ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರ; ಇವಿ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿಗೂ ಕೇಂದ್ರದ ಉತ್ತೇಜನ
x
ಬೆಂಗಳೂರಿನಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕೈಗಾರಿಕೋದ್ಯಮಿಗಳ ಜತೆ ಸಭೆ ನಡೆಸಿದರು.

ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರ; ಇವಿ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿಗೂ ಕೇಂದ್ರದ ಉತ್ತೇಜನ

ರಾಜ್ಯದಲಿ ARAI ಪರೀಕ್ಷಾ ಕೇಂದ್ರ ಸ್ಥಾಪನೆ ಆದರೆ ಸಾವಿರಾರು ಸಂಖ್ಯೆಯಷ್ಟು ಉದ್ಯೋಗ ಸೃಷ್ಟಿ ಆಗುವುದಷ್ಟೇ ಅಲ್ಲದೆ, ಪರೋಕ್ಷ ಉದ್ಯೋಗಗಳನ್ನು ಬೃಹತ್ ಪ್ರಮಾಣದಲ್ಲಿ ಸೃಷ್ಟಿಸಿ ದೊಡ್ಡ ಮಟ್ಟದ ಆಟೋ ಇಕೋ ಸಿಸ್ಟಮ್ ನಿರ್ಮಾಣಕ್ಕೆ ನಾಂದಿ ಹಾಡುತ್ತದೆ.


Click the Play button to hear this message in audio format

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆ ಸೃಷ್ಟಿಸುವ ಸಂಬಂಧ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಮಂಡಳಿ (FKCCI) ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕೈಗಾರಿಕೋದ್ಯಮಿಗಳ ಜತೆ ಮಹತ್ವದ ಸಭೆ ನಡೆಸಿದರು.

ನಗರದ ಹೆಚ್ ಎಂಟಿ ಭವನದಲ್ಲಿರುವ ಸಚಿವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ವಿಸ್ತರಣೆಗೆ ಇರುವ ವಿಪುಲ ಅವಕಾಶಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು.

ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಜಾಗತಿಕ ಮಟ್ಟದ ARAI (ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್‌ ಆಫ್ ಇಂಡಿಯಾ) ಪರೀಕ್ಷಾ ಕೇಂದ್ರ ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಸ್ವತಃ ನಾನೇ ಪತ್ರ ಬರೆದಿದ್ದೇನೆ. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುವ ನಿರೀಕ್ಷೆ ಇದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಈ ತರಬೇತಿ ಕೇಂದ್ರಕ್ಕೆ ಕಳೆದ ಬಜೆಟ್ ನಲ್ಲಿ 500 ಕೋಟಿ ರೂ. ಮೀಸಲಿಡಲಾಗಿದೆ. ಅಗತ್ಯಬಿದ್ದರೆ ಇನ್ನೂ 500 ಕೋಟಿ ರೂ. ಹೂಡಿಕೆ ಮಾಡಲು ಕೇಂದ್ರ ಸರ್ಕಾರ ತಯಾರಿದೆ ಎಂದು ಕೇಂದ್ರ ಸಚಿವರು ಸಭೆಯ ಗಮನಕ್ಕೆ ತಂದರು.

ಈ ಬಗ್ಗೆ ಸಚಿವರನ್ನು ಅಭಿನಂದಿಸಿದ ಕೈಗಾರಿಕೋದ್ಯಮಿಗಳು, ಇಂಥ ಕೇಂದ್ರವೊಂದು ರಾಜ್ಯಕ್ಕೆ ಅಗತ್ಯವಿದೆ. ಇದರಿಂದ ವಾಹನೋದ್ಯಮಕ್ಕೆ ಶಕ್ತಿ ಬರಲಿದೆ. ಮುಖ್ಯವಾಗಿ ಇವಿ ಉದ್ಯಮಕ್ಕೆ ದೊಡ್ಡ ಪ್ರಮಾಣದಲ್ಲಿ ಬೂಸ್ಟ್ ನೀಡಲಿದೆ ಎಂದರು.

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಸಂಶೋಧನೆ, ಉತ್ಪಾದನೆ ಹಾಗೂ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗುವುದು. ಸಾರಿಗೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಮಟ್ಟಕ್ಕೆ ಇಳಿಸಿ ಪರಿಸರ ಪೂರಕ ಸಾರಿಗೆ ವ್ಯವಸ್ಥೆ ರೂಪಿಸುವ ದೃಢ ಸಂಕಲ್ಪವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹೊಂದಿದ್ದಾರೆ. ಅವರ ಕನಸು ನನಸು ಮಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಸಚಿವರು ಹೇಳಿದರು.

ಕಂಪನಿಗಳು ಕರ್ನಾಟಕದಲ್ಲಿ ಹುಟ್ಟಿಕೊಳ್ಳುತ್ತಿವೆ, ಆದರೆ ಬೇರೆ ರಾಜ್ಯಗಳಲ್ಲಿ ಉತ್ಪಾದನೆ ಮಾಡುತ್ತಿವೆ. ಇಂಥ ಪರಿಸ್ಥಿತಿಯಿಂದ ಕರ್ನಾಟಕವನ್ನು ಹೊರತರಬೇಕಿದೆ. ಅದಕ್ಕೆ ARAI ಕೇಂದ್ರ ದೊಡ್ಡ ಮಟ್ಟದ ಕೊಡುಗೆ ನೀಡುತ್ತದೆ. ಆಟೋಮೊಬೈಲ್ ಪರೀಕ್ಷಾ ಕೇಂದ್ರ ಬರುವುದರ ಜತೆಗೆ ಆ ಮೂಲಕ ಸಂಶೋಧನೆ, ಉತ್ಪಾದನೆಗೂ ಮುಂದಿನ ದಿನಗಳಲ್ಲಿ ಅವಕಾಶಗಳು ತೆರೆದುಕೊಳ್ಳಲಿವೆ ಎಂದು ಎಂದು ಕೇಂದ್ರ ಸಚಿವರು ಒತ್ತಿ ಹೇಳಿದರು.

ಸ್ಥಳೀಯ ಮಟ್ಟದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿ ಆಗಬೇಕು ಎಂಬುದು ಪ್ರಧಾನಿಗಳ ದೂರದೃಷ್ಟಿ. ಆ ನಿಟ್ಟಿನಲ್ಲಿ ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ ಪರಿಕಲ್ಪನೆಗಳ ಅಡಿಯಲ್ಲಿ ಬೃಹತ್ ಪ್ರಮಾಣದಲ್ಲಿ ಉತ್ತೇಜನ ನೀಡುತ್ತಿದ್ದೇವೆ. ರಾಜ್ಯದಲಿ ARAI ಪರೀಕ್ಷಾ ಕೇಂದ್ರ ಸ್ಥಾಪನೆ ಆದರೆ ಸಾವಿರಾರು ಸಂಖ್ಯೆಯಷ್ಟು ಉದ್ಯೋಗ ಸೃಷ್ಟಿ ಆಗುವುದಷ್ಟೇ ಅಲ್ಲದೆ, ಪರೋಕ್ಷ ಉದ್ಯೋಗಗಳನ್ನು ಬೃಹತ್ ಪ್ರಮಾಣದಲ್ಲಿ ಸೃಷ್ಟಿಸಿ ದೊಡ್ಡ ಮಟ್ಟದ ಆಟೋ ಇಕೋ ಸಿಸ್ಟಮ್ ನಿರ್ಮಾಣಕ್ಕೆ ನಾಂದಿ ಹಾಡುತ್ತದೆ. ಹೀಗಾಗಿ ಈ ಯೋಜನೆಗೆ ರಾಜ್ಯ ಸರ್ಕಾರದ ಸಹಕಾರವನ್ನು ಕೋರಿದ್ದೇವೆ ಎಂದು ಅವರು ಹೇಳಿದರು.

ಅದೇ ರೀತಿ ಕರ್ನಾಟಕದಲ್ಲಿ ಇವಿ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿಗೂ ಕೇಂದ್ರ ಸರ್ಕಾರ ಉತ್ತೇಜನ ನೀಡುತ್ತಿದೆ. ಅತ್ಯಾಧುನಿಕ, ಸಮಗ್ರವಾದ ಇವಿ ಪೂರಕ ವ್ಯವಸ್ಥೆ ಮಾಡುವುದರಿಂದ ರಾಜ್ಯಕ್ಕೆ ಆರ್ಥಿಕ, ಉದ್ಯೋಗ ಹಾಗೂ ಉತ್ಪಾದನೆ ಕ್ಷೇತ್ರಗಳಲ್ಲಿ ಭಾರೀ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಸಚಿವರು ಪ್ರತಿಪಾದಿಸಿದರು.

ಎಫ್ ಕೆಸಿಸಿಐ ಅಧ್ಯಕ್ಷೆ ಉಮಾ ರೆಡ್ಡಿ, ಹಿರಿಯ ಉಪಾಧ್ಯಕ್ಷ ಟಿ. ಸಾಯಿರಾಂ ಪ್ರಸಾದ್, ಉಪಾಧ್ಯಕ್ಷ ಬಿ.ಪಿ. ಶಶಿಧರ್, ಗ್ರೀನ್ ಎನರ್ಜಿ ಸಮಿತಿ ಅಧ್ಯಕ್ಷ ರಮೇಶ್ ಶಿವಣ್ಣ, ಮಾಜಿ ಅಧ್ಯಕ್ಷರಾದ ಎಸ್. ಸಂಪತ್ ರಾಮನ್, ಆರ್. ಶಿವಕುಮಾರ್, ಕೆ. ಶಿವಷಣ್ಮುಗಂ, ಎಲ್. ಲಕ್ಷ್ಮಣ ಸೇರಿದಂತೆ ಕೈಗಾರಿಕೋದ್ಯಮಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

Read More
Next Story