ಕೋಲ್ಕತ್ತಾದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ ವಿರುದ್ಧ ಗೋ ಬ್ಯಾಕ್ ಘೋಷಣೆ
x
ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್

ಕೋಲ್ಕತ್ತಾದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ ವಿರುದ್ಧ 'ಗೋ ಬ್ಯಾಕ್' ಘೋಷಣೆ

CEC Gyanesh Kumar| ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ 2026ರ ಸಿದ್ಧತೆ ಪರಿಶೀಲಿಸಲು ಬಂದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ಗೆ ಕಾಳಿಘಾಟ್ ದೇವಸ್ಥಾನದ ಬಳಿ ಪ್ರತಿಭಟನೆಯ ಬಿಸಿ ತಟ್ಟಿದೆ.


Click the Play button to hear this message in audio format

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಲು ಆಗಮಿಸಿರುವ ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿದೆ. ಸೋಮವಾರ ಬೆಳಿಗ್ಗೆ ದಕ್ಷಿಣ ಕೋಲ್ಕತ್ತಾದ ಪ್ರಸಿದ್ಧ ಕಾಳಿಘಾಟ್ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಅವರಿಗೆ 'ಗೋ ಬ್ಯಾಕ್' ಘೋಷಣೆ ಕೂಗಿ, ಕಪ್ಪು ಬಾವುಟ ಪ್ರದರ್ಶಿಸಲಾಯಿತು.

ಘಟನೆಯ ವಿವರ

ಸೋಮವಾರ ಬೆಳಿಗ್ಗೆ ಜ್ಞಾನೇಶ್ ಕುಮಾರ್ ಅವರು ಕಾಳಿಘಾಟ್ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಪ್ರತಿಭಟನಾಕಾರರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದು, ಸಿಇಸಿ ದೇವಸ್ಥಾನದೊಳಗೆ ಹೋಗಲು ದಾರಿ ಮಾಡಿಕೊಟ್ಟರು.

ಇದಕ್ಕೂ ಮುನ್ನ ಭಾನುವಾರ ರಾತ್ರಿ ಅವರು ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗಲೂ ತೃಣಮೂಲ ಕಾಂಗ್ರೆಸ್ (TMC) ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸಿದ್ದರು. ಕೈಖಾಲಿ ಪ್ರದೇಶದಲ್ಲಿ ವಿಐಪಿ ರಸ್ತೆಯ ಮೂಲಕ ಅವರ ಬೆಂಗಾವಲು ವಾಹನ ಸಾಗುತ್ತಿದ್ದಾಗ ಕಪ್ಪು ಬಾವುಟ ಪ್ರದರ್ಶಿಸಲಾಯಿತು. ಎಡಪಕ್ಷಗಳ ಕಾರ್ಯಕರ್ತರು ಕೂಡ ವಿಮಾನ ನಿಲ್ದಾಣದ ಹೊರಗೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

ಚುನಾವಣಾ ಆಯೋಗದ ಭೇಟಿಯ ಉದ್ದೇಶ

ಮೂರು ದಿನಗಳ ಕಾಲ ರಾಜ್ಯ ಪ್ರವಾಸದಲ್ಲಿರುವ ಮುಖ್ಯ ಚುನಾವಣಾ ಆಯುಕ್ತರ ತಂಡದಲ್ಲಿ ಚುನಾವಣಾ ಆಯುಕ್ತರಾದ ಎಸ್.ಎಸ್. ಸಂಧು ಮತ್ತು ವಿವೇಕ್ ಜೋಶಿ ಕೂಡ ಇದ್ದಾರೆ. ಹೈವೋಲ್ಟೇಜ್ ವಿಧಾನಸಭಾ ಚುನಾವಣೆಯ ಪೂರ್ವಸಿದ್ಧತೆಗಳನ್ನು ಈ ತಂಡ ಪರಿಶೀಲಿಸಲಿದೆ.

ಮುಖ್ಯ ಚುನಾವಣಾ ಆಯುಕ್ತರ ಇಂದಿನ ಕಾರ್ಯಸೂಚಿಯಂತೆ, ಅವರು ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ಪ್ರಾದೇಶಿಕ ರಾಜಕೀಯ ಪಕ್ಷಗಳ ನಾಯಕರನ್ನು ಭೇಟಿ ಮಾಡಿ ಮುಂಬರುವ ಚುನಾವಣೆಯ ಕುರಿತಾದ ಅವರ ಅಹವಾಲು ಹಾಗೂ ಸಲಹೆಗಳನ್ನು ಆಲಿಸಲಿದ್ದಾರೆ; ಇದರ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ನೋಡಲ್ ಅಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಆಡಳಿತಾತ್ಮಕ ಅಧಿಕಾರಿಗಳೊಂದಿಗೆ ಕಾನೂನು ಸುವ್ಯವಸ್ಥೆಯ ಕುರಿತು ಮಹತ್ವದ ಸಮಾಲೋಚನೆ ನಡೆಸಲಿದ್ದು, ಚುನಾವಣಾ ಸಮಯದಲ್ಲಿ ಭದ್ರತಾ ಪಡೆಗಳ ನಿಯೋಜನೆ ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯದ ಕುರಿತು ಸಮಗ್ರ ಭದ್ರತಾ ಪರಿಶೀಲನಾ ಸಭೆಯನ್ನು ನಡೆಸಲಿದ್ದಾರೆ.

ಮಂಗಳವಾರ ಅಂತಿಮ ದಿನದಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಅವರೊಂದಿಗೆ ಸಭೆ ನಡೆಸಿ, ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ನಂತರ ದೆಹಲಿಗೆ ಮರಳಲಿದ್ದಾರೆ. ಚುನಾವಣಾ ಆಯೋಗದ ಈ ಭೇಟಿಯ ಹಿನ್ನೆಲೆಯಲ್ಲಿ ಕೋಲ್ಕತ್ತಾದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Read More
Next Story