
Five State Election| ಕೇರಳ, ಅಸ್ಸಾಂ, ಪುದುಚೇರಿ ಚುನಾವಣೆಗೆ ಸಿಎಂ, ಡಿಸಿಎಂ ತಾರಾ ಪ್ರಚಾರಕರು
ಕೇರಳ ವಿಧಾನಸಭೆ ಚುನಾವಣೆ ಪ್ರಚಾರದ ಅಂಗಳದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್ ಹಾಗೂ ಜಮೀರ್ ಅಹಮದ್ ಖಾನ್ ತಾರಾ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.
ದಕ್ಷಿಣ ಭಾರತದಲ್ಲಿ ಪಂಚರಾಜ್ಯ ಚುನಾವಣೆಯ ಅಬ್ಬರ ಜೋರಾಗಿದೆ. ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕಾಂಗ್ರೆಸ್ ಪಕ್ಷವು ಚುನಾವಣೆಗೆ ತನ್ನ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಪ್ರಭಾವಿ ನಾಯಕರ ದಂಡೇ ಇದೆ.
ಕೇರಳ ವಿಧಾನಸಭೆ ಚುನಾವಣೆ ಪ್ರಚಾರದ ಅಂಗಳದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್ ಹಾಗೂ ಜಮೀರ್ ಅಹಮದ್ ಖಾನ್ ತಾರಾ ಪ್ರಚಾರಕರ ಪಟ್ಟಿಯಲ್ಲಿದ್ದಾರೆ. ಕೇರಳದಲ್ಲಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ನಡೆಸಲು ಒಟ್ಟು 40 ಮಂದಿ ತಾರಾ ಪ್ರಚಾರಕರ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಪ್ರಚಾರಕರ ಪಟ್ಟಿಯಲ್ಲಿದ್ದಾರೆ. ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲೂ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ತಾರಾ ಪ್ರಚಾರಕರ ಪಟ್ಟಿಯಲ್ಲಿದ್ದಾರೆ. ಅಸ್ಸಾಂ ಚುನಾವಣೆ ಉಸ್ತುವಾರಿಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ವಹಿಸಲಾಗಿದೆ.
ಅಸ್ಸಾಂನಲ್ಲಿ ಅಧಿಕಾರ ಹಿಡಿಯಲು ಈಗಾಗಲೇ ಅಬ್ಬರದ ಪ್ರಚಾರ ಆರಂಭಿಸಲಾಗಿದೆ. ಕರ್ನಾಟಕದ ನಾಯಕರ ಜತೆಗೆ ಛತ್ತೀಸ್ಘಡದ ಮಾಜಿ ಸಿಎಂ ಭೂಪೇಶ್ ಬಘೇಲ್, ರಾಜಸ್ಥಾನದ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಕೂಡ ಪ್ರಚಾರಕರಾಗಿ ಭಾಗಿಯಾಗಲಿದ್ದಾರೆ.
ಪುದುಚೇರಿಯಲ್ಲಿ ಕನ್ನಡಿಗರ ದರ್ಬಾರ್
ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಕಾಂಗ್ರೆಸ್ ಗೆಲುವಿಗಾಗಿ ಕರ್ನಾಟಕದ ನಾಯಕರ ದಂಡನ್ನೇ ಪ್ರಚಾರಕರ ಪಟ್ಟಿಯಲ್ಲಿ ಸೇರಿಸಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಜೊತೆಗೆ ಸಚಿವ ದಿನೇಶ್ ಗುಂಡೂರಾವ್, ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್, ಶಾಸಕಿ ಅಂಜಲಿ ನಿಂಬಾಳ್ಕರ್ ಮತ್ತು ನಾಯಕರಾದ ಸೂರಜ್ ಹೆಗ್ಡೆ, ನಿವೇದಿತ್ ಆಳ್ವಾ ಅವರು ಪ್ರಚಾರದ ಸಾರಥ್ಯ ವಹಿಸಲಿದ್ದಾರೆ. ಮೂರೂ ರಾಜ್ಯಗಳಲ್ಲೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಮೊದಲ ಮೂರು ಸ್ಥಾನಗಳಲ್ಲಿ ಇದ್ದಾರೆ.

