ಬೋರ್ಡ್ ಪರೀಕ್ಷೆ: ಮೇಲ್ಮನವಿ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
x

ಬೋರ್ಡ್ ಪರೀಕ್ಷೆ: ಮೇಲ್ಮನವಿ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ರಾಜ್ಯ ಸರ್ಕಾರದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ರಾಜೇಶ್ ಕೆ.ರೈ ಅವರಿದ್ದ ವಿಭಾಗೀಯ ನ್ಯಾಯಪೀಠವು ವಿಚಾರಣೆ ಪೂರ್ತಿಗೊಳಿಸಿದ್ದು, ಶೀಘ್ರದಲ್ಲೇ ತೀರ್ಪು ಪ್ರಕಟಿಸುವುದಾಗಿ ಹೇಳಿದೆ


ಬೆಂಗಳೂರು: ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ಆದೇಶದ ರದ್ದತಿಯನ್ನು ಪ್ರಶ್ನಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ. 5, 8, 9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ರದ್ದು ಮಾಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

ರಾಜ್ಯ ಸರ್ಕಾರದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ರಾಜೇಶ್ ಕೆ.ರೈ ಅವರಿದ್ದ ವಿಭಾಗೀಯ ನ್ಯಾಯಪೀಠವು ವಿಚಾರಣೆ ಪೂರ್ತಿಗೊಳಿಸಿದ್ದು, ಶೀಘ್ರದಲ್ಲೇ ತೀರ್ಪು ಪ್ರಕಟಿಸುವುದಾಗಿ ಹೇಳಿದೆ.

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ವಕೀಲರು, “ರಾಜ್ಯ ಪಠ್ಯಕ್ರಮ ಅಳವಡಿಸಿರುವ ಎಲ್ಲ ಮಕ್ಕಳಿಗೂ ಸಮಾನ ಶಿಕ್ಷಣ ವ್ಯವಸ್ಥೆ ಬೇಕಾಗಿದೆ. ಆದ್ದರಿಂದ ಶಿಕ್ಷಣ ಇಲಾಖೆ ಬೋರ್ಡ್ ಪರೀಕ್ಷೆಗೆ ಮುಂದಾಗಿದೆ. ಪರೀಕ್ಷೆಗೆ ಮಕ್ಕಳು ಹಲವು ದಿನಗಳಿಂದ ಸಿದ್ದತೆ ಮಾಡಿಕೊಂಡಿರುತ್ತಾರೆ. ಪರೀಕ್ಷಾ ದಿನಾಂಕಗಳನ್ನು ಮತ್ತೆ ಮತ್ತೆ ಬದಲಾವಣೆ ಮಾಡುವುದರಿಂದ ವಿದ್ಯಾರ್ಥಿಗಳಿಗೆ ತೀವ್ರ ಗೊಂದಲ ಆಗುತ್ತಿದೆ” ಎಂದು ವಾದಿಸಿದ್ದರು.

“ರಾಜ್ಯ ಶಿಕ್ಷಣ ಇಲಾಖೆಗೆ ಆರ್ಟಿಐ ಕಾಯಿದೆಯಡಿ ಪರೀಕ್ಷೆಗಳನ್ನು ಮಾಡುವುದಕ್ಕೆ ಅವಕಾಶ ಇದೆ. ಕಳೆದ ವರ್ಷವೂ ಆರ್ಟಿಐ ಕಾಯಿದೆಯಡಿ ಸುತ್ತೋಲೆ ಹೊರಡಿಸಿ ಪರೀಕ್ಷೆಗಳನ್ನು ನಡೆಸಲಾಗಿತ್ತು. ಅಲ್ಲದೆ, ಶಿಕ್ಷಣ ಇಲಾಖೆ ಸಮವರ್ತಿ ಪಟ್ಟಿಗೆ ಸೇರಿದ್ದು, ಈ ಸಂಬಂಧ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಅವಕಾಶವಿದೆ” ಎಂದು ಸರ್ಕಾರದ ಪರ ವಕೀಲರು ಕೋರ್ಟ್ ಗೆ ತಿಳಿಸಿದ್ದಾರೆ.

ಈ ರೀತಿಯಲ್ಲಿ ಪರೀಕ್ಷೆಗಳನ್ನು ನಡೆಸುವುದು ಕಾನೂನುಬಾಹಿರ ಎಂದು ವಾದಿಸಿರುವ ಅರ್ಜಿದಾರರ ಪರ ವಕೀಲರು ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆಗಳನ್ನು ನಡೆಸುವುದಕ್ಕೆ ಮುಂದಾಗಿರುವುದು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆಗೆ ವಿರುದ್ಧವಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ವಾದ - ಪ್ರತಿವಾದವನ್ನು ಆಲಿಸಿದ ನ್ಯಾಯಪೀಠವು ತೀರ್ಪು ಕಾಯ್ದಿರಿಸಿದೆ.

Read More
Next Story