ತಮಿಳುನಾಡಿಗೆ ನೀರು ಹರಿಸುವ CWRC ಆದೇಶ ಅಸಂಬದ್ಧ - ಸಚಿವ ಚಲುವರಾಯಸ್ವಾಮಿ ಆಕ್ರೋಶ
x

ತಮಿಳುನಾಡಿಗೆ ನೀರು ಹರಿಸುವ CWRC ಆದೇಶ ಅಸಂಬದ್ಧ - ಸಚಿವ ಚಲುವರಾಯಸ್ವಾಮಿ ಆಕ್ರೋಶ

ನಮ್ಮಲ್ಲಿಯೇ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಭೀತಿಯಿರುವಾಗ ತಮಿಳುನಾಡಿಗೆ ಅಷ್ಟೊಂದು ಪ್ರಮಾಣದ ನೀರು ಬಿಡುವುದು ಅಸಾಧ್ಯ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.


Click the Play button to hear this message in audio format

ಕಾವೇರಿ ನೀರು ನಿರ್ವಹಣಾ ಸಮಿತಿ (ಸಿಡಬ್ಲ್ಯೂಆರ್‌ಸಿ) ತಮಿಳುನಾಡಿಗೆ ಪ್ರತಿದಿನ 6,000 ಕ್ಯೂಸೆಕ್ಸ್ ನೀರನ್ನು ಹರಿಸುವಂತೆ ನೀಡಿರುವ ಆದೇಶವು ಕರ್ನಾಟಕದಲ್ಲಿ ಆಡಳಿತಾತ್ಮಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿಯುತ್ತಿರುವ ಸಂದರ್ಭದಲ್ಲೇ ಇಂತಹ ಆದೇಶ ಬಂದಿರುವುದು ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾವೇರಿ ನೀರು ನಿರ್ವಹಣಾ ಸಮಿತಿಯ ವರ್ತನೆಯನ್ನು ತೀವ್ರವಾಗಿ ಟೀಕಿಸಿದರು. "ನಾವು ಸಂಕಷ್ಟದ ಪರಿಸ್ಥಿತಿಯಲ್ಲಿದ್ದೇವೆ. ನಮ್ಮ ರಾಜ್ಯದ ಅಧಿಕಾರಿಗಳು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ಅಂಕಿ-ಅಂಶಗಳೊಂದಿಗೆ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ತಮಿಳುನಾಡು 17,000 ಕ್ಯೂಸೆಕ್ಸ್ ನೀರಿಗೆ ಬೇಡಿಕೆ ಇಟ್ಟಿತ್ತು. ಆದರೆ, ನಮ್ಮಲ್ಲಿಯೇ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಭೀತಿಯಿರುವಾಗ ಅಷ್ಟೊಂದು ಪ್ರಮಾಣದ ನೀರು ಬಿಡುವುದು ಅಸಾಧ್ಯ" ಎಂದು ಸ್ಪಷ್ಟಪಡಿಸಿದರು. ಕಳೆದ ಒಂದು ವಾರದಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಜಲಾಶಯಗಳಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿದೆ. ಇಂತಹ ಕ್ಲಿಷ್ಟಕರ ಸ್ಥಿತಿಯಲ್ಲಿ 6,000 ಕ್ಯೂಸೆಕ್ಸ್ ನೀರು ಹರಿಸುವುದು ಎಂದರೆ, ಮುಂದಿನ ದಿನಗಳಲ್ಲಿ ರಾಜ್ಯದ ಜನತೆಗೆ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಲಿದೆ ಎಂಬ ಆತಂಕ ವ್ಯಕ್ತಪಡಿಸಿದರು.

ದೆಹಲಿಯಿಂದಲೇ ಆಡಳಿತ: ನೆಲಮಟ್ಟದ ವಾಸ್ತವದ ಅರಿವಿಲ್ಲ

ದೆಹಲಿಯಲ್ಲಿ ಕುಳಿತು ವಾಸ್ತವ ಅರಿಯದೆ ಆದೇಶ ನೀಡುವ ಪ್ರಾಧಿಕಾರಗಳ ಕಾರ್ಯವೈಖರಿಯನ್ನು ಸಚಿವರು ತರಾಟೆಗೆ ತೆಗೆದುಕೊಂಡರು. "ಸಂವಿಧಾನಾತ್ಮಕ ಮತ್ತು ಆಡಳಿತಾತ್ಮಕ ಬೆಂಚ್‌ಗಳಲ್ಲಿ ಕುಳಿತಿರುವವರಿಗೆ ರಾಜ್ಯದ ನೆಲಮಟ್ಟದ ವಾಸ್ತವ ಸ್ಥಿತಿ ಅರ್ಥವಾಗುತ್ತಿಲ್ಲ. ಕೇವಲ ಕಾಗದದ ಮೇಲಿನ ಲೆಕ್ಕಾಚಾರಗಳನ್ನು ನೋಡಿ ಆದೇಶಗಳನ್ನು ನೀಡಲಾಗುತ್ತಿದೆ. ಹಿಂದೆ ಕೂಡ ಇದೇ ರೀತಿ ವಾಸ್ತವ ಅರಿಯದೆ ಆದೇಶಗಳನ್ನು ನೀಡಲಾಗಿತ್ತು. ಇದು ಕೇವಲ ತಾಂತ್ರಿಕ ಆದೇಶವಲ್ಲ, ಇದು ಕೋಟ್ಯಂತರ ಕನ್ನಡಿಗರ ಬದುಕಿನ ಪ್ರಶ್ನೆ" ಎಂದು ಹೇಳಿದರು.

ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ಸಿದ್ಧತೆ

ಈ ವಿವಾದದ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಹೋರಾಟದ ಬಗ್ಗೆ ಮಾಹಿತಿ ನೀಡಿದ ಸಚಿವರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲೂ ನಮಗೆ ನ್ಯಾಯ ಸಿಗುವ ಭರವಸೆ ಇಲ್ಲ. ಹಾಗಾಗಿ, ಸಭೆಯ ನಂತರ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿ, ಕೂಡಲೇ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ" ಎಂದರು. ನ್ಯಾಯಾಲಯದಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಸಮರ್ಥವಾಗಿ ಮಂಡಿಸುವ ಮೂಲಕ ರೈತರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಪ್ರಸ್ತುತ ಡ್ಯಾಂಗಳಲ್ಲಿರುವ ನೀರಿನಲ್ಲಿ ಶೇ. 50 ರಷ್ಟು ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ಮೀಸಲಿಟ್ಟಿದ್ದೇವೆ. ಯಾವುದೇ ಕಾರಣಕ್ಕೂ ಬೆಂಗಳೂರು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ನಗರಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಭದ್ರಾ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಯ ವ್ಯಾಪ್ತಿಯಲ್ಲಿ ರೈತರ ಬೆಳೆಗಳಿಗೆ ಅಗತ್ಯವಿರುವಷ್ಟು ನೀರನ್ನು ಒದಗಿಸಲಾಗಿದೆ. ಚಿತ್ರದುರ್ಗದಂತಹ ಬರಪೀಡಿತ ಪ್ರದೇಶಗಳಲ್ಲೂ ನದಿಯ ಮೂಲಕ ನೀರು ಹರಿಸಿ ಕೆರೆಕಟ್ಟೆಗಳನ್ನು ತುಂಬಿಸುವ ಮೂಲಕ ಜನ-ಜಾನುವಾರುಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದರು.

ಬಿಜೆಪಿಯ ಪಾದಯಾತ್ರೆಗೆ ಟಾಂಗ್

ಈ ಜಲ ವಿವಾದದ ನಡುವೆಯೇ ರಾಜ್ಯದಲ್ಲಿ ವಿರೋಧ ಪಕ್ಷದವರು ನಡೆಸುತ್ತಿರುವ ಪಾದಯಾತ್ರೆಯನ್ನು ಸಚಿವರು ಲೇವಡಿ ಮಾಡಿದರು. "ಬಿಜೆಪಿಯವರಿಗೆ ಯಾವುದೋ ಒಂದು ಹಠವಿದೆ. ಪಾದಯಾತ್ರೆ ಮಾಡುವುದರಿಂದ ನೀರು ಹರಿಯುವುದಿಲ್ಲ ಎಂಬುದು ಅವರಿಗೂ ಗೊತ್ತು. ಆರ್. ಅಶೋಕ್ ಅವರಿಗೆ ಈಗಾಗಲೇ ಕಾಲು ನೋವು ಕಾಣಿಸಿಕೊಂಡಿದೆ ಎಂದು ಸುದ್ದಿಯಾಗಿದೆ. ವಿರೋಧ ಪಕ್ಷದವರೂ ನಮ್ಮ ಸ್ನೇಹಿತರೇ, ಅವರ ಆರೋಗ್ಯದ ಬಗ್ಗೆ ನಮಗೆ ಕಾಳಜಿ ಇದೆ. ರಾಜಕೀಯ ಮಾಡಲಿ, ಆದರೆ ಆರೋಗ್ಯವನ್ನು ಕೆಡಿಸಿಕೊಳ್ಳದಿರಲಿ" ಎಂದು ವ್ಯಂಗ್ಯವಾಡಿದರು.

Read More
Next Story