ಚುನಾವಣಾ ಪ್ರಚಾರ: ರಾಜ್ಯಕ್ಕೆ ಪ್ರಧಾನಿ ಮೋದಿ ಮೂರನೇ ಭೇಟಿ
x

ಚುನಾವಣಾ ಪ್ರಚಾರ: ರಾಜ್ಯಕ್ಕೆ ಪ್ರಧಾನಿ ಮೋದಿ ಮೂರನೇ ಭೇಟಿ


ಪ್ರಧಾನಿ ನರೇಂದ್ರ ಮೋದಿ ನಾಳೆ (ಏ.14ರಂದು) ಮೈಸೂರಿಗೆ ಆಗಮಿಸುತ್ತಿದ್ದು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಮಹಾರಾಜ ಕಾಲೇಜು ಮೈದಾನದಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು, ಕೊಡಗು, ಮಂಡ್ಯ ಹಾಗೂ ಚಾಮರಾಜನಗರ ಸೇರಿದಂತೆ ನಾಲ್ಕು ಜಿಲ್ಲೆಗಳನ್ನೊಳಗೊಂಡಂತೆ ಬಿಜೆಪಿ ಬೃಹತ್ ಬಹಿರಂಗ ಸಮಾವೇಶವನ್ನು ಏರ್ಪಡಿಸಿದೆ.

ಭಾನುವಾರ ಸಂಜೆ 4 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಪ್ರಚಾರ ಸಭೆಯನ್ನು ಉದ್ದೇಶಿಸಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ 1 ಲಕ್ಷಕ್ಕೂ ಅಧಿಕ ಜನರನ್ನು ಸೇರಿಸಲು ಬಿಜೆಪಿ ಸಿದ್ಧತೆ ಕೈಗೊಂಡಿದೆ. ಆ ಬಳಿಕ ಮಂಗಳೂರಿನಲ್ಲಿ ಸಂಜೆ 6ಕ್ಕೆ ನಿಗದಿಯಾಗಿರುವ ರೋಡ್ ಶೋನಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಮಾಹಿತಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ನಿಗದಿಯಾಗುತ್ತಿದ್ದಂತೆ ಎಸ್‌ಪಿಜಿ ತಂಡವೂ ಶನಿವಾರ ಮೈಸೂರಿಗೆ ಆಗಮಿಸಿ ಕಾರ್ಯಕ್ರಮ ನಡೆಯುವ ಸ್ಥಳ, ವಿಮಾನ ನಿಲ್ದಾಣ, ಮೋದಿ ಅವರು ಆಗಮಿಸುವ ರಸ್ತೆ ಮಾರ್ಗಗಳಲ್ಲಿ ಪರಿಶೀಲನೆ ನಡೆಸಿವೆ ಎಂದು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ.

ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಮೈಸೂರು ನಗರ, ಗ್ರಾಮಾಂತರ ವಿಭಾಗದ ಬಿಜೆಪಿ ಮುಖಂಡರು ನಾಲ್ಕೈದು ದಿನದಿಂದಲೇ ಸಿದ್ಧತಾ ಕಾರ್ಯ ಆರಂಭಿಸಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದೆ. ವೇದಿಕೆ ನಿರ್ಮಾಣ, ಎಲ್‌ಇಡಿ ಸ್ಕ್ರೀನ್‌ಗಳ ಅಳವಡಿಕೆ, ಜನರಿಗೆ ಆಸನ, ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ, ಎಂದು ಮೈಸೂರು ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ತಿಳಿಸಿದ್ದಾರೆ.

Read More
Next Story