಂದ ಅಧಿಕಾರಿಗಳು ನನ್ನನ್ನು ವಿಮಾನ ಹತ್ತಲು ಬಿಡಲಿಲ್ಲ. ಇದರಿಂದ ಬೇಸರವಾಗಿತ್ತು. ಆದರೆ ಕೆಲವೇ ನಿಮಿಷಗಳಲ್ಲಿ ವಿಮಾನ ಪತನವಾದ ಸುದ್ದಿ ಕೇಳಿ ಕೈ ಕಾಲುಗಳು ನಡುಗಲಾರಂಭಿಸಿದವು. ನನಗೆ ಏನು ಮಾಡಬೇಕೆಂದು ತಿಳಿಯದಾಗಿತ್ತು" ಎಂದಿದ್ದಾರೆ.
- 13 Jun 2025 11:24 AM IST
ಏರ್ ಇಂಡಿಯಾ ವಿಮಾನ ಸ್ಪೋಟಗೊಂಡ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್
ಅಹಮದಾಬಾದ್ನಲ್ಲಿ ನಡೆದ ವಿಮಾನ ಅಪಘಾತದಲ್ಲಿ 265 ಮಂದಿ ಮೃತಪಟ್ಟಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ. ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ವೈದ್ಯಕೀಯ ವಸತಿ ನಿಲಯಕ್ಕೆ ಅಪ್ಪಳಿಸಿ ಸ್ಫೋಟಗೊಂಡ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಮೊಹಮ್ಮದ್ ಸುಹೈಬ್ ರಜಾ ಎಂಬುವವರು ತಮ್ಮ ʼಎಕ್ಸ್ʼ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
- 13 Jun 2025 11:13 AM IST
ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ಪೊಲೀಸರೊಂದಿಗೆ ಪ್ರಧಾನಿ ಮೋದಿ ಸಭೆ
ವಿಮಾನ ದುರಂತ ನಡೆದ ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ನಿಲ್ದಾಣದಲ್ಲೇಯೇ ಅಧಿಕಾರಿಗಳ ಸಭೆ ನಡೆಸಿ ದುರಂತಕ್ಕೆ ಕಾರಣಗಳೇನು? ಅಪಘಾತ ನಡೆದ ನಂತರ ತೆಗೆದುಕೊಂಡ ತೀರ್ಮಾನಗಳ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ಪೊಲೀಸರಿಂದ ಮಾಹಿತಿ ಪಡೆದುಕೊಂಡರು.
- 13 Jun 2025 10:54 AM IST
ಸಾಮಾಜಿಕ ಜಾಲತಾಣ ಖಾತೆಗಳ ಪ್ರೊಫೈಲ್ಗಳನ್ನು ಕಪ್ಪು ಬಣ್ಣಕ್ಕೆ ಬದಲಿಸಿದ ಏರ್ ಇಂಡಿಯಾ
ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದ್ದು, ಕನಿಷ್ಠ 265 ಮಂದಿ ಮೃತಪಟ್ಟಿದ್ದಾರೆ. ಈ ಭೀಕರ ಘಟನೆ ಬೆನ್ನಲ್ಲೇ ಏರ್ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಾದ ಎಕ್ಸ್ ಖಾತೆ, ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಪ್ರೊಫೈಲ್ ಚಿತ್ರವನ್ನು ಕಪ್ಪು ಐಕಾನ್ಗೆ ಬದಲಾಯಿಸಿದೆ. ಹಾಗೂ ವಿಮಾನಯಾನ ಸಂಸ್ಥೆಯು ತನ್ನ ವೆಬ್ಸೈಟ್ನ ಮುಖಪುಟವನ್ನು ಕಪ್ಪು ಮತ್ತು ಬಿಳಿ ಬಣ್ಣಕ್ಕೆ ಬದಲಾಯಿಸಿದೆ.
- 13 Jun 2025 10:42 AM IST
ಆಸ್ಪತ್ರೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಅಹಮದಾಬಾದ್ನಲ್ಲಿ ಸಂಭವಿಸಿದ ಭೀಕರ ಏರ್ ಇಂಡಿಯಾ ವಿಮಾನ ಅಪಘಾತವಾದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ವೈದ್ಯಕೀಯ ಕಾಲೇಜಿನ ವಸತಿ ನಿಲಯದ ಮೇಲೆ ವಿಮಾನ ಸ್ಪೋಟಗೊಂಡ ಪರಿಣಾಮ 5 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದರು. ಅಪಘಾತದಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದ್ದು ಇದೀಗ ಪ್ರಧಾನಿ ನರೇಂದ್ರ ಮೋದಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.