ಚಿಕ್ಕಮಗಳೂರು: ಮೂಡಿಗೆರೆಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ; ಮರ ಬಿದ್ದು ವಾಹನಗಳು ಜಖಂ
x
ಸಂಗ್ರಹ ಚಿತ್ರ.

ಚಿಕ್ಕಮಗಳೂರು: ಮೂಡಿಗೆರೆಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ; ಮರ ಬಿದ್ದು ವಾಹನಗಳು ಜಖಂ

ಬಿರುಗಾಳಿಯ ತೀವ್ರತೆಗೆ ಅಲ್ಲಲ್ಲಿ ಮರಗಳು ಹಾಗೂ ವಿದ್ಯುತ್ ಕಂಬಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದ್ದು, ಅಲ್ಲಲ್ಲಿ ಜನರ ಓಡಾಟಕ್ಕೆ ಸಮಸ್ಯೆ ಉಂಟಾಗಿದೆ.


Click the Play button to hear this message in audio format

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ವರುಣನ ಆಗಮನವಾಗಿದ್ದು, ಮೂಡಿಗೆರೆ ತಾಲ್ಲೂಕಿನಲ್ಲಿ ಬಿರುಗಾಳಿ, ಗುಡುಗು ಹಾಗೂ ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮರಗಳು ಧರೆಗುರುಳಿದ ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಜಿಲ್ಲೆಯ ಜನತೆಗೆ ಮಳೆಯ ಆಗಮನ ಕೊಂಚ ನೆಮ್ಮದಿ ತಂದಿದ್ದರೂ, ಮೂಡಿಗೆರೆ ಭಾಗದಲ್ಲಿ ಅವಾಂತರಗಳನ್ನೇ ಸೃಷ್ಟಿಸಿದೆ.

ಮೂಡಿಗೆರೆ, ಕೊಟ್ಟಿಗೆಹಾರ, ಬಣಕಲ್ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ಒಂದು ಗಂಟೆಗೂ ಹೆಚ್ಚು ಕಾಲ ವರುಣ ಆರ್ಭಟಿಸಿದ್ದು, ನಂತರ ಸಂಜೆಯವರೆಗೂ ತುಂತುರು ಮಳೆ ಮುಂದುವರಿದಿತ್ತು. ದಿಢೀರ್ ಮಳೆಯಿಂದಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು. ಮಳೆಯ ಅಬ್ಬರಕ್ಕೆ ಮೂಡಿಗೆರೆ ಬಸ್ ನಿಲ್ದಾಣದ ಆವರಣದಲ್ಲಿ ಎರಡು ದೊಡ್ಡ ಮರದ ಕೊಂಬೆಗಳು ಮುರಿದು ಬಿದ್ದಿವೆ. ಇದರ ಪರಿಣಾಮವಾಗಿ, ಅಲ್ಲಿ ನಿಲ್ಲಿಸಲಾಗಿದ್ದ ಬೈಕ್‌ಗಳಿಗೆ ಹಾನಿಯಾಗಿದೆ.

ಅದೇ ರೀತಿ, ಮೂಡಿಗೆರೆಯ ಪರಿಮಳಮ್ಮ ದೇವಾಲಯದ ಸಮೀಪ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಜಖಂಗೊಂಡಿದೆ. ಬಿರುಗಾಳಿಯ ತೀವ್ರತೆಗೆ ಅಲ್ಲಲ್ಲಿ ಮರಗಳು ಹಾಗೂ ವಿದ್ಯುತ್ ಕಂಬಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಹವಾಮಾನದಲ್ಲಿನ ಈ ದಿಢೀರ್ ಬದಲಾವಣೆಯು ಜನಜೀವನದ ಮೇಲೆ ನೇರ ಪರಿಣಾಮ ಬೀರಿದೆ.

ಹೆದ್ದಾರಿ ಸಂಚಾರಕ್ಕೆ ಅಡಚಣೆ ಮತ್ತು ಜಿಲ್ಲೆಯಾದ್ಯಂತ ಹದಮಳೆ

ಮಳೆಯ ಅಬ್ಬರಕ್ಕೆ ಬಿಳಗುಳದ ಬಳಿ ತೆಂಗಿನ ಮರವೊಂದು ನೇರವಾಗಿ ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಕೆಲಕಾಲ ಸಂಪೂರ್ಣವಾಗಿ ಸ್ಥಗಿತಗೊಂಡು, ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು. ನಂತರ ಸ್ಥಳೀಯರ ನೆರವಿನಿಂದ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಜಿಲ್ಲೆಯ ಇತರ ಭಾಗಗಳಲ್ಲಿಯೂ ಉತ್ತಮ ಮಳೆಯಾಗಿದೆ. ಕಡೂರಿನಲ್ಲಿ ಈ ವರ್ಷದ ಮೊದಲ ಮಳೆಯಾಗಿದ್ದರೆ, ಕಳಸ, ಕೊಪ್ಪ, ಹಾಗೂ ನರಸಿಂಹರಾಜಪುರ ತಾಲ್ಲೂಕುಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಪೂರಕವಾದ ಹದಮಳೆಯಾಗಿದೆ. ಇನ್ನು, ಚಿಕ್ಕಮಗಳೂರು ನಗರದಲ್ಲಿಯೂ ಸಾಧಾರಣ ಮಳೆಯಾಗಿದ್ದು, ಜಿಲ್ಲೆಯಾದ್ಯಂತ ತಂಪಾದ ವಾತಾವರಣ ನಿರ್ಮಾಣವಾಗಿದೆ.

Read More
Next Story