IPL 2026 | Opening match in Bengaluru, who will be RCBs opponent? Here is the full list
x

ಎಂ. ಚಿನ್ನಸ್ವಾಮಿ ಕ್ರೀಡಾಂಗಣ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್​ ಪಂದ್ಯ ಆಯೋಜನೆಗೆ ಸಂಪುಟದ ಗ್ರೀನ್ ಸಿಗ್ನಲ್

ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ಅವರ ನೇತೃತ್ವದ ತನಿಖಾ ಸಮಿತಿ ನೀಡಿದ ವರದಿಯ ಶಿಫಾರಸುಗಳನ್ನು ಆಧರಿಸಿ, ಸರ್ಕಾರವು ಷರತ್ತುಬದ್ಧ ಅನುಮತಿಯನ್ನು ನೀಡಿದೆ


Click the Play button to hear this message in audio format

ಕಳೆದ ಆರು ತಿಂಗಳಿಂದ ಬಾಗಿಲು ಮುಚ್ಚಿದ್ದ ಬೆಂಗಳೂರಿನ ಪ್ರತಿಷ್ಠಿತ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಲು ಅಧಿಕೃತವಾಗಿ ಒಪ್ಪಿಗೆ ನೀಡಲಾಗಿದ್ದು, ಕ್ರಿಕೆಟ್ ಪ್ರೇಮಿಗಳಲ್ಲಿ ಹೊಸ ಸಂಚಲನ ಮೂಡಿಸಿದೆ.

ಕಳೆದ ಜೂನ್‌ ತಿಂಗಳಲ್ಲಿ ನಡೆದ ದುರಂತದ ಬಳಿಕ ಕ್ರೀಡಾಂಗಣದಲ್ಲಿ ಯಾವುದೇ ಪಂದ್ಯಗಳು ನಡೆದಿರಲಿಲ್ಲ. ಇದೀಗ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ಅವರ ನೇತೃತ್ವದ ತನಿಖಾ ಸಮಿತಿ ನೀಡಿದ ವರದಿಯ ಶಿಫಾರಸುಗಳನ್ನು ಆಧರಿಸಿ, ಸರ್ಕಾರವು ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಇನ್ನು ಮುಂದೆ ಪಂದ್ಯಗಳ ಸಂದರ್ಭದಲ್ಲಿ ಭದ್ರತೆಯ ಸಂಪೂರ್ಣ ಜವಾಬ್ದಾರಿಯನ್ನು ಗೃಹ ಇಲಾಖೆಯು ನಿರ್ವಹಿಸಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ನೂತನ ಅಧ್ಯಕ್ಷರ ಮನವಿಗೆ ಸ್ಪಂದನೆ

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಟೀಂ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಹಾಗೂ ಅವರ ಪದಾಧಿಕಾರಿಗಳ ತಂಡವು ಬೆಳಗಾವಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತ್ತು. ಬೆಂಗಳೂರಿನಿಂದ ಅಂತಾರಾಷ್ಟ್ರೀಯ ಪಂದ್ಯಗಳು ಮತ್ತು ಐಪಿಎಲ್ ಪಂದ್ಯಗಳು ಬೇರೆಡೆಗೆ ಸ್ಥಳಾಂತರಗೊಳ್ಳದಂತೆ ತಡೆಯಲು ಕೂಡಲೇ ಅನುಮತಿ ನೀಡಬೇಕೆಂದು ಅವರು ಕೋರಿದ್ದರು. ಈ ಮನವಿಗೆ ಪೂರಕವಾಗಿ ಸ್ಪಂದಿಸಿದ ಸರ್ಕಾರ, ಸಂಪುಟ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಿ ತ್ವರಿತವಾಗಿ ಅನುಮೋದನೆ ನೀಡಿದೆ.

ಸುರಕ್ಷತೆಗೆ ಮೊದಲ ಆದ್ಯತೆ: ಡಿಸಿಎಂ ಸ್ಪಷ್ಟನೆ

ಈ ಕುರಿತು ಪ್ರತಿಕ್ರಿಯಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಕ್ರಿಕೆಟ್ ಟೂರ್ನಿಗಳನ್ನು ನಿಲ್ಲಿಸುವುದು ಸರ್ಕಾರದ ಉದ್ದೇಶವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಸಾರ್ವಜನಿಕರ ಪ್ರಾಣ ರಕ್ಷಣೆ ಮತ್ತು ಜನಜಂಗುಳಿ ನಿಯಂತ್ರಣ ಅತಿಮುಖ್ಯವಾಗಿದೆ. ಮೈಕಲ್ ಡಿ ಕುನ್ಹಾ ಸಮಿತಿ ನೀಡಿರುವ ಸುರಕ್ಷತಾ ಸಲಹೆಗಳನ್ನು ಹಂತ ಹಂತವಾಗಿ ಪಾಲನೆ ಮಾಡಲಾಗುವುದು. ರಾಜ್ಯದ ಗೌರವಕ್ಕೆ ಧಕ್ಕೆ ಬಾರದಂತೆ ಮತ್ತು ಅಭಿಮಾನಿಗಳ ಭಾವನೆಗಳಿಗೆ ಬೆಲೆಕೊಟ್ಟು, ಐಪಿಎಲ್ ಸೇರಿದಂತೆ ಯಾವುದೇ ಪ್ರಮುಖ ಪಂದ್ಯಗಳು ಬೆಂಗಳೂರು ಬಿಟ್ಟು ಹೋಗದಂತೆ ನೋಡಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.

ದುರಂತದ ಕರಾಳ ನೆನಪು ಮತ್ತು ಮುನ್ನೆಚ್ಚರಿಕೆ

2025ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಚಾಂಪಿಯನ್ ಆದ ಹಿನ್ನೆಲೆಯಲ್ಲಿ, ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭವು ದುರಂತದಲ್ಲಿ ಅಂತ್ಯಗೊಂಡಿತ್ತು. ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರು ಜಮಾಯಿಸಿದ ಪರಿಣಾಮ ಉಂಟಾದ ನೂಕುನುಗ್ಗಲು ಹಾಗೂ ಕಾಲ್ತುಳಿತದಲ್ಲಿ 12 ಮಂದಿ ಸಾವನ್ನಪ್ಪಿದ್ದರು. ಈ ಘಟನೆಯು ಕ್ರೀಡಾ ಜಗತ್ತನ್ನೇ ಬೆಚ್ಚಿಬೀಳಿಸಿತ್ತು. ಅಂದಿನಿಂದ ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಮಾರಂಭಗಳಿಗೆ ನಿರ್ಬಂಧ ಹೇರಲಾಗಿತ್ತು. ಇದೀಗ ಸರ್ಕಾರದ ಅನುಮತಿಯೊಂದಿಗೆ, ಕ್ರೀಡಾಂಗಣವು ಹೊಸ ಭದ್ರತಾ ವ್ಯವಸ್ಥೆಯೊಂದಿಗೆ ಮತ್ತೆ ಕ್ರಿಕೆಟ್ ಪಂದ್ಯಗಳಿಗೆ ಸಜ್ಜಾಗುತ್ತಿದೆ.

ಘಟನಾವಳಿಗಳು

ಜೂನ್ 04, 2025: ಆರ್‌ಸಿಬಿ ಐಪಿಎಲ್ ಗೆದ್ದ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭ. ವಿಪರೀತ ಜನಸಂದಣಿಯಿಂದ ಉಂಟಾದ ಕಾಲ್ತುಳಿತದಲ್ಲಿ 12 ಸಾವು. ಕ್ರೀಡಾಂಗಣದಲ್ಲಿ ಪಂದ್ಯಗಳಿಗೆ ತಡೆ.

ಜೂನ್ 2025 : ಘಟನೆಯ ತನಿಖೆಗಾಗಿ ನಿವೃತ್ತ ನ್ಯಾ. ಮೈಕಲ್ ಡಿ ಕುನ್ಹಾ ನೇತೃತ್ವದಲ್ಲಿ ಸಮಿತಿ ರಚನೆ.

ನವೆಂಬರ್/ಡಿಸೆಂಬರ್ 2025 : ಕೆಎಸ್‌ಸಿಎ ಚುನಾವಣೆ; ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ನೂತನ ಅಧ್ಯಕ್ಷರಾಗಿ ಆಯ್ಕೆ

ಡಿಸೆಂಬರ್ 10, 2025 : ಬೆಳಗಾವಿಯ ಸರ್ಕಿಟ್ ಹೌಸ್‌ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ವೆಂಕಟೇಶ್ ಪ್ರಸಾದ್, ಪಂದ್ಯಗಳ ಆಯೋಜನೆಗೆ ಅನುಮತಿ ಕೋರಿಕೆ.

ಡಿಸೆಂಬರ್ 11, 2025 : ಬೆಳಗಾವಿಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನ್ಯಾ. ಕುನ್ಹಾ ವರದಿ ಆಧರಿಸಿ ಪಂದ್ಯಗಳ ಆಯೋಜನೆಗೆ ಅಧಿಕೃತ ಅನುಮತಿ/

Read More
Next Story