
ಸಾಂದರ್ಭಿಕ ಚಿತ್ರ
ವನ್ಯಜೀವಿ ಮಂಡಳಿ ಸಭೆ: ಸಫಾರಿ ಆರಂಭ, ಮೇಕೆದಾಟು ಕಾನೂನು ತೊಡಕು ನಿವಾರಣೆಗೆ ಸಿಎಂ ಸೂಚನೆ
ಮೇಕೆದಾಟು ಯೋಜನೆಗೆ ಸಣ್ಣಪುಟ್ಟ ನೆಪಗಳನ್ನು ಮುಂದಿಟ್ಟುಕೊಂಡು ಸುಪ್ರೀಂಕೋರ್ಟ್ನಲ್ಲಿ ತಕರಾರು ಎತ್ತಲು ತಮಿಳುನಾಡು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡಿಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿ ಸ್ಥಗಿತಗೊಂಡಿರುವ ಸಫಾರಿ ಮತ್ತು ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ತಕ್ಷಣವೇ ಪುನರಾರಂಭಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮಂಗಳವಾರ (ಜೂ.30) ನಡೆದ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಬಂಡಿಪುರ ಮತ್ತು ನಾಗರಹೊಳೆ ಪರಿಸರ ಪ್ರವಾಸೋದ್ಯಮ ವಲಯಗಳಲ್ಲಿ ಹುಲಿ ಹಾಗೂ ಚಿರತೆಗಳ ಸಾಂದ್ರತೆ ಹೆಚ್ಚಾಗಿದೆ. ಇದು ಮಾನವ-ವನ್ಯಜೀವಿ ಸಂಘರ್ಷದ ಪ್ರದೇಶಗಳಿಗಿಂತಲೂ ಅಧಿಕವಾಗಿರುವ ಹಿನ್ನೆಲೆಯಲ್ಲಿ, ಪ್ರವಾಸಿಗರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ಯಾವುದೇ ಧಕ್ಕೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಸಫಾರಿ ಆರಂಭಿಸುವಂತೆ ಆದೇಶಿಸಿದರು.
ಸಿಎಂ ಡಿ.ಕೆ. ಶಿವಕುಮಾರ್ ವನ್ಯಜೀವಿ ಮಂಡಳಿ ಸಭೆ ನಡೆಸಿದರು.
ತಾಂತ್ರಿಕ ಪರಿಹಾರಕ್ಕೆ ಸೂಚನೆ
"ಮೇಕೆದಾಟು ಯೋಜನೆಗೆ ಸಣ್ಣಪುಟ್ಟ ನೆಪಗಳನ್ನು ಮುಂದಿಟ್ಟುಕೊಂಡು ಸುಪ್ರೀಂಕೋರ್ಟ್ನಲ್ಲಿ ತಕರಾರು ಎತ್ತಲು ತಮಿಳುನಾಡು ಸರ್ಕಾರ ಪ್ರಯತ್ನಿಸುತ್ತಿದೆ. ಯೋಜನೆಗೆ ಎದುರಾಗಿರುವ ಸಣ್ಣಪುಟ್ಟ ತಾಂತ್ರಿಕ ಸಮಸ್ಯೆಗಳು ಹಾಗೂ ಕಾನೂನು ತೊಡಕುಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಅವುಗಳನ್ನು ಪರಿಣಾಮಕಾರಿಯಾಗಿ ಬಗೆಹರಿಸಲು ಅಧಿಕಾರಿಗಳ ತಂಡಕ್ಕೆ ಸೂಚಿಸಿದರು.
ವನ್ಯಜೀವಿಗಳ ಸಂಚಾರಕ್ಕೆ ಕಾರಿಡಾರ್ ಅಡ್ಡಿ
ಸಭೆಯಲ್ಲಿ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, ಬಿಎಂಐಸಿ ಕಾರಿಡಾರ್ ಹಾಗೂ ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ ವೇ ನಿರ್ಮಾಣದಿಂದಾಗಿ ಆನೆ, ಹುಲಿ ಮತ್ತು ಚಿರತೆಗಳ ಸಾಂಪ್ರದಾಯಿಕ ಸಂಚಾರ ಮಾರ್ಗಗಳಿಗೆ ತೀವ್ರ ಅಡ್ಡಿಯಾಗಿದೆ. ಎಕ್ಸ್ಪ್ರೆಸ್ ವೇ ನಿರ್ಮಾಣದ ಸಂದರ್ಭದಲ್ಲಿ ವನ್ಯಜೀವಿಗಳಿಗಾಗಿ ಅಂಡರ್ಪಾಸ್, ಓವರ್ಪಾಸ್ ಹಾಗೂ ಕಾರಿಡಾರ್ಗಳನ್ನು ನಿರ್ಮಿಸುವ ಷರತ್ತು ವಿಧಿಸಲಾಗಿತ್ತು. ಆದರೆ ಇದನ್ನು ಸಮರ್ಪಕವಾಗಿ ಪಾಲಿಸದಿರುವುದೇ ವನ್ಯಜೀವಿಗಳು ಚನ್ನಪಟ್ಟಣ, ರಾಮನಗರ ಭಾಗಗಳತ್ತ ಮುಖ ಮಾಡಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗಲು ಕಾರಣ ಎಂದರು.
ಅಪಾಯಕಾರಿ ಮರಗಳ ತೆರವು
ರಾಜಧಾನಿ ಬೆಂಗಳೂರಿನಲ್ಲಿ ಮಳೆ-ಗಾಳಿಗೆ ಒಣಗಿದ ಮರಗಳು ಬಿದ್ದು ಸಾರ್ವಜನಿಕರು ಅಪಘಾತಕ್ಕೀಡಾಗುತ್ತಿರುವ ಬಗ್ಗೆ ಸಮಿತಿ ಸದಸ್ಯರು ಆತಂಕ ವ್ಯಕ್ತಪಡಿಸಿದರು. ಈ ವೇಳೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಅಪಾಯಕಾರಿ ಮರಗಳು ಮತ್ತು ಕೊಂಬೆಗಳನ್ನು ಗುರುತಿಸಿ, ತುರ್ತಾಗಿ ತೆರವುಗೊಳಿಸುವಂತೆ ಸಿಎಂ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

