ಬೆಂಗಳೂರಿನ ಕೆಫೆಯಲ್ಲಿ ಬಾಂಬ್ ಸ್ಫೋಟ ಬೆನ್ನಲ್ಲೇ ದೆಹಲಿಯಲ್ಲಿ ಹೈ ಅಲರ್ಟ್
x

ಬೆಂಗಳೂರಿನ ಕೆಫೆಯಲ್ಲಿ ಬಾಂಬ್ ಸ್ಫೋಟ ಬೆನ್ನಲ್ಲೇ ದೆಹಲಿಯಲ್ಲಿ ಹೈ ಅಲರ್ಟ್


ನವದೆಹಲಿ: ಬೆಂಗಳೂರಿನ ‘ದಿ ರಾಮೇಶ್ವರಂ ಕೆಫೆ’ನಲ್ಲಿ ಬಾಂಬ್ (ಐಇಡಿ) ಸ್ಫೋಟ ಸಂಭವಿಸಿದ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜನಬಿಡ ಪ್ರದೇಶಗಳಲ್ಲಿ ಹಾಗೂ ಪ್ರಮುಖ ಮಾರುಕಟ್ಟೆಗಳಲ್ಲಿ ಭದ್ರತೆ ಹೆಚ್ಚಿಸಲು ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮಾರುಕಟ್ಟೆ ಆವರಣದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುವಂತೆ ಸಂಘ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದರು.

ಬಾಂಬ್ ನಿಷ್ಕ್ರೀಯ ದಳ ಮತ್ತು ಬಾಂಬ್ ಪತ್ತೆ ತಂಡಗಳಿಗೆ ಜಾಗರೂಕತೆಯಿಂದ ಇರಲು ದೆಹಲಿ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಬೆಂಗಳೂರಿನ ವೈಟ್‌ಫೀಲ್ಡ್ ಸಮೀಪದ ಬ್ರೂಕ್‌ಫೀಲ್ಡ್‌ನಲ್ಲಿರುವ ‘ದಿ ರಾಮೇಶ್ವರಂ ಕೆಫೆ’ ಹೋಟೆಲ್‌ನಲ್ಲಿ ಶುಕ್ರವಾರ ಟೈಮರ್ ಬಾಂಬ್ (ಐಇಡಿ) ಸ್ಫೋಟಿಸಲಾಗಿದ್ದು, ಗ್ರಾಹಕರು ಸೇರಿ 10 ಮಂದಿ ಗಾಯಗೊಂಡಿದ್ದಾರೆ.

ದುಷ್ಕರ್ಮಿಗಳ ಕೃತ್ಯದ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ‌ತಡೆಗಟ್ಟುವಿಕೆ ಕಾಯ್ದೆಯಡಿ (ಯುಎಪಿಎ) ಪ್ರಕರಣ ದಾಖಲಾಗಿದ್ದು, ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಹಾಗೂ ಸಿಸಿಬಿ ಪೊಲೀಸರು ಜಂಟಿಯಾಗಿ ತನಿಖೆ ಮುಂದುವರಿಸಿದ್ದಾರೆ.

Read More
Next Story