
ಭಾರತ ಚುನಾವಣಾ ಆಯೋಗ
5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: ಇಂದು ಸಂಜೆ 4ಕ್ಕೆ ದಿನಾಂಕ ಪ್ರಕಟ
ತೀವ್ರ ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗವು (ECI) ಇಂದು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಗಳಿವೆ.
ದೇಶಾದ್ಯಂತ ತೀವ್ರ ನಿರೀಕ್ಷೆ ಹುಟ್ಟುಹಾಕಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ (Assembly Elections 2026) ಕ್ಷಣಗಣನೆ ಶುರುವಾಗಿದೆ. ಭಾರತೀಯ ಚುನಾವಣಾ ಆಯೋಗವು ಇಂದು ಸಂಜೆ 4 ಗಂಟೆಗೆ ದೆಹಲಿಯಲ್ಲಿ ಕರೆಯಲಾಗಿರುವ ಸುದ್ದಿಗೋಷ್ಠಿಯಲ್ಲಿ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಿದೆ.
ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಾದ ತಮಿಳುನಾಡು ಮತ್ತು ಕೇರಳ, ಈಶಾನ್ಯ ಭಾರತದ ಅಸ್ಸಾಂ, ಪೂರ್ವದ ಪಶ್ಚಿಮ ಬಂಗಾಳ ಹಾಗೂ ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿ ವಿಧಾನಸಭೆಗೆ ಶೀಘ್ರದಲ್ಲೇ ಮತದಾನ ನಡೆಯಲಿದೆ. ಈ ರಾಜ್ಯಗಳ ಹಾಲಿ ವಿಧಾನಸಭೆಯ ಅವಧಿಯು ಮೇ ಮತ್ತು ಜೂನ್ ತಿಂಗಳಿನಲ್ಲಿ ಮುಕ್ತಾಯಗೊಳ್ಳಲಿದ್ದು, ಅದಕ್ಕೂ ಮುನ್ನವೇ ನೂತನ ಸರ್ಕಾರಗಳ ರಚನೆಯಾಗಬೇಕಿದೆ.
ಮಾದರಿ ನೀತಿ ಸಂಹಿತೆ ಜಾರಿ
ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಹಾಗೂ ಚುನಾವಣಾ ಆಯುಕ್ತರಾದ ಡಾ. ಸುಖ್ಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಅವರನ್ನೊಳಗೊಂಡ ಉನ್ನತ ಸಮಿತಿಯು ಈ ಸುದ್ದಿಗೋಷ್ಠಿ ನಡೆಸಲಿದೆ. ಇಂದು ಸಂಜೆ ಚುನಾವಣಾ ದಿನಾಂಕ, ಅಧಿಸೂಚನೆ ಹೊರಡಿಸುವ ದಿನ, ನಾಮಪತ್ರ ಸಲ್ಲಿಕೆ ಹಾಗೂ ಹಿಂಪಡೆಯುವಿಕೆ, ಮತದಾನ ಮತ್ತು ಫಲಿತಾಂಶದ ದಿನಾಂಕಗಳನ್ನು ಆಯೋಗವು ಅಧಿಕೃತವಾಗಿ ಪ್ರಕಟಿಸಲಿದೆ.
ಚುನಾವಣಾ ವೇಳಾಪಟ್ಟಿ ಪ್ರಕಟವಾಗುತ್ತಿದ್ದಂತೆಯೇ, ಚುನಾವಣೆ ನಡೆಯಲಿರುವ ಈ ಎಲ್ಲಾ 5 ರಾಜ್ಯಗಳಲ್ಲಿಯೂ ಚುನಾವಣಾ ಮಾದರಿ ನೀತಿ ಸಂಹಿತೆ (Model Code of Conduct) ತಕ್ಷಣದಿಂದಲೇ ಜಾರಿಗೆ ಬರಲಿದೆ. ಪಶ್ಚಿಮ ಬಂಗಾಳದಂತಹ ದೊಡ್ಡ ರಾಜ್ಯಗಳಲ್ಲಿ ಹಲವು ಹಂತಗಳಲ್ಲಿ ಮತದಾನ ನಡೆಯುವ ನಿರೀಕ್ಷೆಯಿದೆ.

