
Caste Census: ಜಾತಿ ಗಣತಿ: ವಿಶೇಷ ಸಚಿವ ಸಂಪುಟ ಸಭೆ ಅಂತ್ಯ ; ಮೇ 2 ಕ್ಕೆ ಇನ್ನೊಂದು ವಿಶೇಷ ಸಂಪುಟ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಒಬಿಸಿ (ಇತರೆ ಹಿಂದುಳಿದ ವರ್ಗಗಳ) ಮೀಸಲಾತಿಯನ್ನು ಶೇ.32ರಿಂದ ಶೇ.51ಕ್ಕೆ ಏರಿಕೆ ಮಾಡುವ ಇರಾದೆಯನ್ನೂ ಹೊಂದಿದೆ ಎಂದು ಹೇಳಲಾಗುತ್ತಿದೆ. ಈ ವಿಚಾರವೂ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಬಹುದು.
ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿಯ ಕುರಿತು ಚರ್ಚಿಸಲು ಕರ್ನಾಟಕ ರಾಜ್ಯ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆ (ಏಪ್ರಿಲ್ 17ರಂದು) ಮೂರು ತಾಸುಗಳ ಕಾಲ (4 pm to 7 pm) ನಡೆದು, ಬಿಸಿಯೇರಿದ ಚರ್ಚೆಗಳ ಬಳಿಕ ಅಂತ್ಯಗೊಂಡಿದೆ. ಆದರೆ, ಯಾವುದೇ ನಿರ್ಧಾರ ಕೈಗೊಳ್ಳದೆ ಸಭೆಯನ್ನು ಮುಂದೂಡಲಾಗಿದೆ.
ಜಾತಿಗಣತಿ ವರದಿಯ ದತ್ತಾಂಶಗಳ ಬಗ್ಗೆ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯ ಆಕ್ಷೇಪ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ವರದಿ ಕುರಿತು ಚರ್ಚೆ ತೀವ್ರ ಕುತೂಹಲ ಮೂಡಿಸಿತ್ತು. ಸುಮಾರು ಮೂರು ಗಂಟೆಗಳ ಕಾಲ ನಡೆದ ಸಭೆಯಲ್ಲಿ ವಿವಿಧ ಸಮುದಾಯಗಳ ದತ್ತಾಂಶದ ಕುರಿತು ಸಚಿವರು ಅಭಿಪ್ರಾಯ ಮಂಡಿಸಿದರು. ಆದರೆ, ಎಲ್ಲ ಸಚಿವರು ಅಭಿಪ್ರಾಯ ಮಂಡನೆಗೆ ಸಮಯಾವಕಾಶ ಸಿಗದ ಹಿನ್ನೆಲೆಯಲ್ಲಿ ವಿಸ್ತೃತ ಚರ್ಚೆಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಡೆಸಲು ತೀರ್ಮಾನಿಸಲಾಯಿತು.
ದಲಿತರು, ಹಿಂದುಳಿದವರು, ಮುಸ್ಲಿಮರು ಸೇರಿದಂತೆ ಎಲ್ಲ ಜಾತಿಗಳ ಜನಸಂಖ್ಯೆ, ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲಾಗಿದೆ. ಸಭೆಯಲ್ಲಿ ವರದಿ ಕುರಿತು ಪರ ಹಾಗೂ ವಿರೋಧ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದು, ಹೈಕಮಾಂಡ್ ಗಮನಕ್ಕೆ ತಂದು ಆ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದ ಎಂದು ಮೂಲಗಳು ತಿಳಿಸಿವೆ.
ಕೃಷಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿ, ಸಂಪುಟ ಸಭೆಯಲ್ಲಿ ಎಲ್ಲ ಸಮುದಾಯಗಳ ಸಾಧಕ-ಬಾಧಕ ಕುರಿತು ಚರ್ಚೆ ನಡೆಸಲಾಗಿದೆ. ವಿಸ್ತೃತ ಚರ್ಚೆ ಅಗತ್ಯವಾಗಿರುವುದರಿಂದ ಮುಂದಿನ ಸಂಪುಟ ಸಭೆಗೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾತನಾಡಿ, ವರದಿಯ ಚರ್ಚೆ ಅಪೂರ್ಣವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರ ಅಭಿಪ್ರಾಯ ಮುಖ್ಯವಾಗಿರುತ್ತದೆ. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಸಭೆಯಲ್ಲಿ ಚರ್ಚೆ ಮುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಈಗಾಗಲೇ ವರದಿಯ ಪ್ರತಿ ಎಲ್ಲಾ ಸಚಿವರಿಗೆ ಲಭ್ಯವಾಗಿತ್ತು. ಅದರ ಆಧಾರದಲ್ಲಿ ಸಂಪುಟ ಸಭೆಯಲ್ಲಿ ಚರ್ಚಿಸಲು ಎಲ್ಲಾ ಸಚಿವರು ವಿಶೇಷ ಸಚಿವ ಸಂಪುಟ ಸಭೆಗೆ ಆಗಮಿಸಿದ್ದರು. ಮುಖ್ಯಮಂತ್ರಿ ಆರಂಭಿಕ ಮಾತುಗಳ ಬಳಿಕ ಸಚಿವರು ಒಬ್ಬೊಬ್ಬರಾಗಿ ತಮ್ಮ ಅಭಿಪ್ರಾಯ ಮಂಡಿಸಿದರು.
ವಿಶೇಷ ಸಂಪುಟ ಸಭೆಯಲ್ಲಿ ಎಲ್ಲ ಸಮುದಾಯಗಳ ಸಚಿವರ ಅಭಿಪ್ರಾಯಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಲಿಸಿದ್ದಾರೆ. ಬಳಿಕ ಯಾವುದೇ ನಿರ್ಧಾರಕ್ಕೆ ಬರದೆ, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿಲುವು ಪ್ರಕಟಿಸುವ ನಿರ್ಧಾರ ಕ ಗೊಳ್ಳಲಾಗಿದೆ.
ಜಾತಿಗಣತಿ ಅಧ್ಯಯನಕ್ಕಾಗಿ ಸಂಪುಟ ಉಪಸಮಿತಿ ರಚಿಸುವುದು; ಮೂರು ಇಲ್ಲವೇ ಆರು ತಿಂಗಳ ಕಾಲ ಅವಧಿಯೋಳಗೆ ಸಂಪುಟ ಉಪಸಮಿತಿಯ ವರದಿ ಪಡೆಯುವುದು; ಅಂಕಿ ಅಂಶಗಳ ಅಧ್ಯಯನಕ್ಕಾಗಿ ತಜ್ಞರ ಸಮಿತಿ ರಚಿಸುವುದು; ಜಾತಿಗಣತಿ ಚರ್ಚೆಯ ಬಗ್ಗೆ ವಿಶೇಷ ಅಧಿವೇಶನ ಕರೆಯುವುದು; ಮೂರು ದಿನಗಳ ಕಾಲ ವಿಶೇಷ ಅಧಿವೇಶನ ಕರೆಯುವುದು.. ಹೀಗೆ ಯಾವುದಾದರೂ ಒಂದು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಆ ಬಳಿಕ ಸಾರ್ವಜನಿಕ ಚರ್ಚೆಯ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದೂ ಹೇಳಲಾಗಿದೆ.
ಜಾತಿಗಣತಿ ಚರ್ಚೆಯ ಬಗ್ಗೆ ವಿಶೇಷ ಅಧಿವೇಶನ ಕರೆಯುವ ಬಗ್ಗೆ ಆದ್ಯತೆ ನೀಡಲಾಗಿದೆ ಎನ್ನಲಾಗಿದೆ. ಸಚಿವ ಸಂಪುಟದಲ್ಲಿ ಎಲ್ಲ ಸಮುದಾಯಗಳನ್ನು ಸಚಿವರು ಪ್ರತಿನಿಧಿಸುವುದಿಲ್ಲ. ವಿಧಾನ ಸಭೆ ವಿಶೇಷ ಅಧಿವೇಶನ ಕರೆದರೆ, ಅಲ್ಲಿ ಎಲ್ಲ ಶಾಸಕರ ಅಭಿಪ್ರಾಯಗಳನ್ನು ಆಲಿಸಿ, ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳುವ ಅವಕಾಶ ಇದೆ ಎನ್ನಲಾಗಿದೆ.
ಕುತೂಹಲ
ಈ ವರದಿಯು ರಾಜ್ಯದ ಜಾತಿಗಳ ಸಂಖ್ಯಾಬಲ, ಸಾಮಾಜಿಕ-ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಹತ್ವದ ಮಾಹಿತಿಯನ್ನು ಒಳಗೊಂಡಿರುವ ಹೊರತಾಗಿಯೂ ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳು ತಮ್ಮ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ ಆ ಸಮುಯಾಯಗಳಿಗೆ ಸೇರಿದ ಮಂತ್ರಿಗಳ ಮೇಲೆ ಒತ್ತಡ ತಂದಿದೆ. ಹೀಗಾಗಿ ಈ ಸಭೆಯ ಕುತೂಹಲ ಮೂಡಿಸಿದೆ.
ಸಮೀಕ್ಷೆಯ ವರದಿ ಜಾರಿಯಾದರೆ ರಾಜ್ಯದ ರಾಜಕೀಯ ಮತ್ತು ಸಾಮಾಜಿಕ ರಂಗದಲ್ಲಿ ದೊಡ್ಡ ಬದಲಾವಣೆಗಳಿಗೆ ಕಾರಣವಾಗಬಹುದು ಎಂದು ಹೇಳಲಾಗುತ್ತಿದೆ. ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಒಬಿಸಿ (ಇತರೆ ಹಿಂದುಳಿದ ವರ್ಗಗಳ) ಮೀಸಲಾತಿಯನ್ನು ಶೇ.32ರಿಂದ ಶೇ.51ಕ್ಕೆ ಏರಿಕೆ ಮಾಡುವ ಇರಾದೆಯನ್ನೂ ಹೊಂದಿದೆ ಎಂದು ಹೇಳಲಾಗುತ್ತಿದೆ. ಈ ವಿಚಾರವೂ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಬಹುದು.
ಏಪ್ರಿಲ್ 11ರಿಂದು ಜೋರು ಚರ್ಚೆ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಏಪ್ರಿಲ್ 11ರಂದು ಈ ಸಮೀಕ್ಷೆಯ ವರದಿಯನ್ನು ಸಂಪುಟಕ್ಕೆ ಸಲ್ಲಿಸಿತ್ತು. 2015ರಲ್ಲಿ ಎಚ್. ಕಾಂತರಾಜ್ ನೇತೃತ್ವದಲ್ಲಿ ನಡೆದ ಸಮೀಕ್ಷೆಯ ಆಧಾರದ ಮೇಲೆ ತಯಾರಾದ ಈ ವರದಿಯು ರಾಜ್ಯದ 1,821 ಜಾತಿಗಳನ್ನು ಗುರುತಿಸಿದ್ದು, ಒಕ್ಕಲಿಗ ಮತ್ತು ವೀರಶೈವ-ಲಿಂಗಾಯತ ಸಮುದಾಯಗಳ ಸಂಖ್ಯಾಬಲವು ಸಾಂಪ್ರದಾಯಿಕ ನಿರೀಕ್ಷೆಗಳಿಗಿಂತ ಕಡಿಮೆ ಇದೆ ಎಂದು ತೋರಿಸಿದೆ. ಒಕ್ಕಲಿಗರ ಜನಸಂಖ್ಯೆಯನ್ನು ಶೇ.12.2 ಮತ್ತು ಲಿಂಗಾಯತರ ಜನಸಂಖ್ಯೆಯನ್ನು ಶೇ.13.6 ಎಂದು ಅಂದಾಜಿಸಿದೆ. ಇದು ಸಾಮಾನ್ಯ ಗ್ರಹಿಕೆಯ ಶೇ.17 ಮತ್ತು ಶೇ.15ಕ್ಕಿಂತ ಕಡಿಮೆ ಎನಿಸಿದೆ. ಹೀಗಾಗಿ ಎರಡೂ ಸಮುದಾಯಗಳ ನಾಯಕರು ಸಮೀಕ್ಷೆಗೆ ಒಕ್ಕೊರಲ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಇಂದು ನಡೆಯುವ ಸಂಪುಟ ಸಭೆಯಲ್ಲಿ ಅವರ ಬೇಡಿಕೆಗಳು ಚರ್ಚೆಗೆ ಬರಲಿವೆ.
ಸಮುದಾಯಗಳಿಂದ ವಿರೋಧ
ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪ ಗೌಡ ಅವರು, ಒಕ್ಕಲಿಗರ ಜನಸಂಖ್ಯೆ ಸುಮಾರು ಒಂದು ಕೋಟಿಯಷ್ಟಿದೆ ಎಂದು ವಾದಿಸಿದ್ದಾರೆ, ವರದಿಯು ಇದಕ್ಕಿಂತ ಕಡಿಮೆ ಸಂಖ್ಯೆಯನ್ನು ತೋರಿಸಿದೆ. ಹೀಗಾಗಿ ವರದಿಯನ್ನು ಸ್ವೀಕರಿಸಿದರೆ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ಆಯೋಜಿಸುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಇದರ ಜೊತೆಗೆ, ಒಕ್ಕಲಿಗ ಸಮುದಾಯದ ಉಪ-ವರ್ಗವಾದ ಕುಂಚಿಟಿಗರನ್ನು ಪ್ರತ್ಯೇಕವಾಗಿ ಪಟ್ಟಿಮಾಡಿರುವುದು ವೊಕ್ಕಲಿಗ ನಾಯಕರಿಂದ ತೀವ್ರ ಟೀಕೆಗೆ ಗುರಿಯಾಗಿದೆ.
ಇದೇ ರೀತಿ, ಲಿಂಗಾಯತ ಮಹಾಸಭಾವು ವರದಿಯನ್ನು "ವೈಜ್ಞಾನಿಕವಲ್ಲ" ಎಂದು ಹೇಳಿದೆ. ಕಾಂಗ್ರೆಸ್ ಪಕ್ಷದ ಶಾಸಕರಾಗಿರುವ (ಚನ್ನಗಿರಿ) ಬಸವರಾಜ ಶಿವಗಂಗ ಅವರು ಲಿಂಗಾಯತ ಸಮುದಾಯದ ಏಳು ಸಚಿವರ ವಿರುದ್ಧ ತಮ್ಮ ಸಮುದಾಯದ ಹಿತಾಸಕ್ತಿಗಳನ್ನು ರಕ್ಷಿಸದಿರುವ ಆರೋಪ ಮಾಡಿ, ಅವರೆಲ್ಲರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ರಾಜಕೀಯ ಭಿನ್ನಾಭಿಪ್ರಾಯ
ವರದಿಯು ಕಾಂಗ್ರೆಸ್ನ ಒಳಗಿನ ಭಿನ್ನಾಭಿಪ್ರಾಯಗಳನ್ನು ಜಾಹೀರು ಮಾಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಕ್ಕಲಿಗ ಶಾಸಕರೊಂದಿಗೆ ಏಪ್ರಿಲ್ 15ರಂದು ರಾತ್ರಿ ಸಭೆ ನಡೆಸಿ, ಏಕಮತದಿಂದ ಸಂಪುಟದಲ್ಲಿ ತಮ್ಮ ಅಭಿಪ್ರಾಯವನ್ನು ಮಂಡಿಸುವ ತೀರ್ಮಾನ ಕೈಗೊಂಡಿದ್ದಾರೆ. ಸಭೆಯ ಬಳಿಕ ಅವರು, ಕಾಂಗ್ರೆಸ್ ಸರ್ಕಾರವು 12ನೇ ಶತಮಾನದ ಸಂತ ಬಸವಣ್ಣನವರ "ಸಮಾನ ಜೀವನ, ಸಮಾನ ಪಾಲು" ತತ್ವ ಅನುಸರಿಸುತ್ತದೆ ಎಂದು ಹೇಳಿಕೆ ನೀಡಿದ್ದಾರೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಈ ವರದಿಯನ್ನು "ದ್ವೇಷದ ಗಣತಿ" ಎಂದು ಕರೆದು, ಇದು ಸಮಾಜವನ್ನು ಒಡೆಯುವ ಉದ್ದೇಶವನ್ನು ಹೊಂದಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧಾರ್ಮಿಕ ಒಡಕಿನ ಗುರಿ ಎಂದು ಆರೋಪಿಸಿದ್ದಾರೆ.
ಸಿಎಂ ಭರವಸೆ ಏನು?
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯವಾಗದು ಎಂದಿರೆ. "ಇದು ಜಾತಿ ಗಣತಿಯಲ್ಲ, ಸಾಮಾಜಿಕ-ಆರ್ಥಿಕ ಸಮೀಕ್ಷೆ," ಎಂದು ಅವರು ಕಲಬುರಗಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ ಅವರು, ಸಚಿವರು ವರದಿಯನ್ನು ಅಧ್ಯಯನ ಮಾಡಿ, ಸಲಹೆಗಳೊಂದಿಗೆ ಸಭೆಗೆ ಬರಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ
ಸಂಪುಟ ಸಭೆಯಲ್ಲಿ ಏನಾಗಬಹುದು?
ಇಂದು ನಡೆಯುವ ಸಭೆಯು ವರದಿಯ ಜಾರಿಯ ಭವಿಷ್ಯ ನಿರ್ಧರಿಸಲಿದೆ. ಮೂಲಗಳ ಪ್ರಕಾರ, ಸರ್ಕಾರವು ಸಂಪುಟ ಉಪಸಮಿತಿ ಅಥವಾ ತಜ್ಞರ ಸಮಿತಿ ರಚಿಸಿ ವರದಿಯನ್ನು ಮತ್ತಷ್ಟು ಪರಿಶೀಲಿಸುವ ಸಾಧ್ಯತೆಯಿದೆ. ವರದಿಯನ್ನು ಸಾರ್ವಜನಿಕಗೊಳಿಸಿ, ಜನರಿಂದ ಸಲಹೆಗಳನ್ನು ಕೋರಲು ಮತ್ತು ತಪ್ಪುಗಳಿದ್ದರೆ ಸರಿಪಡಿಸಲು ಚಿಂತನೆ ನಡೆಸಬಹುದು.
Live Updates
- 17 April 2025 6:05 PM IST
ಒಕ್ಕಲಿಗ ಸಚಿವರಿಂದಲೂ ಅಸಮಾಧಾನ
ಒಕ್ಕಲಿಗ ಸಮುದಾಯದ ಸಚಿವರೂ ತಮ್ಮ ಸಮುದಾಯದಿಂದ ಜಾತಿಗಣತಿ ವರದಿ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.
"ಒಕ್ಕಲಿಗ ಸಂಘ ಹಾಗು ಸಮುದಾಯದಿಂದಲೂ ಅಸಮಾಧಾನ ಇದೆ; ವರದಿ ಜಾರಿಯಾದರೆ ಆಕ್ರೋಶ ಬುಗಿಲೇಳಲಿದೆ," ಎಂಬ ಅಭಿಪ್ರಾಯ ಮಂಡಿಸಿದ್ದಾರೆ ಎಂದು ಹೇಳಲಾಗಿದೆ.
- 17 April 2025 6:03 PM IST
ಲಿಂಗಾಯತ ಮುಖಂಡರಿಂದ ವರದಿ ಜಾರಿಗೆ ಆಕ್ಷೇಪ
ಸಚಿವ ಸಂಪುಟದ ಸಭೆಯಲ್ಲಿ ಸಚಿವರು ಅಭಿಪ್ರಾಯ ಮಂಡನೆಗೆ ಮುಂದಾಗಿದ್ದಾರೆ. ಒಕ್ಕಲಿಗ ಹಾಗೂ ಲಿಂಗಾಯತ ಸಚಿವರು ಜಾತಿಗಣತಿ ವರದಿಯನ್ನು ಆಕ್ಷೇಪಿಸಿದ್ದಾರೆ ಎನ್ನಲಾಗಿದೆ.
ಲಿಂಗಾಯತ ಸಚಿವರಾದ ಎಂಬಿಪಾಟೀಲ್, ಈಶ್ವರ್ ಖಂಡ್ರೆ ಮೊದಲು ಅಭಿಪ್ರಾಯ ಮಂಡನೆ ಮಾಡಿದ್ದಾರೆ. " ವೀರಶೈವ ಲಿಂಗಾಯತ ಸಮುದಾಯ ಜನಸಂಖ್ಯೆ ಕಡಿಮೆ ತೋರಿಸಿದ್ದಾರೆ ಇದು ಜನಾಂಗದಲ್ಲಿ ಅಸಮಾಧಾನ ಇದೆ. ಸಾಕಷ್ಟು ಕಡೆ ಸಮೀಕ್ಷೆಗೇ ಹೋಗಿಲ್ಲ. ಹಾಗಾಗಿ ಈ ವರದಿಯ ಜಾರಿ ಮಾಡಬಾರದು," ಎಂದು ಅಭಿಪ್ರಾಯಪಟ್ಟಿದ್ದಾರೆ ಎಂದು ಹೇಳಲಾಗಿದೆ.
- 17 April 2025 6:01 PM IST
ಸಚಿವರಿಗೆ ಅಭಿಪ್ರಾಯ ಮಂಡಿಸಲು ಸೂಚಿಸಿದ ಸಿಎಂ ಸಿದ್ದರಾಮಯ್ಯ
ಸಂಪುಟ ಸಭೆ ಆರಂಭದಲ್ಲೆ ಸಿಎಂ ಸಿದ್ದರಾಮಯ್ಯ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾಮಾಜಿಕ ಹಾಗು ಶೈಕ್ಷಣಿಕ ವರದಿ ಮಂಡನೆ ಬಗ್ಗೆ ನಿಮ್ಮ ನಿಮ್ಮ ಅಭಿಪ್ರಾಯ ತಿಳಿಸಿ ಎಂದು ಸಚಿವರಿಗೆ ಸೂಚಿಸಿದ್ದಾರೆ.
ಈ ಸಮೀಕ್ಷಾ ವರದಿಯಿಂದ ಯಾವ ವರ್ಗಕ್ಕೂ ಅನ್ಯಾಯವಾಗಿಲ್ಲ, ಏನಾದರೂ ಅನ್ಯಾಯ ಆಗಿದ್ದರೆ ಸರಿಪಡಿಸೋಣ ಎಂದು ಹೇಳಿದ ಅವರು, "ರಾಹುಲ್ ಗಾಂಧಿ ಹಾಗು ಪಕ್ಷದ ಆಶಯದಂತೆ ಸಾಮಾಜಿಕ ಹಾಗು ಶೈಕ್ಷಣಿಕ ವರದಿ ಮಂಡಿಸಲಾಗಿದೆ. ಎಲ್ಲಾ ಸಚಿವರು ನಿಮ್ಮ ಅಭಿಪ್ರಾಯವನ್ನು ಮುಕ್ತವಾಗಿ ಹಂಚಿಕೊಳ್ಳಿ" ಎಂದು ಹೇಳಿದ್ದಾರೆ.
- 17 April 2025 4:18 PM IST
ಜಾತಿ ಗಣತಿ: ವಿಶೇಷ ಸಚಿವ ಸಂಪುಟ ಸಭೆ ಆರಂಭ
ಜಾತಿ ಗಣತಿ ಸಂಬಂಧ ವಿಶೇಷ ಸಚಿವ ಸಂಪುಟ ಸಭೆ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲಾ ಸಚಿವರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಮುಖ್ಯಮಂತ್ರಿ ಆರಂಭಿಕ ಮಾತುಗಳ ಬಳಿಕ ವಿವರವಾದ ಚರ್ಚೆ ಆರಂಭವಾಗಲಿದೆ. ಒಬ್ಬೊಬ್ಬ ಸಚಿವರು ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ.
- 17 April 2025 3:48 PM IST
ಸಂಪುಟ ಸಭೆ ಆರಂಭಕ್ಕೆ ಕ್ಷಣಗಣನೆ
ಸಚಿವ ಸಂಪುಟ ಸಭೆಗೆ ಒಬ್ಬೊಬ್ಬರಾಗಿ ಸಚಿವರು ಆಗಮಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೆಲವೇ ಕ್ಷಣಗಳಲ್ಲಿ ಸಭೆಗೆ ಆಗಮಿಸಲಿದ್ದಾರೆ. ಈಗಾಗಲೇ ಸಮೀಕ್ಷೆ ವರದಿ ಪ್ರತಿ ಎಲ್ಲಾ ಸಚಿವರಿಗೆ ಲಭ್ಯವಾಗಿದ್ದರಿಂದ, ಎಲ್ಲರೂ ಆ ಬಗ್ಗೆ ಚರ್ಚಿಸಲು ಟಿಪ್ಪಣಿಗಳನ್ನು ಸಿದ್ಧಪಡಿಸಿ ಸಭೆಗೆ ಆಗಮಿಸಿದ್ದಾರೆ. ಸಭೆಯಲ್ಲಿ ಪ್ರಮುಖವಾಗಿ ಲಿಂಗಾಯತ, ಒಕ್ಕಲಿಗ ಸಚಿವರ ಅಭಿಪ್ರಾಯ ಏನೆಂಬುದೇ ಎಲ್ಲರ ಕುತೂಹಲ ಕೆರಳಿಸಿದೆ.
- 17 April 2025 2:14 PM IST
ವರದಿ ಅಧ್ಯಯನಕ್ಕೆ ಇನ್ನಷ್ಟು ಸಮಯ: ಮುಖ್ಯಮಂತ್ರಿ ಸಲಹೆಗಾರ ಬಸವರಾಜ ರಾಯರೆಡ್ಡಿ
ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿ ಕುರಿತಂತೆ ಇಂದು (ಗುರುವಾರ) ನಡೆಯುವ ವಿಶೇಷ ಸಂಪುಟ ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ವರದಿ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಆತುರಪಡುತ್ತಿಲ್ಲ. ಬದಲಿಗೆ ವರದಿ ಕುರಿತು ಅಧ್ಯಯನಕ್ಕೆ ಇನ್ನಷ್ಟು ಸಮಯ ತೆಗೆದುಕೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.
ಜಾತಿಗಣತಿ ವರದಿ ಮಂಡನೆ ಬಳಿಕ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆದಿದ್ದ ಒಕ್ಕಲಿಗ ಸಮುದಾಯದ ಸಭೆಯಲ್ಲಿ ವರದಿಗೆ ವಿರೋಧ ವ್ಯಕ್ತವಾಗಿದೆ. ವೀರಶೈವ-ಲಿಂಗಾಯತರು ಹಾಗೂ ಬ್ರಾಹ್ಮಣರ ಬೆಂಬಲ ಪಡೆದು ರಾಜ್ಯಾದ್ಯಂತ ಆಂದೋಲನ ರೂಪಿಸುವುದಾಗಿ ಒಕ್ಕಲಿಗರ ಸಂಘ ಎಚ್ಚರಿಸಿದೆ. ಹೀಗಿರುವಾಗ ಸರ್ಕಾರಕ್ಕೆ ವರದಿಯ ಕೂಲಂಕಷ ಅಧ್ಯಯನ ನಡೆಸುವುದು ಅನಿವಾರ್ಯವಾಗಿದೆ. ಈ ವಿಚಾರದಲ್ಲಿ ವಿಸ್ತೃತ ಚರ್ಚೆ ನಡೆಸಿ, ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
- 17 April 2025 2:10 PM IST
ನಿರ್ಧಾರ ಸಿದ್ದರಾಮಯ್ಯ ಅವರ ಸಂಪುಟಕ್ಕೆ ಬಿಟ್ಟಿದ್ದು: ಮಲ್ಲಿಕಾರ್ಜುನ ಖರ್ಗೆ
ರಾಜ್ಯ ಸರ್ಕಾರ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಹೇಳಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರು ವರದಿ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ತಾನು ಇನ್ನೂ ವರದಿಯನ್ನು ನೋಡಿಲ್ಲ. ಇದು ರಾಜ್ಯ ಸರ್ಕಾರಕ್ಕೆ ಬಿಟ್ಟದ್ದು, ಪ್ರತಿಯೊಂದು ರಾಜ್ಯವು ತನ್ನದೇ ಆದ ಕೆಲಸವನ್ನು ಮಾಡುತ್ತದೆ. ಇದನ್ನು ಕೇಂದ್ರ ಸರ್ಕಾರ ಮಾಡಿಲ್ಲ. ರಾಜ್ಯ ಸರ್ಕಾರ ಸಂಪುಟದಲ್ಲಿ ಚರ್ಚಿಸಿ ನಿರ್ಧರಿಸುತ್ತದೆ. ನಾನು ವರದಿಯನ್ನು ನೋಡಿಲ್ಲ. ಈ ವಿಷಯವನ್ನು ರಾಜ್ಯ ಸರ್ಕಾರಕ್ಕೆ ಬಿಡಲಾಗಿದೆ ಎಂದು ಅವರು ತಿಳಿಸಿದರು.
ವರದಿಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಕೇಳಿದ ಪ್ರಶ್ನಗೆ ಉತ್ತರಿಸಿದ ಅವರು, ವಿರೋಧ ಇರಬಹುದು. ನಾನು ನನ್ನ ಅಭಿಪ್ರಾಯವನ್ನು ಹಂಚಿಕೊಂಡಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸಚಿವ ಸಂಪುಟದ ವಿಶೇಷ ಸಭೆ ಗುರುವಾರ ವಿವಾದಾತ್ಮಕ 'ಜಾತಿ ಜನಗಣತಿ'ಯ ಬಗ್ಗೆ ಚರ್ಚಿಸಲಿದೆ' ಎಂದು ಹೇಳಿದರು.
ವಿವಿಧ ಸಮುದಾಯಗಳು, ವಿಶೇಷವಾಗಿ ಕರ್ನಾಟಕದ ಎರಡು ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ವೀರಶೈವ-ಲಿಂಗಾಯತರು ಈ ವರದಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನು ʼಅವೈಜ್ಞಾನಿಕʼ ಎಂದು ಕರೆದಿರುವ ಅವರು ಈ ಹೊಸ ಸಮೀಕ್ಷೆಯನ್ನು ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
- 17 April 2025 1:34 PM IST
ಜಾತಿ ಗಣತಿ ಮಾಹಿತಿ ಸೋರಿಕೆ ಮಾಡಿದ ಕಾಣದ ಕೈ ಯಾವುದು? ಕುಮಾರಸ್ವಾಮಿ ಪ್ರಶ್ನೆ
ಜಾತಿ ಗಣತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನೇರವಾಗಿ ಆರೋಪ ಮಾಡಿರುವ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಅನುಮಾನ ನಿಜವಾಯಿತು! ಎಂದು ಹೇಳಿಕೊಂಡಿದ್ದಾರೆ.
"ಮುಖ್ಯಮಂತ್ರಿ ಮಹೋದಯರ ಪ್ರಕಾರ ಅದು ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ! ಶ್ರೀ ಸಿದ್ದರಾಮಯ್ಯ ಈಗ ಉಲ್ಟಾ ಹೊಡೆದಿದ್ದಾರೆ! 'ಅದು ಜಾತಿ ಸಮೀಕ್ಷೆ ಅಲ್ಲ.. ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ' ಎಂದು ಹೊಸ ಪೀಪಿ ಊದುತ್ತಿದ್ದಾರೆ," ಎಂದು ಟೀಕಿಸಿದ್ದಾರೆ.
"ಹಾಗಾದರೆ ಹಾದಿ ಬೀದಿಯಲ್ಲಿ ತೇಲಾಡುತ್ತಿರುವ, ಬಿದ್ದೂಬಿದ್ದು ಹೊರಳಾಡುತ್ತಿರುವ ಅಂಕಿ ಸಂಖ್ಯೆಗಳು ಏನು? ಸೋರಿಕೆಯಾಗಿರುವ ದತ್ತಾಂಶ ಮತ್ತು ಸಿಎಂ ಅವರು ಹೇಳಿದ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ದತ್ತಾಂಶವು ಎರಡೂ ಒಂದೇನಾ? ಅಥವಾ ಅಲ್ಲವಾ? ವರದಿ ಬಹಿರಂಗಕ್ಕೆ ಮೊದಲೇ ವ್ಯವಸ್ಥಿತವಾಗಿ ಸೋರಿಕೆ ಮಾಡಿದ್ದು ಯಾರು? ಅದರ ಹಿಂದಿರುವ ಕಳ್ಳ ಕೈ ಯಾವುದು? ಬೀದಿಪಾಲಾದ ದತ್ತಾಂಶ ಇಟ್ಟುಕೊಂಡು ಏನು ಮಾಡುತ್ತೀರಿ?," ಎಂದು ಪ್ರಶ್ನಿಸಿದ್ದಾರೆ.
ಸಿಎಂ ಸಾಹೇಬರೇ.. ಸೋರಿಕೆ ಬಗ್ಗೆ ತಪ್ಪದೇ ತನಿಖೆ ಮಾಡಿಸಿ. ಅದು ಆಯೋಗದಿಂದ ಸೋರಿಕೆ ಆಯಿತಾ? ಅಥವಾ ಸಂಪುಟದಲ್ಲಿ ಸಚಿವರ ಕೈ (!?) ಸೇರಿದ ಮೇಲೆ ಸೋರಿಕೆ ಆಯಿತಾ? ಅಥವಾ ನಿಮ್ಮ ಗ್ಯಾಂಗ್ ಕೈ ಚಳಕವಾ? ತನಿಖೆ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೀರಾ? ನೀವೇ ಹೇಳಬೇಕು. ಸೋರಿಕೆಗೆ ನಿಮ್ಮ ಸರಕಾರವೇ ಹೊಣೆ, ಸಂಶಯವೇ ಇಲ್ಲ. ಯಾವುದೇ ಕಾರಣಕ್ಕೂ ಸೋರಿಕೆಯಾದ ಈ ವರದಿಯನ್ನು ಸಂಪುಟದಲ್ಲಿ ಮಂಡಿಸಲೇಬಾರದು. ಮಂಡಿಸಿ ಸಂಪುಟದ ಪಾವಿತ್ರ್ಯತೆ ಹಾಳು ಮಾಡಬಾರದು ಎಂದು ಕುಮಾರಸ್ವಾಮಿ ಖಡಕ್ ಆಗಿ ಹೇಳಿದ್ದಾರೆ.
"ನೆಮ್ಮದಿಯಾಗಿದ್ದ ರಾಜ್ಯಕ್ಕೆ ಬೆಂಕಿ ಹಾಕಿದ್ದೀರಿ, ಜಾತಿಗಳ ಮಧ್ಯೆ ವಿಷಬೀಜ ಬಿತ್ತಿದ್ದೀರಿ. ನಿಮ್ಮ ದುರುದ್ದೇಶ, ದುಷ್ಟತನದ ಪರಾಕಾಷ್ಠೆ ಇದು. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಕೊಳ್ಳಿ ಇಟ್ಟ ಪಾಪ ಸುಮ್ಮನೆ ಬಿಡುವುದಿಲ್ಲ, ಎಂದು ಟೀಕಿಸಿದ್ದಾರೆ.
- 17 April 2025 1:15 PM IST
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ: ಸಂಜೆ ಕ್ಯಾಬಿನೆಟ್ ಸಭೆ ಇದೆ, ಅಲ್ಲಿ ಚರ್ಚೆ ಮಾಡುತ್ತೇವೆ, ಸಚಿವರು ಅಭಿಪ್ರಾಯ ಹೇಳ್ತಾರೆ ಎಂದವರು ಹೇಳಿದ್ದಾರೆ. "ಲಿಂಗಾಯತ ಸಚಿವರು ರಾಜೀನಾಮೆ ನೀಡಿ ಎಂಬ ಒತ್ತಾಯ ವಿಚಾರದ ಬಗ್ಗೆ ಮಾತನಾಡುವುದಿಲ್ಲ. ಸಂಜೆ ಸಂಪುಟಸಭೆಯಲ್ಲಿ ಚರ್ಚೆ ಮಾಡುತ್ತೇವೆ,ʼ ಎಂದು ಸ್ಪಷ್ಟಪಡಿಸಿದ್ದಾರೆ.
- 17 April 2025 1:12 PM IST
ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವೆ ಶೋಭಾ ಪತ್ರ; ಜಾತಿ ಗಣತಿ ಹಿಂಪಡೆಯಲು ಆಗ್ರಹ
ಜಾತಿಗಣತಿ ವರದಿಯನ್ನು ಹಿಂಪಡೆಯಬೇಕೆಂದು ಕೇಂದ್ರ ಸಚಿವೆ ಹಾಗೂ ಒಕ್ಕಲಿಗ ನಾಯಕರಾದ ಶೋಭಾ ಕರಂದ್ಲಾಜೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಪ್ರಸ್ತುತ ಜಾತಿ ಗಣತಿ ವರದಿಯನ್ನು ತಿರಸ್ಕರಿಸಬೇಕು, ಆಧಾರ್-ಸಂಯೋಜಿತ ಪರಿಶೀಲನೆ ಮತ್ತು ಪ್ರತಿಯೊಬ್ಬ ವ್ಯಕ್ತಿಯ ಸಮ್ಮತಿಯೊಂದಿಗೆ ಹೊಸ, ವೈಜ್ಞಾನಿಕ ಮತ್ತು ನಿಷ್ಪಕ್ಷಪಾತ ಸಮೀಕ್ಷೆಯನ್ನು ನಡೆಸಬೇಕು. ರಾಜ್ಯ ಸರ್ಕಾರದ ಇರುವ ಡೇಟಾಬೇಸ್ಗಳಿಂದ ಡೇಟಾವನ್ನು ಪರಸ್ಪರ ಪರಿಶೀಲನೆಗೆ ಬಳಸಿ, ನಿಖರ, ನಿಷ್ಪಕ್ಷ ಮತ್ತು ಕರ್ನಾಟಕದ ನಿಜವಾದ ಸಾಮಾಜಿಕ ರಚನೆಯನ್ನು ಪ್ರತಿಬಿಂಬಿಸುವ ಡೇಟಾಸೆಟ್ ಖಾತ್ರಿಪಡಿಸಬೇಕು ಎಂದವರು ಒತ್ತಾಯಿಸಿದ್ದಾರೆ.
ಕಾಂತರಾಜು ಆಯೋಗದ ಮೇಲ್ವಿಚಾರಣೆಯಲ್ಲಿ ತಯಾರಾದ ಈ ವರದಿಯು ಮೂಲಭೂತ ದೋಷಗಳನ್ನು ಹೊಂದಿದ್ದು, ರಾಜ್ಯದ ಜನಸಂಖ್ಯಾಶಾಸ್ತ್ರೀಯ ವಾಸ್ತವತೆಯನ್ನು ಪ್ರತಿಬಿಂಬಿಸುವಲ್ಲಿ ವಿಫಲವಾಗಿದೆ. ಈ ಸಮೀಕ್ಷೆಯನ್ನು ಕೇವಲ 50 ದಿನಗಳಲ್ಲಿ (ಏಪ್ರಿಲ್ 11, 2015 ರಿಂದ ಮೇ 30, 2015) 5.9 ಕೋಟಿ ಜನಸಂಖ್ಯೆಗೆ ನಡೆಸಲಾಗಿದೆ, ಇದು ಪ್ರಕ್ರಿಯೆಯ ವಿಶ್ವಾಸಾರ್ಹತೆ ಮತ್ತು ಸಂಪೂರ್ಣತೆಯ ಬಗ್ಗೆ ಸಂದೇಹವನ್ನು ಹುಟ್ಟುಹಾಕುತ್ತದೆ ಎಂದವರು ವ್ಯಾಖ್ಯಾನಿಸಿದ್ದಾರೆ.